ಹೊಸದಿಗಂತ ಡಿಜಿಟಲ್ ಡೆಸ್ಕ್:
ರಾಜ್ಯಾದ್ಯಂತ ಸುರಿಯುತ್ತಿರುವ ಭಾರೀ ಮಳೆಯಿಂದ ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಪ್ರವಾಹದ ಆತಂಕ ಹೆಚ್ಚಾಗಿದೆ. ಜಲಾಶಯಗಳಿಗೆ ಭಾರೀ ಪ್ರಮಾಣದಲ್ಲಿ ನೀರು ಹರಿದು ಬರುತ್ತಿದ್ದು, ಹಲವು ಅಣೆಕಟ್ಟುಗಳು ಭರ್ತಿಯ ಹಂತ ತಲುಪಿವೆ. ನದಿಗಳು ಅಪಾಯಮಟ್ಟ ಮೀರಿ ಹರಿಯುತ್ತಿರುವ ಪರಿಣಾಮ ತಗ್ಗು ಪ್ರದೇಶಗಳು ಜಲಾವೃತವಾಗಿದ್ದು, ರಸ್ತೆ ಸಂಪರ್ಕ ಮತ್ತು ಸಂಚಾರಕ್ಕೂ ಅಡಚಣೆ ಉಂಟಾಗಿದೆ.
ಜಲಾಶಯಗಳಿಗೆ ಹೆಚ್ಚಿದ ಒಳಹರಿವು
ಶಿವಮೊಗ್ಗ ಜಿಲ್ಲೆಯ ಶಿಕಾರಿಪುರ ತಾಲೂಕಿನ ಅಂಜನಾಪುರ ಜಲಾಶಯ ಕುಮುದ್ವತಿ ನದಿಯ ಒಳಹರಿವಿನಿಂದ ಸಂಪೂರ್ಣ ಭರ್ತಿಯಾಗಿದೆ. 1.82 ಟಿಎಂಸಿ ಸಾಮರ್ಥ್ಯದ ಈ ಜಲಾಶಯದಲ್ಲಿ ನೀರಿನ ಮಟ್ಟ ಗರಿಷ್ಠ ಮಟ್ಟ ತಲುಪಿದೆ. ಹಾಸನ ಜಿಲ್ಲೆಯ ಹೇಮಾವತಿ ಜಲಾಶಯಕ್ಕೂ ಕಳೆದ ಎರಡು ದಿನಗಳಲ್ಲಿ ಭಾರೀ ಪ್ರಮಾಣದ ನೀರು ಹರಿದು ಬಂದಿದೆ. ಪ್ರಸ್ತುತ ಜಲಾಶಯಕ್ಕೆ 12,859 ಕ್ಯೂಸೆಕ್ ಒಳಹರಿವು ದಾಖಲಾಗಿದ್ದು, ಮುನ್ನೆಚ್ಚರಿಕೆ ಕ್ರಮವಾಗಿ 500 ಕ್ಯೂಸೆಕ್ ನೀರನ್ನು ಹೊರಬಿಡಲಾಗುತ್ತಿದೆ.

ಮಳೆ ಪರಿಣಾಮ ರೈಲು ಹಾಗೂ ರಸ್ತೆ ಸಂಚಾರಕ್ಕೆ ತೊಂದರೆ
ಸಕಲೇಶಪುರ ತಾಲೂಕಿನ ಎಡಕುಮಾರಿ–ಶಿರವಾಗಿಲು ನಡುವೆ ರೈಲು ಹಳಿಯ ಮೇಲೆ ಕುಸಿದ ಮಣ್ಣಿನ ತೆರವು ಕಾರ್ಯ ಮುಂದುವರಿದಿದೆ. ಮಳೆ ನಿಲ್ಲದ ಕಾರಣ ಕಾಮಗಾರಿ ವಿಳಂಬವಾಗಿದ್ದು, ಕೆಲವು ರೈಲುಗಳ ಸಂಚಾರವನ್ನು ತಾತ್ಕಾಲಿಕವಾಗಿ ರದ್ದುಗೊಳಿಸಲಾಗಿದೆ. ಚಿಕ್ಕಮಗಳೂರು ಜಿಲ್ಲೆಯ ಕಳಸ ಸಮೀಪ ಪ್ರವಾಹದಿಂದ ತುಂಬಿ ಹರಿಯುತ್ತಿರುವ ಹಳ್ಳಗಳಲ್ಲಿ ಪ್ರವಾಸಿಗರು ಅಪಾಯಕಾರಿ ಸಾಹಸ ನಡೆಸುತ್ತಿರುವುದು ಆತಂಕಕ್ಕೆ ಕಾರಣವಾಗಿದೆ.
ನದಿಗಳ ಆರ್ಭಟದಿಂದ ಹಲವು ಪ್ರದೇಶಗಳಲ್ಲಿ ಪ್ರವಾಹ
ದಾವಣಗೆರೆ ಜಿಲ್ಲೆಯ ತುಂಗಾಭದ್ರ ನದಿ ನೀರಿನ ಮಟ್ಟ ಏರಿಕೆಯಿಂದ ಉಕ್ಕಡಗಾತ್ರಿ ಸಂಪರ್ಕ ರಸ್ತೆ ಜಲಾವೃತವಾಗಿದೆ. ಹಾವೇರಿ ಜಿಲ್ಲೆಯ ವರದಾ ನದಿಯಿಂದ ಬ್ರಿಜ್ ಕಂ ಬ್ಯಾರೇಜ್ ಮುಳುಗಡೆಯಾಗಿದೆ.
ಉತ್ತರ ಕನ್ನಡ ಜಿಲ್ಲೆಯ ಶಿವಗಂಗಾ ಫಾಲ್ಸ್ ಹಾಗೂ ಉಂಚಳ್ಳಿ ಫಾಲ್ಸ್ ಭೋರ್ಗರೆಯುತ್ತಿದ್ದು, ದಾಂಡೇಲಿಯಲ್ಲಿ ಮನೆಗೋಡೆ ಕುಸಿದು ಇಬ್ಬರು ವೃದ್ಧೆಯರು ಗಾಯಗೊಂಡಿದ್ದಾರೆ. ಅಂಕೋಲಾ ಸಮೀಪ ರಾಷ್ಟ್ರೀಯ ಹೆದ್ದಾರಿ-52ರ ದುಸ್ಥಿತಿಗೆ ಗ್ರಾಮಸ್ಥರು ರಸ್ತೆ ಗುಂಡಿಗಳಲ್ಲಿ ಗಿಡ ನೆಟ್ಟು ಪ್ರತಿಭಟನೆ ನಡೆಸಿದ್ದಾರೆ.

ಬೆಳಗಾವಿಯಲ್ಲಿ ಪ್ರವಾಹದ ಆತಂಕ ಹೆಚ್ಚಳ
ಬೆಳಗಾವಿ ಜಿಲ್ಲೆಯಲ್ಲಿ ಮಾರ್ಕಂಡೇಯ, ಮಲಪ್ರಭಾ, ಕೃಷ್ಣಾ ಹಾಗೂ ದೂದಗಂಗಾ ನದಿಗಳ ನೀರಿನ ಮಟ್ಟ ಏರಿಕೆಯಿಂದ ಹಲವು ಪ್ರದೇಶಗಳು ಜಲಾವೃತವಾಗಿವೆ. ಮಹಾರಾಷ್ಟ್ರದ ಕೊಯ್ನಾ ಜಲಾಶಯದಿಂದ ಕೃಷ್ಣಾ ನದಿಗೆ 1.23 ಲಕ್ಷ ಕ್ಯೂಸೆಕ್ ನೀರು ಬಿಡುಗಡೆ ಮಾಡಿರುವುದರಿಂದ ಚಿಕ್ಕೋಡಿ ಭಾಗದಲ್ಲಿ ಪ್ರವಾಹ ಭೀತಿ ಮತ್ತಷ್ಟು ಹೆಚ್ಚಾಗಿದೆ.
ಆಡಳಿತದಿಂದ ಎಚ್ಚರಿಕೆ
ಹವಾಮಾನ ಇಲಾಖೆ ಮುಂದಿನ ದಿನಗಳಲ್ಲೂ ಭಾರೀ ಮಳೆಯ ಮುನ್ಸೂಚನೆ ನೀಡಿರುವ ಹಿನ್ನೆಲೆಯಲ್ಲಿ ನದಿ ತೀರ ಹಾಗೂ ತಗ್ಗು ಪ್ರದೇಶದ ನಿವಾಸಿಗಳು ಎಚ್ಚರಿಕೆಯಿಂದ ಇರಬೇಕೆಂದು ಜಿಲ್ಲಾಡಳಿತಗಳು ಮನವಿ ಮಾಡಿವೆ. ತುರ್ತು ಪರಿಸ್ಥಿತಿಗೆ ಅಗತ್ಯ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳಲಾಗಿದ್ದು, ಸಾರ್ವಜನಿಕರು ಅಧಿಕಾರಿಗಳ ಸೂಚನೆಗಳನ್ನು ಪಾಲಿಸುವಂತೆ ಮನವಿ ಮಾಡಲಾಗಿದೆ.



