ರಾಜ್ಯಕ್ಕೆ ಮತ್ತೆ ರಾಹುಲ್​ ಗಾಂಧಿ: ಇಂದು ಹಾಸನ, ಚಾಮರಾಜನಗರದಲ್ಲಿ ಮತಬೇಟೆ

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌

ರಾಜ್ಯ ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ರಾಜ್ಯಕ್ಕೆ ಮತ್ತೊಮ್ಮೆ ಕಾಂಗ್ರೆಸ್​ ನಾಯಕ ರಾಹುಲ್ ಗಾಂಧಿ ಆಗಮಿಸುತ್ತಿದ್ದಾರೆ. ಇಂದು ಹಾಸನ ಮತ್ತು ಚಾಮರಾಜನಗರ ಜಿಲ್ಲೆಗಳಲ್ಲಿ ಇಬ್ಬರು ಕೈ ಅಭ್ಯರ್ಥಿಗಳ ಪರ ಪ್ರಚಾರ ನಡೆಸಲಿದ್ದಾರೆ.

ಭಾರತ್ ಜೋಡೋ ಪಾದಯಾತ್ರೆ ಬಳಿಕ ಜಿಲ್ಲೆಗೆ ಭೇಟಿ ನೀಡುತ್ತಿರುವ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಯವರು ಇಂದು ಮಧ್ಯಾಹ್ನ 12:30ಕ್ಕೆ ಅರಸೀಕೆರೆಗೆ ಆಗಮಿಸಿ ಕಾಂಗ್ರೆಸ್‌ ಅಭ್ಯರ್ಥಿ ಕೆ.ಎಂ ಶಿವಲಿಂಗೇಗೌಡ ಪರ ಪ್ರಚಾರ ಕೈಗೊಳ್ಳಲಿದ್ದಾರೆ. ಅರಸೀಕೆರೆ ಪಟ್ಟಣದ ತಾಲೂಕು ಕ್ರೀಡಾಂಗಣದಲ್ಲಿ ಆಯೋಜಿಸಿರುವ ಬೃಹತ್‌ ಬಹಿರಂಗ ಸಭೆಯನ್ನುದ್ದೇಶಿಸಿ ಮಾತನಾಡಲಿದ್ದಾರೆ.
ಕಾಂಗ್ರೆಸ್‌ ರಾಜ್ಯ ಹಾಗೂ ಜಿಲ್ಲೆಯ ಹಲವು ನಾಯಕರು ಕಾರ್ಯಕ್ರಮದಲ್ಲಿ ಭಾಗಿಯಾಗಲಿದ್ದಾರೆ.

ಚಾಮರಾಜನಗರದಲ್ಲಿ ಇಂದು ಕಾಂಗ್ರೆಸ್‌ನ ಬೃಹತ್‌ ಸಮಾವೇಶ ನಡೆಯಲಿದ್ದು, ಅದರಲ್ಲಿ ರಾಹುಲ್‌ ಗಾಂಧಿ ಹಾಗೂ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಭಾಗವಹಿಸಲಿದ್ದಾರೆ. ಇಂದು ಮಧ್ಯಾಹ್ನ 3:30ಕ್ಕೆ ನಗರದ ರೇಷ್ಮೆಗೂಡು ಮಾರುಕಟ್ಟೆ ಸಮೀಪದ ಆವರಣದಲ್ಲಿ ನಡೆಯುವ ಸಮಾವೇಶದಲ್ಲಿ ಪಾಲ್ಗೊಳ್ಳಲಿದ್ದಾರೆ.

ಶಾಸಕ ಪುಟ್ಟರಂಗಶೆಟ್ಟಿ ಪರ ಮತಯಾಚನೆ ಮಾಡಲು ಕೈ ಪಡೆ ಸಜ್ಜಾಗಿದೆ. ಬಿಜೆಪಿಯಿಂದ ವಿ. ಸೋಮಣ್ಣ ಅವರು ಸ್ಪರ್ಧಿಸಿರುವ ಕಾರಣಕ್ಕೆ ಈ ಕ್ಷೇತ್ರವನ್ನು ಕಾಂಗ್ರೆಸ್ ಪ್ರತಿಷ್ಠೆಯಾಗಿ ಪರಿಗಣಿಸಿದೆ.

ಸಮಾವೇಶ ಹಿನ್ನೆಲೆ ಸಿಆರ್ ಪಿಎಫ್ ಹಾಗೂ ಜಿಲ್ಲಾ ಪೊಲೀಸ್ ವತಿಯಿಂದ ಬಿಗಿ ಭದ್ರತೆ ಆಯೋಜಿಸಲಾಗಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!