ಹೊಸದಿಗಂತ ಡಿಜಿಟಲ್ ಡೆಸ್ಕ್:
ರಸ್ತೆ ಬದಿಯಲ್ಲಿ ಭಿಕ್ಷೆ ಬೇಡುತ್ತಿದ್ದ ಇಬ್ಬರು ಸಹೋದರರ ಮೇಲೆ ಕೆಎಸ್ಆರ್ಟಿಸಿ ಬಸ್ ಹರಿದ ಪರಿಣಾಮ 12 ವರ್ಷದ ಬಾಲಕ ಸಿದ್ದರಾಮ ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ. ಇನ್ನೊಬ್ಬ 8 ವರ್ಷದ ಧನಂಜಯ್ ಗಂಭೀರವಾಗಿ ಗಾಯಗೊಂಡಿದ್ದು, ಆಸ್ಪತ್ರೆಗೆ ದಾಖಲಾಗಿದ್ದಾನೆ. ಈ ಹೃದಯವಿದ್ರಾವಕ ಘಟನೆ ಲಿಂಗಸುಗೂರು ಬಸ್ ನಿಲ್ದಾಣದ ಬಳಿ ನಡೆದಿದೆ.
ವರದಿಗಳ ಪ್ರಕಾರ, ಲಿಂಗಸುಗೂರು ಬಸ್ ನಿಲ್ದಾಣದತ್ತ ಬರುತ್ತಿದ್ದ ಕೆಎಸ್ಆರ್ಟಿಸಿ ಬಸ್ ಅಚಾನಕ್ ನಿಯಂತ್ರಣ ತಪ್ಪಿ ರಸ್ತೆ ಬದಿಯಲ್ಲಿ ಭಿಕ್ಷೆ ಬೇಡುತ್ತಿದ್ದ ಬಾಲಕರ ಮೇಲೆ ಹರಿದಿದೆ. ಘಟನೆಯು ನಡೆದ ಕೆಲವೇ ಕ್ಷಣಗಳಲ್ಲಿ ಸ್ಥಳೀಯರು ಇಬ್ಬರು ಮಕ್ಕಳನ್ನೂ ತಕ್ಷಣ ಆಸ್ಪತ್ರೆಗೆ ಕರೆದೊಯ್ದರೂ, ಸಿದ್ದರಾಮ ಆಗಲೇ ಪ್ರಾಣ ಬಿಟ್ಟಿದ್ದಾನೆ ಎಂದು ವೈದ್ಯರು ದೃಢಪಡಿಸಿದ್ದಾರೆ. ಧನಂಜಯನ ಎರಡು ಕೈಗಳು ಗಂಭೀರವಾಗಿ ಗಾಯಗೊಂಡಿದ್ದು, ಶಸ್ತ್ರಚಿಕಿತ್ಸೆಗಾಗಿ ಖಾಸಗಿ ಆಸ್ಪತ್ರೆಗೆ ರವಾನೆ ಮಾಡಲಾಗಿದೆ.
ಇಬ್ಬರೂ ಸಹೋದರರಾಗಿದ್ದು, ಕುಟುಂಬದ ಆರ್ಥಿಕ ಸಂಕಷ್ಟದಿಂದ ರಸ್ತೆ ಬದಿಯಲ್ಲಿ ಭಿಕ್ಷೆ ಬೇಡುವ ಕೆಲಸ ಮಾಡುತ್ತಿದ್ದರೆಂಬ ಮಾಹಿತಿ ಲಭ್ಯವಾಗಿದೆ.

