ಹೊಸದಿಗಂತ ವರದಿ,ಮಂಗಳೂರು:
ಬೇರೆ ಪಕ್ಷದ ಕೆಲವು ಶಾಸಕರು ಮತ್ತು ಮುಖಂಡರು ಬಿಜೆಪಿ ಸೇರ್ಪಡೆಗೆ ಕಾತರರಾಗಿದ್ದಾರೆ. ಈ ನಿಟ್ಟಿನಲ್ಲಿ ಪಕ್ಷ ಸೂಕ್ತ ನಿರ್ಧಾರ ತೆಗೆದುಕೊಳ್ಳಲಿದೆ ಎಂದು ಮಾಜಿ ಸಚಿವ, ಸಂಸದ ಡಿ.ವಿ.ಸದಾನಂದ ಗೌಡ ಹೇಳಿದ್ದಾರೆ.
ಮಂಗಳೂರಿನಲ್ಲಿ ಭಾನುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಜೆಡಿಎಸ್ ತನ್ನ ಅಸ್ತಿತ್ವ ಕಳೆದುಕೊಳ್ಳುವ ಈ ಹಂತದಲ್ಲಿದೆ. ಅಲ್ಲಿಂದಲೇ ಬಹಳಷ್ಟು ಮಂದಿ ಬಿಜೆಪಿ ಕಡೆ ಒಲವು ತೋರಿಸುತ್ತಿದ್ದಾರೆ ಎಂದರು.
ಪಕ್ಷದ ಹಿರಿಯ ಮುಖಂಡ ಅಮಿತ್ ಶಾ ಅವರ ಮಾರ್ಗದರ್ಶನದಲ್ಲಿ ಪಕ್ಷ ಯಶಸ್ವಿಯಾಗಿ ಮುನ್ನಡೆಯಲಿದೆ. ಮುಂದಿನ ದಿನಗಳಲ್ಲಿ ಕರ್ನಾಟಕದಲ್ಲಿ ಬಿಜೆಪಿ ಮರಳಿ ಅಕಾರಕ್ಕೆ ಬರುವುದು ನಿಶ್ಚಿತ.ಪಂಚರಾಜ್ಯ ಚುನಾವಣೆ ವೇಳೆ ಉತ್ತರ ಪ್ರದೇಶ ಸೇರಿದಂತೆ ಎಲ್ಲ ಕಡೆಗಳಲ್ಲಿ ಬಿಜೆಪಿಗೆ ಹಿನ್ನಡೆಯಾಗುತ್ತದೆ ಎಂದು ಚುನಾವಣಾ ಪೂರ್ವ ಸಮೀಕ್ಷೆಗಳಲ್ಲಿ ಹೇಳಲಾಗಿತ್ತು. ಆದರೆ ಫಲಿತಾಂಶ ಬಂದಾಗ ಎಲ್ಲಿಯೂ ಬಿಜೆಪಿಗೆ ಹಿನ್ನಡೆಯಾಗಿಲ್ಲ. ಬದಲಾಗಿ ಅದಕ್ಕಿಂತ ಶಕ್ತಿಯುತವಾಗಿ ಹೊರ ಹೊಮ್ಮುವಂತಾಗಿದೆ. ರೈತರ ಹೋರಾಟ ಸೇರಿದಂತೆ ಪ್ರತಿಭಟನೆಗಳು ಇದ್ದರೂ ಅದನ್ನು ನಿಭಾಯಿಸಿದ ರೀತಿ ಶ್ಲಾಘನೀಯ ಎಂದು ಡಿವಿಎಸ್ ಹೇಳಿದರು.