ಹೊಸದಿಗಂತ ಡಿಜಿಟಲ್ ಡೆಸ್ಕ್:
ಕರ್ನಾಟಕ- ಮಹಾರಾಷ್ಟ್ರ ಗಡಿವಿವಾದಕ್ಕೆ ಸಂಬಂಧಪಟ್ಟಂತೆ ಮಾತುಕತೆಯ ಮೂಲಕ ಬಗೆಹರಿಸಿಕೊಳ್ಳೋಣ ಎಂದ ಮಹಾರಾಷ್ಟ್ರ ಸಿಎಂ ಏಕನಾಥ್ ಶಿಂಧೆ ಹೇಳಿಕೆಯನ್ನು ಗಮನಿಸಿದ್ದೇನೆ ಎಂದು ಸಿಎಂ ಬಸವರಾಜ ಬೊಮ್ಮಾಯಿ ಹೇಳಿದರು.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸುಪ್ರೀಂ ಕೋರ್ಟ್ನಲ್ಲಿ ವಾದ ಮಂಡಿಸಲು ನಾವು ಸಿದ್ಧತೆಯನ್ನು ಮಾಡಿಕೊಂಡಿದ್ದೇವೆ. ಈ ಬಗ್ಗೆ ಸರ್ವಪಕ್ಷ ಸಭೆಯಲ್ಲಿಯೇ ನಿರ್ಧರಿಸಿಯಾಗಿತ್ತು. ಮತ್ತೊಮ್ಮೆ ಎಲ್ಲರನ್ನೂ ಕರೆದು ಚರ್ಚಿಸಿ ತೀರ್ಮಾನ ಕೈಗೊಳ್ಳುತ್ತೇವೆ.ಆದರೆ, ನಮಗೆ ವಾದ ಮಾಡುವ ಉದ್ದೇಶವೇ ಇದೆ ಎಂದು ಸಿಎಂ ಹೇಳಿದರು.
ಇಡೀ ಗಡಿ ವಿಚಾರವೇ ಮುಗಿದು ಹೋಗಿದೆ. ಜತ್ ತಾಲೂಕು ಕರ್ನಾಟಕಕ್ಕೆ ಸೇರುವ ಬಗ್ಗೆ ಅಲ್ಲಿನ ಗ್ರಾಮ ಪಂಚಾಯಿತಿಗಳೇ ನಿರ್ಣಯ ಮಾಡಿವೆ. ಇವೆಲ್ಲ ಸುಪ್ರೀಂ ಕೋರ್ಟ್ ಮುಂದೆ ವಾದ ಮಂಡನೆ ವೇಳೆ ಬರಲಿದೆ ಎಂದು ಸಿಎಂ ಬೊಮ್ಮಾಯಿ ಉತ್ತರಿಸಿದರು.
ಇತ್ತ ಮಹಾರಾಷ್ಟ್ರ ಮುಖ್ಯಮಂತ್ರಿ ಏಕನಾಥ ಶಿಂಧೆ, ಗಡಿ ವಿವಾದವನ್ನು ಮಾತುಕತೆ ಮೂಲಕ ಬಗೆಹರಿಸಿಕೊಳ್ಳಬೇಕೆಂಬುದು ನಮ್ಮ ನಿಲುವಾಗಿದೆ. ಈ ಕುರಿತು ನಾವು ಈಗಾಗಲೇ ಸಭೆ ನಡೆಸಿದ್ದೇವೆ. ಈ ಹಳೆಯ ವಾದವೇನಿದೆ ಅದು ನ್ಯಾಯಾಲಯದ ಮುಂದಿದೆ. ಸುಪ್ರೀಂ ಕೋರ್ಟ್ನಲ್ಲಿ ಕಾನೂನು ಹೋರಾಟ ನಡೆಯುತ್ತಿದೆ. ಆದರೆ, ಇದರ ಜತೆ ಜತೆಗೆ ಈ ವಿಷಯ ಮಾತುಕತೆ ಮೂಲಕ ಬಗೆಹರಿಯಬೇಕು. ಇದು ಮಹಾರಾಷ್ಟ್ರ ಸರ್ಕಾರದ ನಿಲುವಾಗಿದೆ ಎಂದು ಹೇಳಿದ್ದಾರೆ.