ಹೊಸದಿಗಂತ ಡಿಜಿಟಲ್ ಡೆಸ್ಕ್:
ಬಾಂಗ್ಲಾದೇಶದಲ್ಲಿ ನಡೆದ ಇಬ್ಬರು ಹಿಂದುಗಳ ಭೀಕರ ಹತ್ಯೆ ಪ್ರಕರಣಗಳು ಭಾರತವನ್ನು ವಿಚಲಿತಗೊಳಿಸಿದೆ. ಈ ಘಟನೆಗಳನ್ನು ತೀವ್ರವಾಗಿ ಖಂಡಿಸಿರುವ ಭಾರತ, ಅಪರಾಧಿಗಳಿಗೆ ಕಟ್ಟುನಿಟ್ಟಿನ ಶಿಕ್ಷೆ ವಿಧಿಸಬೇಕು ಎಂದು ಒತ್ತಾಯಿಸಿದೆ. ವಿದೇಶಾಂಗ ಸಚಿವಾಲಯದ ವಕ್ತಾರ ರಣಧೀರ್ ಜೈಸ್ವಾಲ್ ಮಾತನಾಡಿ, ಇಂತಹ ಹಿಂಸಾಚಾರಗಳು ಅಲ್ಪಸಂಖ್ಯಾತರ ಭದ್ರತೆ ಬಗ್ಗೆ ಗಂಭೀರ ಪ್ರಶ್ನೆಗಳನ್ನು ಎಬ್ಬಿಸುತ್ತಿವೆ ಎಂದು ಹೇಳಿದ್ದಾರೆ.
ಇತ್ತೀಚಿನ ದಿನಗಳಲ್ಲಿ ಬಾಂಗ್ಲಾದೇಶದಲ್ಲಿ ಅಲ್ಪಸಂಖ್ಯಾತ ಸಮುದಾಯದ ಮೇಲೆ ದಾಳಿಗಳು ಹೆಚ್ಚುತ್ತಿರುವುದು ಆತಂಕಕಾರಿ ಬೆಳವಣಿಗೆ ಎಂದು ಭಾರತ ಅಭಿಪ್ರಾಯಪಟ್ಟಿದೆ. ಮಧ್ಯಂತರ ಸರ್ಕಾರದ ಅವಧಿಯಲ್ಲಿ ಸುಮಾರು 2,900 ಹಿಂಸಾಚಾರ ಪ್ರಕರಣಗಳು ವರದಿಯಾಗಿವೆ ಎಂಬ ಅಂಕಿ-ಅಂಶಗಳು ಕಳವಳ ಮೂಡಿಸುತ್ತಿವೆ ಎಂದು ವಿದೇಶಾಂಗ ಸಚಿವಾಲಯ ತಿಳಿಸಿದೆ.
ಇದನ್ನೂ ಓದಿ:
ಈ ತಿಂಗಳು ಎರಡು ಪ್ರತ್ಯೇಕ ಘಟನೆಗಳಲ್ಲಿ ಹಿಂದು ವ್ಯಕ್ತಿಗಳನ್ನು ಗುಂಪೊಂದು ಥಳಿಸಿ ಹತ್ಯೆ ಮಾಡಲಾಗಿದೆ. ರಾಜ್ಬರಿ ಜಿಲ್ಲೆಯಲ್ಲಿ ನಡೆದ ಒಂದು ಪ್ರಕರಣ ಸುಲಿಗೆಗೆ ಸಂಬಂಧಿಸಿದೆ ಎನ್ನಲಾಗಿದ್ದು, ಮತ್ತೊಂದು ಪ್ರಕರಣದಲ್ಲಿ ಧರ್ಮನಿಂದನೆ ಆರೋಪದ ಹೆಸರಿನಲ್ಲಿ ದೀಪು ಚಂದ್ರ ದಾಸ್ ಅವರನ್ನು ಅಮಾನವೀಯವಾಗಿ ಕೊಲ್ಲಲಾಗಿದೆ ಎಂದು ವರದಿಯಾಗಿದೆ.
ಭಾರತ ಬಾಂಗ್ಲಾದೇಶದ ಸ್ಥಿತಿಗತಿಗಳನ್ನು ನಿಕಟವಾಗಿ ಗಮನಿಸುತ್ತಿದ್ದು, ಅಲ್ಪಸಂಖ್ಯಾತರ ರಕ್ಷಣೆಗೆ ಪರಿಣಾಮಕಾರಿ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿದೆ. ಬಾಂಗ್ಲಾದೇಶದಲ್ಲಿ ಶಾಂತಿ, ಸ್ಥಿರತೆ ಮತ್ತು ಎಲ್ಲರನ್ನು ಒಳಗೊಂಡ ನ್ಯಾಯಯುತ ಪ್ರಜಾಸತ್ತಾತ್ಮಕ ವ್ಯವಸ್ಥೆಗೆ ಭಾರತ ತನ್ನ ಬೆಂಬಲವನ್ನು ಮುಂದುವರಿಸಲಿದೆ ಎಂದು ಜೈಸ್ವಾಲ್ ಸ್ಪಷ್ಟಪಡಿಸಿದ್ದಾರೆ.

