ತಲೆಕೆಳಗಾದ ರಾಷ್ಟ್ರಧ್ವಜ: ಸಚಿವ ಕೋವಿಲ್ ರಾಜೀನಾಮೆಗೆ ಕೆ.ಸುರೇಂದ್ರನ್ ಆಗ್ರಹ

ದಿಗಂತ ವರದಿ ಕಾಸರಗೋಡು:

ಗಣರಾಜ್ಯೋತ್ಸವದ ಅಂಗವಾಗಿ ಕಾಸರಗೋಡಿನಲ್ಲಿ ರಾಷ್ಟ್ರಧ್ವಜವನ್ನು ತಲೆಕೆಳಗಾಗಿ ಹಾರಿಸಿದ ಬಂದರು, ಪ್ರಾಚ್ಯವಸ್ತು ಇಲಾಖೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಅಹಮ್ಮದ್ ದೇವರ್ ಕೋವಿಲ್ ರಾಜೀನಾಮೆ ನೀಡಬೇಕು ಎಂದು ಬಿಜೆಪಿ ಕೇರಳ ರಾಜ್ಯಾಧ್ಯಕ್ಷ ಕೆ.ಸುರೇಂದ್ರನ್ ಒತ್ತಾಯಿಸಿದ್ದಾರೆ.
ಕಾಸರಗೋಡು ಮುನ್ಸಿಪಲ್ ಸ್ಟೇಡಿಯಂನಲ್ಲಿ ಬುಧವಾರ ಬೆಳಗ್ಗೆ ನಡೆದ ಗಣರಾಜ್ಯೋತ್ಸವದ ಸಂದರ್ಭದಲ್ಲಿ ಧ್ವಜವನ್ನು ತಲೆಕೆಳಗಾಗಿ ಹಾರಿಸಲಾಗಿತ್ತಾದರೂ ಅದು ಸಚಿವರ ಅಥವಾ ಇತರ ಅಧಿಕಾರಿಗಳ ಗಮನಕ್ಕೆ ಬಂದಿಲ್ಲ ಎಂದು ಹೇಳಿದರೆ ನಂಬಲು ಸಾಧ್ಯವಿಲ್ಲ. ಧ್ವಜವನ್ನು ತಲೆಕೆಳಗಾಗಿ ಹಾರಿಸಿದ ನಂತರ ಸಚಿವ ಅಹಮ್ಮದ್ ದೇವರ್ ಕೋವಿಲ್ ಧ್ವಜವಂದನೆ ಸ್ವೀಕರಿಸಿದರು. ಇದಾದ ಬಳಿಕ ಧ್ವಜವನ್ನು ತಲೆಕೆಳಗಾಗಿ ಹಾರಿಸಲಾಗಿದೆ ಎಂದು ಮಾಧ್ಯಮ ಪ್ರತಿನಿಧಿಗಳು ಗಮನಕ್ಕೆ ತಂದರು.
ಇಂತಹ ತಪ್ಪಾದರೂ ಸಚಿವರಿಗೆ ಹಾಗೂ ಇತರ ಅಧಿಕಾರಿಗಳಿಗೆ ತಪ್ಪಿನ ಅರಿವಾಗದಿರುವುದು ವಿಪರ್ಯಾಸ. ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಭಾಗವಹಿಸಿದ್ದ ಕಾರ್ಯಕ್ರಮದಲ್ಲಿ ರಾಷ್ಟ್ರಧ್ವಜಕ್ಕೆ ಅಗೌರವ ತೋರಿದ ಈ ಘಟನೆಯ ಬಗ್ಗೆ ಡಿಜಿಪಿ ತನಿಖೆ ನಡೆಸಬೇಕು ಎಂದು ಕೆ.ಸುರೇಂದ್ರನ್ ಕಲ್ಲಿಕೋಟೆಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡುತ್ತಾ ಆಗ್ರಹಿಸಿದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!