ಹೊಸದಿಗಂತ ಡಿಜಿಟಲ್ ಡೆಸ್ಕ್:
ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಬಂಧನದ ನಂತರ ಅವರ ತೂಕ ಕಡಿಮೆಯಾಗಿಲ್ಲ, ಸ್ಥಿರವಾಗಿದೆ ಎಂದು ತಿಹಾರ್ ಜೈಲು ಅಧಿಕಾರಿಗಳು ಸ್ಪಷ್ಟಪಡಿಸಿದ್ದಾರೆ.
ಕೇಜ್ರಿವಾಲ್ ತಿಹಾರ್ ಜೈಲಿಗೆ ಬಂದ ದಿನಾಂಕದಂದು ಇಬ್ಬರು ವೈದ್ಯರಿಂದ ಪರೀಕ್ಷೆ ನಡೆಸಲಾಗಿದೆ. ಆಗ ಇದ್ದ ತೂಕಕ್ಕೂ ಈಗ ಇರುವ ತೂಕಕ್ಕೂ ಯಾವುದೇ ವ್ಯತ್ಯಾಸ ಆಗಿಲ್ಲ ಎಂದು ಜೈಲಿನ ಪ್ರಕಟಣೆ ತಿಳಿಸಿದೆ.
ಇದುವರೆಗೂ ಅವರುಗೆ ನ್ಯಾಯಾಲಯದ ಆದೇಶದ ಪ್ರಕಾರ ಮನೆಯ ಆಹಾರವನ್ನೇ ನೀಡಲಾಗುತ್ತಿದೆ. ಅವರ ಎಲ್ಲಾ ವೈದ್ಯಕೀಯ ಪರೀಕ್ಷೆಗಳು ಸಾಮಾನ್ಯವೆಂದು ಕಂಡುಬಂದಿವೆ ಎಂದು ಪ್ರಕಟಣೆ ತಿಳಿಸಿದೆ.
ತೀವ್ರ ಮಧುಮೇಹದಿಂದ ಬಳಲುತ್ತಿರುವ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್, ಬಂಧನದ ಬಳಿಕ 4.5 ಕೆಜಿ ತೂಕ ಕಳೆದುಕೊಂಡಿದ್ದಾರೆ. ಕೇಜ್ರಿವಾಲ್ ಅವರನ್ನು ಜೈಲಿಗೆ ಹಾಕುವ ಮೂಲಕ ಬಿಜೆಪಿ ಅವರ ಆರೋಗ್ಯವನ್ನು ಅಪಾಯಕ್ಕೆ ಸಿಲುಕಿಸುತ್ತಿದೆ ಎಂದು ದಿಲ್ಲಿ ಸಚಿವೆ ಅತಿಶಿ ಆರೋಪಿಸಿದ್ದರು. ಈ ಆರೋಪವನ್ನು ತಿಹಾರ್ ಜೈಲು ಅಧಿಕಾರಿಗಳು ಸ್ಪಷ್ಟವಾಗಿ ತಳ್ಳಿಹಾಕಿದ್ದಾರೆ.