ಹೊಸದಿಗಂತ ಡಿಜಿಟಲ್ ಡೆಸ್ಕ್:
ಜನಿವಾರ ಪ್ರಕರಣದ ತನಿಖೆ ಪೂರ್ಣಗೊಂಡಿದ್ದು, ಪರೀಕ್ಷಾ ಕೇಂದ್ರದ ಪ್ರಾಂಶುಪಾಲರು ಹಾಗೂ ಅಲ್ಲಿನ ಸಿಬ್ಬಂದಿ ಲೋಪ ಎಸಗಿರುವುದು ದೃಢಪಟ್ಟಿದೆ.
ಈಕುರಿತು ಜಿಲ್ಲಾಧಿಕಾರಿ ಶಿಲ್ಪಾ ಶರ್ಮಾ ಅವರು ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಕಾರ್ಯನಿರ್ವಾಹಕ ನಿರ್ದೇಶಕರಿಗೆ ವರದಿ ಸಲ್ಲಿಸಿದ್ದು, ಮುಖ್ಯ ಅಧೀಕ್ಷಕ ಚಂದ್ರಶೇಖರ ಬಿರಾದಾರ ಮತ್ತು ಸದರಿ ಕಾಲೇಜಿನ ತಪಾಸಣಾ ಸಿಬ್ಬಂದಿ, ದ್ವಿತೀಯ ದರ್ಜೆ ಸಹಾಯಕ ಸತೀಶ ಅವರು ನಿಯಮಾನುಸಾರ ಕರ್ತವ್ಯ ನಿರ್ವಹಿಸದೇ ಲೋಪ ಎಸಗಿರುವುದು ಕಂಡು ಬಂದಿದೆ. ಇವರನ್ನು ವಜಾಗೊಳಿಸಲು ಸೂಚಿಸಲಾಗಿದೆ. ಜೊತೆಗೆ ಪರೀಕ್ಷಾ ವೀಕ್ಷಕರಾಗಿದ್ದ ಔರಾದ್ ಆರ್ಎಫ್ಒ ಮೊದ್ದಸಿರ್ ಅವರು ಸರಿಯಾಗಿ ಕರ್ತವ್ಯ ನಿರ್ವಹಿಸದ ಕಾರಣ ಅವರಿಗೆ ಕಾರಣ ಕೇಳಿ ನೋಟಿಸ್ ಜಾರಿ ಮಾಡಲಾಗಿದೆ ಎಂದು ವರದಿಯಲ್ಲಿ ತಿಳಿಸಲಾಗಿದೆ.
ಬೀದರ್ನ ಸಾಯಿ ಸ್ಫೂರ್ತಿ ಕಾಲೇಜು ಪರೀಕ್ಷಾ ಕೇಂದ್ರದಲ್ಲಿ ಕೆ–ಸಿಇಟಿ ಗಣಿತ ಪರೀಕ್ಷೆ ಬರೆಯಲು ಹೋಗಿದ್ದ ವಿದ್ಯಾರ್ಥಿಗೆ ಜನಿವಾರದ ಕಾರಣಕ್ಕಾಗಿ ಪರೀಕ್ಷೆ ಬರೆಯಲು ಅವಕಾಶ ಕಲ್ಪಿಸಿರಲಿಲ್ಲ. ಘಟನೆಗೆ ತೀವ್ರ ವಿರೋಧ ವ್ಯಕ್ತವಾದ ನಂತರ ಸರ್ಕಾರ ಜಿಲ್ಲಾಧಿಕಾರಿಗೆ ತನಿಖೆ ಕೈಗೊಂಡು ವರದಿ ಸಲ್ಲಿಸಲು ಸೂಚಿಸಿತ್ತು.