ಹೊಸದಿಗಂತ ಚಿತ್ರದುರ್ಗ:
ಮಕ್ಕಳಿಂದ ಡೊನೇಷನ್ ಕೀಳುತ್ತಿರುವ ಖಾಸಗಿ ಶಾಲೆಗಳ ಮೇಲೆ ಸರ್ಕಾರ ಕಠಿಣ ಕ್ರಮ ಕೈಗೊಳ್ಳುವಂತೆ ಕರುನಾಡ ವಿಜಯಸೇನೆ ವತಿಯಿಂದ ಜಿಲ್ಲಾಧಿಕಾರಿ ಕಚೇರಿ ಎದುರು ಮಂಗಳವಾರ ಪ್ರತಿಭಟನೆ ನಡೆಸಲಾಯಿತು.
ನಗರದ ಪ್ರವಾಸಿ ಮಂದಿರದಿಂದ ಮೆರವಣಿಗೆ ಮೂಲಕ ಆಗಮಿಸಿದ ಪ್ರತಿಭಟನಾಕಾರರು ಪೋಷಕರುಗಳಿಂದ ಅತಿಯಾದ ಡೊನೇಷನ್ ವಸೂಲು ಮಾಡುತ್ತಿರುವ ಖಾಸಗಿ ಶಾಲೆಗಳ ವಿರುದ್ದ ಘೋಷಣೆಗಳನ್ನು ಕೂಗಿದರು.
ಕರುನಾಡ ವಿಜಯಸೇನೆ ಜಿಲ್ಲಾಧ್ಯಕ್ಷ ಕೆ.ಟಿ.ಶಿವಕುಮಾರ್ ಮಾತನಾಡಿ, ರಾಜ್ಯ ಸರ್ಕಾರ ಉಚಿತವಾಗಿ ನೀಡುತ್ತಿರುವ ಬಿಟ್ಟಿ ಭಾಗ್ಯಗಳನ್ನು ನಿಲ್ಲಿಸಿ ಶಿಕ್ಷಣ ಹಾಗೂ ಆರೋಗ್ಯಕ್ಕೆ ಒತ್ತು ಕೊಡಬೇಕು. ಆಂಗ್ಲ ವ್ಯಾಮೋಹಕ್ಕೆ ಪೋಷಕರು ಹಾಗೂ ಮಕ್ಕಳು ಆಕರ್ಷಿತರಾಗುತ್ತಿರುವುದನ್ನು ಬಂಡವಾಳವನ್ನಾಗಿ ಮಾಡಿಕೊಂಡು ಮಿತಿ ಮೀರಿದ ಡೊನೇಷನ್ ಕೀಳುತ್ತಿರುವ ಖಾಸಗಿ ಶಾಲೆಗಳ ಮೇಲೆ ಲೋಕಾಯುಕ್ತ ದಾಳಿ ನಡೆಸಬೇಕೆಂದು ಒತ್ತಾಯಿಸಿದರು.
ಕರುನಾಡ ವಿಜಯಸೇನೆ ಮಹಿಳಾ ಘಟಕದ ಜಿಲ್ಲಾಧ್ಯಕ್ಷೆ ವೀಣಗೌರಣ್ಣ, ಪ್ರಧಾನ ಕಾರ್ಯದರ್ಶಿ ಗೋಪಿನಾಥ್, ಕಾರ್ಯದರ್ಶಿ ಜಗದೀಶ್, ನಗರಾಧ್ಯಕ್ಷ ಅವಿನಾಶ್, ಕಾರ್ಮಿಕ ಘಟಕದ ಹರೀಶ್ಕುಮಾರ್, ಮುಜಾಯಿದ್, ನಾಗೇಶ್, ಶಶಿಧರ್, ಅಖಿಲೇಶ್, ವಿಜಯಬಾಬು, ರತ್ನಮ್ಮ ಇನ್ನು ಮುಂತಾದವರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.