ಹೊಸದಿಗಂತ ಡಿಜಿಟಲ್ ಡೆಸ್ಕ್:
ಬೆಂಗಳೂರು: ದೇವನಹಳ್ಳಿಯ ಆವತಿಯಲ್ಲಿ ಆಯೋಜಿಸಿದ್ದ ವಿಕಸಿತ ಭಾರತ ಸಂಕಲ್ಪ ಯಾತ್ರೆಯನ್ನು ಇಂದು ಕೇಂದ್ರ ಸಚಿವ ಜ್ಯೋತಿರಾದಿತ್ಯ ಸಿಂಧಿಯಾ ಅವರು ಉದ್ಘಾಟನೆ ಮಾಡಿದರು.
ದೇಶದ ಜನರ ಆರ್ಥಿಕ ಸ್ಥಿತಿ ಸುಧಾರಿಸುವ ಸದುದ್ದೇಶ ಹಾಗೂ 2047 ರ ಹೊತ್ತಿಗೆ ಭಾರತವು ಆರ್ಥಿಕವಾಗಿ ಸದೃಢವಾಗಬೇಕೆಂಬ ಸಂಕಲ್ಪದೊಂದಿಗೆ ಹೆಮ್ಮೆಯ ಪ್ರಧಾನಿ ನರೇಂದ್ರ ಮೋದಿ ಅವರು ‘ವಿಕಸಿತ ಭಾರತ ಸಂಕಲ್ಪ ಯಾತ್ರೆ’ ಬೃಹತ್ ಅಭಿಯಾನವನ್ನು ಆರಂಭಿಸಿದ್ದಾರೆ ಎಂದು ಸಿಂಧಿಯಾ ಹೇಳಿದರು.
ಕೇಂದ್ರ ಸರಕಾರ ಅನುಷ್ಠಾನಗೊಳಿಸಿದ ಮುದ್ರಾ, ಜನಧನ್, ಪಿ.ಎಂ.ವಿಶ್ವಕರ್ಮ, ಉಜ್ವಲ ಸೇರಿದಂತೆ ವಿವಿಧ ಯೋಜನೆಗಳ ಮಾಹಿತಿಯನ್ನು ಎಲ್ಇಡಿ ವಾಹನಗಳ ಮೂಲಕ ಎಲ್ಲಾ ಗ್ರಾಮ ಪಂಚಾಯಿತಿ ಹಾಗೂ ನಗರ ಪ್ರದೇಶದ ವಾರ್ಡ್ಗಳಲ್ಲಿ ಸಂಚರಿಸಿ ತಿಳಿಸಲಾಗುವುದು. ಜನರಿಗೆ ಜಾಗೃತಿ ಮೂಡಿಸುವ ಮೂಲಕ ಸರ್ಕಾರದ ಯೋಜನೆಗಳ ಲಾಭ ಪಡೆದ ಫಲಾನುಭವಿಗಳನ್ನು ಒಗ್ಗೂಡಿಸಿ, ಈ ಯೋಜನೆಗಳಿಂದ ವಂಚಿತರಾದ ಫಲಾನುಭವಿಗಳಿಗೆ ಅದರ ಲಾಭ ಸಿಗುವಂತೆ ಮಾಡುವ ಈ ಕಾರ್ಯಕ್ರಮವನ್ನು ಯಶಸ್ವಿಗೊಳಿಸಲು ಕೋರಲಾಯಿತು. ಅಧಿಕಾರಿಗಳು ಈ ಕುರಿತು ತಿಳಿಸಿ ಸಾರ್ವಜನಿಕರು ಸದುಪಯೋಗ ಪಡೆದುಕೊಳ್ಳಲು ಮನವಿ ಮಾಡಲಾಯಿತು.
ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಅವರು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.
ಎಸ್.ಸಿ.ಮೋರ್ಚಾ ರಾಜ್ಯಾಧ್ಯಕ್ಷ ಛಲವಾದಿ ನಾರಾಯಣಸ್ವಾಮಿ, ಗ್ರಾಮ ಪಂಚಾಯಿತಿ ಹಾಗೂ ಸ್ಥಳೀಯ ಸಂಸ್ಥೆಗಳ ಚುನಾಯಿತ ಪ್ರತಿನಿಧಿಗಳು ಹಾಗೂ ಅಧಿಕಾರಿಗಳು ಉಪಸ್ಥಿತರಿದ್ದರು.