ಹೊಸ ದಿಗಂತ ಡಿಜಿಟಲ್ ಡೆಸ್ಕ್:
ರಾಷ್ಟ್ರೀಯ ಹೆದ್ದಾರಿ 66ರ ಮುಲ್ಕಿ ಸಮೀಪದ ಕಾರ್ನಾಡು ಬೈಪಾಸ್ ಬಳಿ ಸರಣಿ ಅಪಘಾತ ನಡೆದಿದ್ದು ಸ್ಕೂಟರ್ ಸವಾರ ಗಂಭೀರ ಗಾಯಗೊಂಡು ಸಾವನ್ನಪ್ಪಿದ್ದಾರೆ.
ಮೃತ ಸ್ಕೂಟರ್ ಸವಾರನನ್ನು ನಿಡ್ಡೋಡಿ ಮುಚ್ಚೂರು ಬಳಿಯ ನಿವಾಸಿ ಮೋಹನ್ ಗೌಡ (50) ಎಂದು ಗುರುತಿಸಲಾಗಿದ್ದು , ಸಹಸವಾರ ಬಾಲಕ ಚರಣರಾಜ್ ಅಲ್ಪಸ್ವಲ್ಪ ಗಾಯಗಳೊಂದಿಗೆ ಪಾರಾಗಿದ್ದಾರೆ.
ರಾಷ್ಟ್ರೀಯ ಹೆದ್ದಾರಿ ಉಡುಪಿ ಕಡೆ ಯಿಂದ ಮಂಗಳೂರು ಕಡೆಗೆ ಹೋಗುತ್ತಿದ್ದ ಈಕೋ ಕಾರು ಕಾರ್ನಾಡ್ ಬೈಪಾಸ್ ಜಂಕ್ಷನ್ ಬಳಿ ತಲುಪುತ್ತಿದ್ದಂತೆ ಏಕಾಏಕಿ ಚಿತ್ರಾಪು ಒಳ ರಸ್ತೆಯಿಂದ ಕಾರ್ನಾಡು ಒಳಪೇಟೆಗೆ ಹೆದ್ದಾರಿ ಕ್ರಾಸ್ ಮಾಡುತ್ತಿದ್ದ ಸ್ಕೂಟರ್ಗೆ ಡಿಕ್ಕಿ ಹೊಡೆದಿದೆ.
ಈ ಸಂದರ್ಭ ಈಕೋ ವಾಹನದ ಚಾಲಕ ಅಪಘಾತ ತಪ್ಪಿಸಲು ಯತ್ನಿಸಿದ್ದರೂ ಫಲಕಾರಿಯಾಗದೆ ಸ್ಕೂಟರ್ಗೆ ಡಿಕ್ಕಿ ಹೊಡೆದು ಬಳಿಕ ಹೆದ್ದಾರಿ ಬದಿ ನಿಲ್ಲಿಸಿದ ನವಯುಗ ಕಂಪನಿಯ ಹೈವೇ ಪೆಟ್ರೋಲ್ ವಾಹನಕ್ಕೆ ಡಿಕ್ಕಿ ಹೊಡೆದಿದ್ದು ಸರಣಿ ಅಪಘಾತ ಸಂಭವಿಸಿದೆ.
ಅಪಘಾತದಿಂದ ಮೃತಪಟ್ಟ ಮೋಹನ್ ಗೌಡ ಚಿತ್ರಾಪು ಶಾಂಭವಿ ನದಿಯಲ್ಲಿ ಮೀನು ಹಿಡಿದು ವಾಪಸು ಸ್ಕೂಟರ್ನಲ್ಲಿ ತಮ್ಮ ಊರಾದ ನಿಡ್ಡೋಡಿ ಮುಚ್ಚೂರು ಕಡೆಗೆ ಹೋಗುತ್ತಿದ್ದರು ಎನ್ನಲಾಗಿದೆ.