April 30, 2026
Thursday, April 30, 2026
spot_img

ಜಾಗತಿಕ ತೈಲ ಬಿಕ್ಕಟ್ಟಿನ ನಡುವೆ ನ್ಯಾಯಾಂಗ ಹಸ್ತಕ್ಷೇಪ ಅಸಾಧ್ಯ: ಎಲ್‌ಪಿಜಿ ವಿವಾದಕ್ಕೆ ತೆರೆ ಎಳೆದ ಹೈಕೋರ್ಟ್

ಹೊಸದಿಗಂತ ಡಿಜಿಟಲ್ ಡೆಸ್ಕ್:

ಬೆಂಗಳೂರಿನ ಹೊಟೇಲ್ ಗಳಿಗೆ ಎಲ್‌ಪಿಜಿ ಸಿಲಿಂಡರ್‌ಗಳ ಪೂರೈಕೆಯಲ್ಲಿ ತಾರತಮ್ಯವಾಗುತ್ತಿದೆ ಎಂದು ಆರೋಪಿಸಿ ಹೊಟೇಲ್ ಅಸೋಸಿಯೇಷನ್ ನ್ಯಾಯಾಲಯದ ಮೊರೆ ಹೋಗಿತ್ತು. “ನೆರೆರಾಜ್ಯಗಳಾದ ತಮಿಳುನಾಡು ಮತ್ತು ಕೇರಳಕ್ಕೆ ಹೋಲಿಸಿದರೆ ಕರ್ನಾಟಕಕ್ಕೆ ನೀಡುತ್ತಿರುವ ಸಿಲಿಂಡರ್‌ಗಳ ಸಂಖ್ಯೆ ತೀರಾ ಕಡಿಮೆ” ಎಂದು ಅಸೋಸಿಯೇಷನ್ ಪರ ವಕೀಲರು ವಾದಿಸಿದ್ದರು.

ಇದಕ್ಕೆ ಪ್ರತಿಕ್ರಿಯಿಸಿದ ಕೇಂದ್ರ ಸರ್ಕಾರದ ಪರ ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ, “ತೈಲ ಮತ್ತು ಅನಿಲ ಪೂರೈಕೆ ಸಂಪೂರ್ಣವಾಗಿ ನಮ್ಮ ನಿಯಂತ್ರಣದಲ್ಲಿಲ್ಲ. ಅಂತರಾಷ್ಟ್ರೀಯ ಮಟ್ಟದಲ್ಲಿ ಯುದ್ಧದ ಪರಿಸ್ಥಿತಿಯಿದ್ದು, ಸರ್ಕಾರವು ಪೂರೈಕೆ ಸುಧಾರಿಸಲು ಪ್ರಾಮಾಣಿಕ ಪ್ರಯತ್ನ ಮಾಡುತ್ತಿದೆ” ಎಂದು ಸ್ಪಷ್ಟಪಡಿಸಿದರು.

ವಾದ-ಪ್ರತಿವಾದ ಆಲಿಸಿದ ನ್ಯಾಯಮೂರ್ತಿ ಸಚಿನ್ ಶಂಕರ್ ಮಗದುಮ್ ಅವರಿದ್ದ ಪೀಠವು, “ಕೇಂದ್ರ ಸರ್ಕಾರದ ಪ್ರಯತ್ನದ ಮೇಲೆ ನಂಬಿಕೆಯಿಡಬೇಕು. ಯುದ್ಧದಂತಹ ಜಾಗತಿಕ ಬಿಕ್ಕಟ್ಟಿನ ಸಂದರ್ಭದಲ್ಲಿ ನ್ಯಾಯಾಲಯ ಹಸ್ತಕ್ಷೇಪ ಮಾಡಲು ಸಾಧ್ಯವಿಲ್ಲ. ಹೋಟೆಲ್ ಸಂಘಟನೆಯೇ ಹಡಗು ಕಳುಹಿಸಿದರೂ ಹರ್ಮುಜ್‌ನಿಂದ ಅನಿಲ ತರಲು ಸಾಧ್ಯವೇ?” ಎಂದು ಪ್ರಶ್ನಿಸಿ ಅರ್ಜಿಯನ್ನು ವಿಲೇವಾರಿ ಮಾಡಿತು.

Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !