ಹೊಸದಿಗಂತ ಡಿಜಿಟಲ್ ಡೆಸ್ಕ್:
ಭಕ್ತರು ತಮ್ಮ ಅಪಾರ ನಂಬಿಕೆ ಮತ್ತು ಭಕ್ತಿಯಿಂದ ನೀಡುವ ಕಾಣಿಕೆ ಹಣದಲ್ಲಿ ಯಾವುದೇ ರೀತಿಯ ಅಕ್ರಮ ಎಸಗುವವರನ್ನು ಸುಮ್ಮನೆ ಬಿಡುವುದಿಲ್ಲ ಎಂದು ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ತೀವ್ರ ಆಕ್ರೋಶ ಹೊರಹಾಕಿದ್ದಾರೆ. “ರಾಮಭಕ್ತರ ಅಗ್ನಿಪರೀಕ್ಷೆ ನಡೆಸಬೇಡಿ” ಎಂದು ಎಚ್ಚರಿಸಿರುವ ಅವರು, ಈ ಸೂಕ್ಷ್ಮ ಪ್ರಕರಣವನ್ನು ರಾಜಕೀಯಗೊಳಿಸಲು ಯತ್ನಿಸುತ್ತಿರುವ ವಿಪಕ್ಷಗಳ ವಿರುದ್ಧ ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದಾರೆ.
ವಿಶೇಷ ತನಿಖೆ ಚುರುಕು: ಎಂಟು ಮಂದಿ ಬಂಧನ
ಡಿಯೋರಿಯಾದಲ್ಲಿ ನಡೆದ ಸಾರ್ವಜನಿಕ ಕಾರ್ಯಕ್ರಮವೊಂದರಲ್ಲಿ ಮಾತನಾಡಿದ ಸಿಎಂ ಯೋಗಿ, ಈ ಹಗರಣದ ತನಿಖೆಗಾಗಿ ಈಗಾಗಲೇ ವಿಶೇಷ ತನಿಖಾ ತಂಡವನ್ನು (SIT) ರಚಿಸಲಾಗಿದೆ ಎಂದು ಮಾಹಿತಿ ನೀಡಿದರು. ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗಲೇ ಎಂಟು ಆರೋಪಿಗಳನ್ನು ಬಂಧಿಸಲಾಗಿದ್ದು, ಸನಾತನ ಧರ್ಮ ಹಾಗೂ ಭಕ್ತರ ಭಾವನೆಗಳಿಗೆ ಧಕ್ಕೆ ತರಲು ಯಾರಿಗೂ ಅವಕಾಶ ನೀಡುವುದಿಲ್ಲ ಎಂದು ಸ್ಪಷ್ಟಪಡಿಸಿದರು.
ವಿರೋಧ ಪಕ್ಷಗಳಿಗೆ ತೀವ್ರ ತರಾಟೆ
ಇದೇ ವೇಳೆ ರಾಮಮಂದಿರದ ವಿಚಾರವಾಗಿ ವಿಪಕ್ಷಗಳನ್ನು ತರಾಟೆಗೆ ತೆಗೆದುಕೊಂಡ ಮುಖ್ಯಮಂತ್ರಿಗಳು, “ಇಂದು ಮಂದಿರದ ಹೆಸರಲ್ಲಿ ರಾಜಕೀಯ ಮಾಡುತ್ತಿರುವವರು ಅಂದು ರಾಮನ ಅಸ್ತಿತ್ವವನ್ನೇ ಪ್ರಶ್ನಿಸಿದ್ದರು. ಸುಪ್ರೀಂ ಕೋರ್ಟ್ನಲ್ಲಿ ಮಂದಿರದ ವಿರುದ್ಧ ಸತತವಾಗಿ ವಾದ ಮಂಡಿಸಿದ್ದಲ್ಲದೆ, ರಾಮಭಕ್ತರ ಮೇಲೆ ಗುಂಡು ಹಾರಿಸಿದ್ದರು. ರಾಮನವಮಿ ಸಂದರ್ಭದಲ್ಲಿ ಗಲಭೆಗಳಿಗೆ ಕಾರಣರಾಗಿದ್ದ ಇವರ ಬಣ್ಣ ಈಗ ಬಯಲಾಗಿದೆ” ಎಂದು ವಾಗ್ದಾಳಿ ನಡೆಸಿದರು.



