ಹೊಸದಿಗಂತ ಆನ್ಲೈನ್ ಡೆಸ್ಕ್:
ರಾಜಸ್ತಾನದ ಉದಯಪುರದಲ್ಲಿ ದುಷ್ಕರ್ಮಿಗಳಿಂದ ಶಿರಶ್ಚೇದನಕ್ಕೊಳಗಾದ ಕನ್ಹಯ್ಯ ಲಾಲ್ಗೆ ಈ ಹಿಂದೆಯೇ ಜೀವಬೆದರಿಕೆ ಕರೆಗಳು ಬರುತ್ತಿದ್ದವು ಎಂಬ ಅಂಶ ಬಹಿರಂಗಗೊಂಡಿದೆ.
ಸಾಮಾಜಿಕ ಮಾಧ್ಯಮದಲ್ಲಿ ವಿವಾದಾತ್ಮಕ ಪೋಸ್ಟ್ ಹಂಚಿಕೊಂಡಿದ್ದಕ್ಕಾಗಿ ಕನ್ಹಯ್ಯ ಲಾಲ್ ವಿರುದ್ಧ ಜೂ.೧೧ ರಂದು ಎಫ್ಐಆರ್ ದಾಖಲಿಸಿಕೊಂಡು ಅವರನ್ನು ಬಂಧಿಸಲಾಗಿತ್ತು. ಜೂ.೧೫ರಂದು ಕನ್ಹಯ್ಯ ಜಾಮೀನಿನ ಮೇಲೆ ಹೊರಬಂದಿದ್ದು, ಅದಾದ ಬಳಿಕ ಅವರಿಗೆ ಜೀವ ಬೆದರಿಕೆ ಕರೆಗಳು ಬರುತ್ತಿದ್ದವು ಎನ್ನಲಾಗಿದೆ. ಈ ಬಗ್ಗೆ ಅವರು ಪೊಲೀಸರಿಗೂ ದೂರು ನೀಡಿದ್ದರು. ಬಳಿಕ ಈ ಬಗ್ಗೆ ಸ್ಥಳೀಯ ಠಾಣಾಧಿಕಾರಿ ದೂರುದಾರರು ಮತ್ತು ಎರಡೂ ಸಮುದಾಯದ ಕೆಲವರನ್ನು ಠಾಣೆಗೆ ಕರೆಸಿ ವಿಷಯ ಇತ್ಯರ್ಥಪಡಿಸಿದ್ದರು. ಇದೀಗ ಬೆದರಿಕೆ ಕರೆಗಳ ಬಗ್ಗೆ ಕನ್ಹಯ್ಯ ಲಾಲ್ ದೂರು ನೀಡಿದ್ದರೂ ಅದನ್ನು ಎಎಸ್ಐ ಗಂಭೀರವಾಗಿ ಪರಿಗಣಿಸಿರಲಿಲ್ಲ ಎಂದು ಆರೋಪಿಸಲಾಗಿದೆ.
ಧನ್ ಮಂಡಿ ಪ್ರದೇಶದ ಟೈಲರ್ ಕನ್ಹಯ್ಯ ಲಾಲ್ ಅವರನ್ನು ಮಂಗಳವಾರ ಮಧ್ಯಾಹ್ನ ಇಬ್ಬರು ದುಷ್ಕರ್ಮಿಗಳು ಕತ್ತು ಸೀಳಿ ಕೊಲೆ ಮಾಡಿದ್ದರು. ಬಳಿಕ ಅದರ ವಿಡಿಯೊವನ್ನು ಸಾಮಾಜಿಕ ಮಾಧ್ಯಮದಲ್ಲಿ ಹರಿಬಿಟ್ಟಿದ್ದರು.
ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ