ಹೊಸದಿಗಂತ ವರದಿ,ಶಿವಮೊಗ್ಗ:
ಯಾವುದೇ ಕಾರಣಕ್ಕೂ ಕಸ್ತೂರಿ ರಂಗನ್ ವರದಿ ಒಪ್ಪಲು ಸಾಧ್ಯವಿಲ್ಲ. ಮಲೆನಾಡಿನ ಜನಜೀವನಕ್ಕೆ ಮಾರಕವಾಗಿರುವ ಕಸ್ತೂರಿ ರಂಗನ್ ವರದಿಯನ್ನು ಹಿಂದಕ್ಕೆ ಪಡೆಯುವಂತೆ ಒತ್ತಾಯಿಸಿ ಸೋಮವಾರ ನವದೆಹಲಿಯಲ್ಲಿ ಮಲೆನಾಡು ಭಾಗದ ಸಂಸದರು ಮತ್ತು ಶಾಸಕರು ಅರಣ್ಯ ಮತ್ತು ಪರಿಸರ ಖಾತೆ ಸಚಿವರನ್ನು ಭೇಟಿಯಾಗಿ ಮನವಿ ಸಲ್ಲಿಸುತ್ತಿದ್ದೇವೆ ಎಂದು ಶಾಸಕ ಹರತಾಳು ಹಾಲಪ್ಪ ತಿಳಿಸಿದರು.
ಸಾಗರ ನಗರಸಭೆ ಆವರಣದಲ್ಲಿ ಭಾನುವಾರ ಪತ್ರಕರ್ತರ ಜೊತೆ ಮಾತನಾಡಿದ ಅವರು, ಕಸ್ತೂರಿ ರಂಗನ್ ವರದಿ ಕೈಬಿಡಲು ರಾಜ್ಯ ಸರ್ಕಾರ ಹಿಂದಿನಿಂದಲೂ ಒತ್ತಾಯಿಸುತ್ತಾ ಬಂದಿದೆ. ಹಿಂದೆ ಯಡಿಯೂರಪ್ಪ ಮುಖ್ಯಮಂತ್ರಿಗಳಾಗಿದ್ದ ಸಂದರ್ಭದಲ್ಲಿ ವರದಿ ಕೈಬಿಡಬೇಕು. ಇಲ್ಲವಾದಲ್ಲಿ ಮಲೆನಾಡು ಭಾಗದಲ್ಲಿ ರಕ್ತಕ್ರಾಂತಿಯಾಗುತ್ತದೆ ಎಂದು ಮನವಿ ಸಲ್ಲಿಸಲಾಗಿತ್ತು. ಆಗ ವರದಿಯನ್ನು ಹಿಂದಕ್ಕೆ ಪಡೆದಿದ್ದರು. ಇದೀಗ ಮತ್ತೆ ಅಧಿಸೂಚನೆ ಹೊರಡಿಸಿರುವ ಹಿನ್ನೆಲೆಯಲ್ಲಿ ವಿಷಯವನ್ನು ರಾಜ್ಯ ಸರ್ಕಾರ ಗಂಭೀರವಾಗಿ ಪರಿಗಣಿಸಿದೆ ಎಂದು ಹೇಳಿದರು.
ಜು. 18ಕ್ಕೆ ಮುಖ್ಯಮಂತ್ರಿಗಳ ಅಧ್ಯಕ್ಷತೆಯಲ್ಲಿ ಈ ಸಂಬಂಧ ಸಭೆ ಕರೆಯಲಾಗಿತ್ತು. ಸಭೆಯಲ್ಲಿ ನಿಕಟಪೂರ್ವ ಮುಖ್ಯಮಂತ್ರಿಗಳಾಗಿರುವ ಬಿ.ಎಸ್. ಯಡಿಯೂರಪ್ಪ, ಗೃಹ ಸಚಿವ ಅರಗ ಜಾ್ಞನೇಂದ್ರ, ಸಂಸದ ಬಿ.ವೈ. ರಾಘವೇಂದ್ರ, ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ ಮತ್ತು ಮಲೆನಾಡಿನ ಎಲ್ಲ ಶಾಸಕರು ಪಾಲ್ಗೊಂಡು ವರದಿಯನ್ನು ಸಾರಸಗಟಾಗಿ ತಿರಸ್ಕರಿಸುವ ನಿರ್ಣಯ ಕೈಗೊಳ್ಳಲಾಗಿತ್ತು. ಇದೀಗ ಕೇಂದ್ರದ ಅರಣ್ಯ ಮಂತ್ರಾಲಯ ಮತ್ತೊಂದು ಅಧಿಸೂಚನೆ ಹೊರಡಿಸಿರುವ ಹಿನ್ನೆಲೆಯಲ್ಲಿ ಸಚಿವ ಸಂಪುಟದಲ್ಲಿ ವರದಿಯನ್ನು ಕೈಬಿಡುವಂತೆ ನಿರ್ಣಯ ಕೈಗೊಳ್ಳಲಾಗಿದೆ ಎಂದರು.