ಹೊಸದಿಗಂತ ಡಿಜಿಟಲ್ ಡೆಸ್ಕ್:
ತಮಿಳುನಾಡಿಗೆ ಕಾವೇರಿ ನೀರು ಹರಿಸುವ ವಿಚಾರದಲ್ಲಿ ಕರ್ನಾಟಕಕ್ಕೆ ಸುಪ್ರೀಂ ಕೋರ್ಟ್ನಲ್ಲಿ ಹಿನ್ನಡೆಯಾಗಿದೆ. ಕಾವೇರಿ ನೀರು ನಿರ್ಹವಣಾ ಪ್ರಾಧಿಕಾರ ನೀಡಿರುವ ಆದೇಶವನ್ನು ಪಾಲಿಸಿ ಎಂದು ಕರ್ನಾಟಕಕ್ಕೆ ಸುಪ್ರೀಂ ಕೋರ್ಟ್ ಸೂಚನೆ ನೀಡಿದೆ.
ಈ ಪ್ರಕರಣಕ್ಕೆ ಸಂಬಂಧಿಸಿದ ಮುಂದಿನ ವಿಚಾರಣೆಯನ್ನು ಒಂದು ವಾರಕ್ಕೆ ಮುಂದೂಡಲಾಗಿದೆ. ರಾಜ್ಯದಲ್ಲಿ ಮಳೆ ಪ್ರಮಾಣ ಕಡಿಮೆಯಾದ ಹಿನ್ನೆಲೆಯಲ್ಲಿ ನೀರು ಹರಿಸುವ ವಿಚಾರಕ್ಕೆ ಕರ್ನಾಟಕ ಹಾಗೂ ತಮಿಳುನಾಡಿನ ನಡುವೆ ಜಟಾಪಟಿ ಮುಂದುವರಿದಿದೆ.
ತಮಿಳುನಾಡು ಹೇಳೋದೇನು?
ಕರ್ನಾಟಕದಿಂದ ನಿತ್ಯವೂ 12 ಸಾವಿರ ಕ್ಯೂಸೆಕ್ ನೀರನ್ನು ತಮಿಳುನಾಡಿಗೆ ಹರಿಸುವಂತೆ ಕಾವೇರಿ ನೀರು ನಿರ್ಹವಣಾ ಪ್ರಾಧಿಕಾರ ಹೇಳಿದೆ. ಹೀಗಿದ್ದರೂ ನಮಗೆ ಇಷ್ಟು ನೀರು ತಲುಪುತ್ತಿಲ್ಲ. ನಿತ್ಯವೂ 5ರಿಂದ 6 ಸಾವಿರ ಕ್ಯೂಸೆಕ್ನಷ್ಟು ನೀರು ಹರಿದುಬರುತ್ತಿದ್ದು, ಇದುವರೆಗೆ ಸುಮಾರು 13ರಿಂದ 14 ಟಿಎಂಸಿ ನೀರು ಮಾತ್ರ ಲಭಿಸಿದೆ. ಕಾವೇರಿ ನೀರು ನಿರ್ಹವಣಾ ಪ್ರಾಧಿಕಾರ ಹೇಳಿದಷ್ಟು ನೀರನ್ನು ನಮಗೆ ಹರಿಸಬೇಕು ಎಂದು ಮನವಿ ಮಾಡಲಾಗಿದೆ.
ಕರ್ನಾಟಕ ಹೇಳೋದೇನು?
ಈಗಾಗಲೇ 3,500 ಕ್ಯೂಸೆಕ್ ನೀರು ಹರಿಸಲಾಗಿದೆ. ಕಾವೇರಿ ನೀರು ನಿರ್ಹವಣಾ ಪ್ರಾಧಿಕಾರದ ಆದೇಶ ಪಾಲಿಸಲು ಯತ್ನಿಸುತ್ತಿದ್ದೇವೆ. ಬಿಳಿಗುಂಡ್ಲು ಬಳಿ ನೀರಿನ ಹರಿವನ್ನು ಅಳೆಯಲಾಗುತ್ತದೆ. 12 ಸಾವಿರ ಕ್ಯೂಸೆಕ್ ಪ್ರಮಾಣದ ನೀರು ಅಲ್ಲಿ ದಾಖಲಾಗಲು ಸ್ವಲ್ಪ ಸಮಯ ಬೇಕಾಗುತ್ತದೆ. ಕಾವೇರಿ ಅಚ್ಚುಕಟ್ಟು ಪ್ರದೇಶದಲ್ಲಿ ಒಂದು ದಿನ ಮಳೆಯಾದರೆ ಒಂದು ವಾರ ಮಳೆ ಬರುತ್ತಿಲ್ಲ. ಹೀಗಾಗಿ ನಿರಂತರವಾಗಿ ನೀರು ಬಿಡಲು ಸಾಧ್ಯವಾಗುತ್ತಿಲ್ಲ ಎಂದು ಹೇಳಿದೆ.
ಕೋರ್ಟ್ ಹೇಳಿದ್ದೇನು?
ವಾದ ಹಾಗೂ ಪ್ರತಿವಾದ ಆಲಿಸಿದ ನ್ಯಾಯಾಲಯ ಅಂತಿಮವಾಗಿ ಕಾವೇರಿ ನೀರು ನಿರ್ಹವಣಾ ಪ್ರಾಧಿಕಾರ ನೀಡಿರುವ ಆದೇಶವನ್ನು ಪಾಲಿಸುವಂತೆ ಕರ್ನಾಟಕಕ್ಕೆ ಸೂಚಿಸಿದ್ದು, ನಿತ್ಯ 12 ಸಾವಿರ ಕ್ಯೂಸೆಕ್ ನೀರು ಹರಿಸುವ ಆದೇಶವನ್ನು ಮುಂದುವರೆಸುವಂತೆ ತಿಳಿಸಿದ್ದು, ಪ್ರಕರಣದ ಮುಂದಿನ ವಿಚಾರಣೆ ಸೋಮವಾರಕ್ಕೆ ಮುಂದೂಡಿದೆ.



