ಹೊಸದಿಗಂತ ಡಿಜಿಟಲ್ ಡೆಸ್ಕ್:
ಕರ್ನಾಟಕ ಸರ್ಕಾರ ಗೋಹತ್ಯೆ ನಿಷೇಧ ಕಾನೂನು ಹಿಂಪಡೆಯುವ ಕುರಿತು ಬಿಜೆಪಿ ಮತ್ತು ಕಾಂಗ್ರೆಸ್ ನಾಯಕರ ನಡುವೆ ಮಾತಿನ ಚಕಮಕಿ ನಡೆಯುತ್ತಿರುವ ನಡುವೆಯೇ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಈ ಕುರಿತು ಸ್ಪಷ್ಟನೆ ನೀಡಿದ್ದು, 12 ವರ್ಷ ಮೇಲ್ಪಟ್ಟ ಹಸುಗಳ ಹತ್ಯೆಗೆ ಕಾನೂನಿನಲ್ಲಿ ಅವಕಾಶವಿದೆ ಎಂದು ಹೇಳಿದ್ದಾರೆ.
ದಾವಣಗೆರೆಯಲ್ಲಿ ಸುದ್ದಿಗಾರರ ಜೊತೆ ಮಾತನಾಡಿದ ಅವರು, ಗೋ ಹತ್ಯೆ ನಿಷೇಧ ಕಾಯಿದೆ ಬಗ್ಗೆ ಸಂಪುಟ ಸಭೆಯಲ್ಲಿ ಚರ್ಚಿಸಿ ನಿರ್ಧಾರ ಕೈಗೊಳ್ಳುತ್ತೇನೆ ಎಂದರು.
ಪಶು ಸಂಗೋಪನಾ ಸಚಿವ ವೆಂಕಟೇಶ್ ಹೇಳಿಕೆಗೆ ಪ್ರತಿಕ್ರಿಯೆ ನೀಡಿದ ಸಿದ್ದರಾಮಯ್ಯ, 1964ರ ಕಾಯಿದೆಯಂತೆ 12 ವರ್ಷ ಮೇಲ್ಪಟ್ಟ ಹಸುಗಳ ವಧೆ ಮಾಡಿ ಎಂದಿದೆ. ಕೃಷಿ ಕೆಲಸಕ್ಕೆ ಬಾರದ ಹಸುಗಳ ವಧೆಗೆ ಅವಕಾಶವಿದೆ ಎಂದು ನಮ್ಮ ಸಚಿವರು ಹೇಳಬೇಕಿತ್ತು, ಆದರೆ ಅವರು ಅದನ್ನು ಸ್ಪಷ್ಟವಾಗಿ ಹೇಳಿಲ್ಲ ಎಂದು ಸಮರ್ಥನೆ ನೀಡಿದರು.
ಆಗಿನ ಬಿಜೆಪಿ ಸರ್ಕಾರ ಜಾರಿಗೆ ತಂದ ಗೋಹತ್ಯೆ ನಿಷೇಧ ಕಾನೂನನ್ನು ಹಿಂಪಡೆಯುವ ಸಾಧ್ಯತೆಯ ವಿರುದ್ಧ ಬಿಜೆಪಿ ಪ್ರತಿಭಟನೆ ವ್ಯಕ್ತಪಡಿಸಿದೆ.