ಹೊಸ ದಿಗಂತ ಡಿಜಿಟಲ್ ಡೆಸ್ಕ್:
ಮೆಟಾದಲ್ಲಿ ಕನ್ನಡ ವಿಷಯದಲ್ಲಿ ಸ್ವಯಂ ಅನುವಾದದಿಂದ ಅನೇಕ ತಪ್ಪುಗಳು ಉಂಟಾಗುತ್ತಿದ್ದು, ಈ ಬಗ್ಗೆ ಸಿಎಂ ಸಿದ್ದರಾಮಯ್ಯ ಕಚೇರಿ ಕಳವಳ ವ್ಯಕ್ತಪಡಿಸಿದೆ. ಈ ಕುರಿತಾಗಿ ಮಾಧ್ಯಮ ಸಲಹೆಗಾರ ಕೆವಿ ಪ್ರಭಾಕರ್ ಮೆಟಾಗೆ ಪತ್ರ ಬರೆದಿದ್ದು, ಸರಿಯಾದ ರೀತಿಯಲ್ಲಿ ಅನುವಾದಿಸುವಂತೆ ಒತ್ತಾಯಿಸಿದ್ದಾರೆ.
ಮೆಟಾದಲ್ಲಿ ಕನ್ನಡದಲ್ಲಿ ಪೋಸ್ಟ್ ಮಾಡಲಾಗಿರುವ ವಿಷಯವನ್ನು ಇತರೆ ಭಾಷೆಗಳಿಗೆ ತರ್ಜುಮೆ ಮಾಡಿದಾಗ ಮೆಟಾದ ಸ್ವಯಂ ಅನುವಾದ ವ್ಯವಸ್ಥೆಯೂ ತಪ್ಪು ಭಾಷಾಂತರವನ್ನು ಒದಗಿಸುತ್ತಿದೆ. ಇದರಿಂದಾಗಿ ಸಂದೇಶದ ಮೂಲ ಅರ್ಥವೇ ಬದಲಾಗಿ, ಜನರಲ್ಲಿ ಗೊಂದಲ ಮತ್ತು ತಪ್ಪು ತಿಳುವಳಿಕೆಗಳು ಉಂಟಾಗುತ್ತಿವೆ. ಹೀಗಾಗಿ ಕನ್ನಡ ವಿಷಯಕ್ಕಾಗಿ ಸ್ವಯಂ-ಅನುವಾದ ವ್ಯವಸ್ಥೆಯನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸುವಂತೆ ಮೆಟಾಗೆ ಪತ್ರ ಬರೆಯಲಾಗಿದೆ.
ಮೆಟಾ ವೇದಿಕೆಗಳಲ್ಲಿ ಹಂಚಿಕೊಂಡ ಕನ್ನಡ ವಿಷಯವನ್ನು ಸ್ವಯಂ ಅನುವಾದದ ಮೂಲಕ ದೋಷಪೂರಿತ ಭಾಷಾಂತರವನ್ನು ಒದಗಿಸುತ್ತಿದೆ. ಇದು ಮೂಲ ಅರ್ಥವನ್ನು ವಿರೂಪಗೊಳಿಸುತ್ತಿದೆ. ಆ ಮೂಲಕ ಬಳಕೆದಾರರನ್ನು ದಾರಿ ತಪ್ಪಿಸುತ್ತಿದೆ. ಹೀಗಾಗಿ ಜವಾಬ್ದಾರಿಯುತವಾಗಿ ಕಾರ್ಯನಿರ್ವಹಿಸುವಂತೆ ಒತ್ತಾಯಿಸಲಾಗಿದೆ.
ವಿಶೇಷವಾಗಿ ಸಾರ್ವಜನಿಕ ಸಂವಹನಗಳು, ಅಧಿಕೃತ ಹೇಳಿಕೆಗಳು ಅಥವಾ ಮುಖ್ಯಮಂತ್ರಿ ಮತ್ತು ಸರ್ಕಾರದಿಂದ ಬರುವ ಪ್ರಮುಖ ಸಂದೇಶಗಳನ್ನು ತಪ್ಪಾಗಿ ಅನುವಾದಿಸಲಾಗುತ್ತಿದೆ ಎಂದು ಪತ್ರದಲ್ಲಿ ಉಲ್ಲೇಖಿಸಲಾಗಿದೆ.
ಕನ್ನಡ ಮತ್ತು ಇಂಗ್ಲಿಷ್ ನಡುವಿನ ಅನುವಾದಗಳ ಗುಣಮಟ್ಟ ಮತ್ತು ಸಂದರ್ಭೋಚಿತ ನಿಖರತೆಯನ್ನು ಹೆಚ್ಚಿಸಲು ಅರ್ಹ ಕನ್ನಡ ಭಾಷಾ ತಜ್ಞರು ಮತ್ತು ಭಾಷಾ ವೃತ್ತಿಪರರಿಂದ ಮಾಹಿತಿ ಪಡೆದುಕೊಳ್ಳುವಂತೆ ರಾಜ್ಯ ಸಿಎಂ ಕಚೇರಿ ಸಲಹೆ ನೀಡಿದೆ.