ಹೊಸದಿಗಂತ ಡಿಜಿಟಲ್ ಡೆಸ್ಕ್
ಬೆಂಗಳೂರು: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಅಧ್ಯಕ್ಷತೆಯಲ್ಲಿ ಇಂದು ಕೋವಿಡ್-19 ಸಂಬಂಧಪಟ್ಟಂತೆ ತಜ್ಞರ, ಆರೋಗ್ಯ ಇಲಾಖೆ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳೊಂದಿಗೆ ವರ್ಚುಯಲ್ ಸಭೆ ನಡೆಸಿದರು.
ಸಭೆಯ ಮುಖ್ಯಾಂಶಗಳು:
* ಬೆಂಗಳೂರಿನಲ್ಲಿ ಒಪಿಡಿಗಳಿಗೆ ಹೆಚ್ಚಿನ ಗಮನ ಕೊಡಲು ಮತ್ತು ಹೆಚ್ಚು ಸಿಬ್ಬಂದಿ ನಿಯೋಜಿಸಲು ಸೂಚಿಸಿದರು.
* ಜನ ಟ್ರಯಾಜಿಂಗ್ಗೆ ದಾಖಲಾಗುವುದನ್ನು ನಿಯಂತ್ರಿಸಲು ಸಲಹೆ ನೀಡಿದರು.
* ಹೋಮ್ ಐಸೊಲೇಷನ್ ಕಾಲ್ಸ್ ಹೆಚ್ಚಿಸಲು ಸೂಚಿಸಲಾಯಿತು. ಕೊ-ಮಾರ್ಬಿಡಿಟಿ ಇರುವವರಿಗೆ ದಿನಕ್ಕೆ ಒಂದು ಬಾರಿ ಕರೆ ಮಾಡಿ ಅವರ ಆರೋಗ್ಯ ಸ್ಥಿತಿ ಅವಲೋಕಿಸಬೇಕು ಹಾಗೂ ವಿಶ್ವಾಸ ಮೂಡಿಸಬೇಕು.
* ಮನೆಯವರಿಗೆ ಹರಡದಂತೆ ಕೈಗೊಳ್ಳಬೇಕಾದ ಮುನ್ನೆಚ್ಚರಿಕೆ ಕೈಗೊಳ್ಳಲು ಸೂಚಿಸಿದರು.
* ಔಷಧಿ ಕಿಟ್ಗಳನ್ನು ಮನೆಗಳಿಗೆ ಪರಿಣಾಮಕಾರಿಯಾಗಿ ತಲುಪಿಸಲು ಸೂಚಿಸಿದರು.
* ಸ್ವಯಂ ಸೇವಾ ಸಂಸ್ಥೆಗಳನ್ನು ತೊಡಗಿಸಿಕೊಂಡು ಕಾರ್ಯನಿರ್ವಹಿಸುವ ಮೂಲಕ ಜನರಲ್ಲಿರುವ ನಕಾರಾತ್ಮಕ ಮನೋಭಾವವನ್ನು ತೊಡೆಯಲು ಸಲಹೆ ನೀಡಿದರು.
* ಸ್ಥಳೀಯ ವೈದ್ಯರು ಕನ್ಸಲ್ಟೇಷನ್ ಮಾಡುವಂತಾಗಬೇಕು.
* ಸೋಂಕಿತ ಮಕ್ಕಳ ಕುರಿತು, ವಿಶೇಷವಾಗಿ ಗ್ರಾಮೀಣ ಪ್ರದೇಶದಲ್ಲಿ ಹೆಚ್ಚಿನ ಆದ್ಯತೆ ನೀಡಬೇಕು. ಪೋಷಕರಿಗೆ ಧೈರ್ಯ ಹೇಳಬೇಕು. ಔಷಧಿ ಕಿಟ್ಗಳನ್ನು ನೀಡಬೇಕು. ಮಕ್ಕಳಿಗೆ ಪ್ರತ್ಯೇಕ ಔಷಧಿ ಕಿಟ್ ಸಿದ್ಧಪಡಿಸಬೇಕು.
* ಗ್ರಾಮೀಣ ಪ್ರದೇಶದಲ್ಲಿ ಜನರಲ್ಲಿ ವಿಶ್ವಾಸ ಮೂಡಿಸಬೇಕು.
* ಆಕ್ಸಿಜನ್ ಪ್ಲಾಂಟ್ಗಳನ್ನು ಸಜ್ಜುಗೊಳಿಸಿ, ಸಿಬ್ಬಂದಿ, ಇಂಧನ ಮೊದಲಾದವುಗಳನ್ನು ಸಿದ್ಧವಿಟ್ಟುಕೊಳ್ಳಲು ಸೂಚಿಸಲಾಗಿದೆ.
* ಆಸ್ಪತ್ರೆಗಳಲ್ಲಿ ಜನರೇಟರುಗಳ ವ್ಯವಸ್ಥೆ ಮಾಡಿಕೊಳ್ಳಲು ಸೂಚಿಸಿದರು.
* ಮಕ್ಕಳು ಮತ್ತು 60ವರ್ಷ ಮೇಲ್ಪಟ್ಟವರ ಕುರಿತು ಹೆಚ್ಚಿನ ನಿಗಾ ವಹಿಸಬೇಕು.
* ಲಸಿಕೆ ಅಭಿಯಾನ ತ್ವರಿತವಾಗಿ ಪೂರ್ಣಗೊಳಿಸಲು ಸೂಚಿಸಿದರು.
* ಔಷಧಿಗಳನ್ನು ಕೂಡಲೇ ಒದಗಿಸಬೇಕು. ಅವುಗಳನ್ನು ಸಕಾಲದಲ್ಲಿ ಆಸ್ಪತ್ರೆಗಳಿಗೆ ತಲುಪಿಸಲು ಕ್ರಮ ವಹಿಸಲು ಸೂಚಿಸಿದರು.
* ಭಾರತ ಸರಕಾರದ ನಿಯಮಾವಳಿಗಳಂತೆ ಐ.ಸಿ.ಎಂ.ಆರ್. ಸೂಚಿಸಿರುವ ಶ್ರೇಣೀಕೃತ ಮಾದರಿಯಲ್ಲಿ ಪರೀಕ್ಷೆ ನಡೆಸಲು ಸೂಚಿಸಿದರು.
* ಎರಡನೇ ಡೋಸ್ ಲಸಿಕೆ ಪಡೆದವರ ಸಂಖ್ಯೆ ಕಡಿಮೆ ಇರುವ ಜಿಲ್ಲೆಗಳ ಜಿಲ್ಲಾಧಿಕಾರಿ ಹಾಗೂ ಸಿಇಒಗಳೊಂದಿಗೆ ವಿಡಿಯೋ ಸಂವಾದ ನಡೆಸಲು ನಿರ್ಧರಿಸಲಾಯಿತು.
* 15 ರಿಂದ 18 ವರ್ಷ ವಯೋಮಾನದವರಿಗೆ ಲಸಿಕಾ ಅಭಿಯಾನವನ್ನು ಚುರುಕುಗೊಳಿಸಲು ಸೂಚಿಸಲಾಯಿತು.