ಹೊಸದಿಗಂತ ಡಿಜಿಟಲ್ ಡೆಸ್ಕ್:
ರಾಜ್ಯದ 4,134 ಸರ್ಕಾರಿ ಪ್ರಾಥಮಿಕ ಶಾಲೆಗಳಲ್ಲಿ ಇಂಗ್ಲಿಷ್ ಮಾಧ್ಯಮ ತರಗತಿಗಳನ್ನು ತೆರೆಯುವ ರಾಜ್ಯ ಸರ್ಕಾರದ ನಿರ್ಧಾರವನ್ನು ಕನ್ನಡ ಅಭಿವೃದ್ಧಿ ಪ್ರಾಧಿಕಾರ ವಿರೋಧಿಸಿದೆ.
ರಾಜ್ಯ ಸರ್ಕಾರದ ನಿರ್ಧಾರ ಸಂಬಂಧ ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಪುರುಷೋತ್ತಮ ಬಿಳಿಮಲೆ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ, ಶಿಕ್ಷಣ ಸಚಿವ ಮಧು ಬಂಗಾರಪ್ಪ ಮತ್ತು ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ಅವರಿಗೆ ಪತ್ರ ಬರೆದಿದ್ದು, ಕನ್ನಡವನ್ನು ಬದಿಗಿಡಲಾಗುತ್ತಿರುವ ಈ ಉಪಕ್ರಮವನ್ನು ಕೆಡಿಎ ಒಪ್ಪುವುದಿಲ್ಲ ಎಂದು ಹೇಳಿದ್ದಾರೆ.
ಇತರ ಭಾಷೆಗಳನ್ನು ಕಲಿಯುವುದು ತಪ್ಪಲ್ಲ, ಆದರೆ ಈ ಪ್ರಕ್ರಿಯೆಯಲ್ಲಿ ಕನ್ನಡವನ್ನು ಬದಿಗಿಡುವುದು ಸ್ವೀಕಾರಾರ್ಹವಲ್ಲ ಎಂದು ತಿಳಿಸಿದ್ದಾರೆ. ನಾಡಿನ ಅಭಿವೃದ್ಧಿ ಎನ್ನುವುದು ಸಂಪೂರ್ಣವಾಗಿ ಅಲ್ಲಿನ ಶಿಕ್ಷಣ ವ್ಯವಸ್ಥೆಯನ್ನು ಅವಲಂಬಿಸಿದೆ. ಸಾಮಾಜಿಕ, ಆರ್ಥಿಕ, ರಾಜಕೀಯ ಹಾಗೂ ಸಾಂಸ್ಕೃತಿಕ ಬದುಕಿಗೆ ಕಲಿಕಾ ವ್ಯವಸ್ಥೆಯೇ ನಿರ್ಣಾಯಕ ಪಾತ್ರವನ್ನು ಹೊಂದಿರುತ್ತದೆ. ವಿಶ್ವದ್ಯಾಂತ ನಡೆಸಿರುವ ಅಧ್ಯಯನಗಳಲ್ಲಿ ಪ್ರಾರಂಭಿಕವಾಗಿ ತಾಯ್ನುಡಿಯನ್ನು ಪ್ರಭುತ್ವದ ಮಟ್ಟಕ್ಕೆ ಕಲಿಸುವುದೇ ಜ್ಞಾನಾರ್ಜನೆಯ ದೃಷ್ಠಿಯಿಂದ ಬುನಾದಿ ಎಂಬುದನ್ನು ನಿರೂಪಿಸಿವೆ.
2013-18ರಲ್ಲಿ ಸರಕಾರವು ಮಕ್ಕಳ ಹಕ್ಕು ಕಾಯ್ದೆಯ ಪ್ರಕರಣ 29 (ಎಫ್)ಗೆ ತಿದ್ದುಪಡಿ ಮಾಡುವ ಮಸೂದೆಯನ್ನು ಸದನಗಳಲ್ಲಿ ಮಂಡಿಸಿ ರಾಷ್ಟ್ರಪತಿಯವರ ಅಂಗೀಕಾರಕ್ಕೆ ಕಳುಹಿಸಿದ್ದು, ಅದರಂತೆ ಕನಿಷ್ಟ 8ನೇ ತರಗತಿವರೆಗೆ ಶಿಕ್ಷಣ ಮಾಧ್ಯಮ ಮಾತೃಭಾಷೆಯಲ್ಲಿರಬೇಕಾಗುತ್ತದೆ ಎಂದು ತಿಳಿಸಿದ್ದಾರೆ.