March 12, 2026
Thursday, March 12, 2026
spot_img

ತೆರಿಗೆ ಸಂಗ್ರಹದಲ್ಲೂ ಕಿಂಗ್, ಜಿಡಿಪಿಯಲ್ಲೂ ನಂ.1: ವಿರೋಧ ಪಕ್ಷಗಳ ವಿರುದ್ಧ ಸಿದ್ದರಾಮಯ್ಯ ಗುಡುಗು!

ಹೊಸದಿಗಂತ ಡಿಜಿಟಲ್ ಡೆಸ್ಕ್:

“ನಮ್ಮ ಜನಪರ ಆಡಳಿತದಿಂದಾಗಿ ಇಂದು ಕರ್ನಾಟಕದ ಜಿಡಿಪಿ ದೇಶದಲ್ಲೇ ಮೊದಲ ಸ್ಥಾನಕ್ಕೇರಿದೆ ಹಾಗೂ ಜಿಎಸ್‌ಟಿ ತೆರಿಗೆ ಸಂಗ್ರಹದಲ್ಲೂ ರಾಜ್ಯ ದಾಖಲೆ ಬರೆದಿದೆ,” ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೆಮ್ಮೆಯಿಂದ ಘೋಷಿಸಿದರು.

ಜಿಲ್ಲಾಡಳಿತ ಹಾಗೂ ಕಂದಾಯ ಇಲಾಖೆ ಆಯೋಜಿಸಿದ್ದ ಸರ್ಕಾರದ ಸಹಸ್ರ ದಿನಾಚರಣೆ ಕಾರ್ಯಕ್ರಮದಲ್ಲಿ ಒಂದು ಲಕ್ಷ ಫಲಾನುಭವಿಗಳಿಗೆ ಹಕ್ಕು ಪತ್ರ ವಿತರಿಸಿ ಅವರು ಮಾತನಾಡಿದರು.

ಕಂದಾಯ ಸಚಿವ ಕೃಷ್ಣ ಬೈರೇಗೌಡ ಅವರ ಕಾರ್ಯವೈಖರಿಯನ್ನು ಮುಕ್ತಕಂಠದಿಂದ ಶ್ಲಾಘಿಸಿದ ಸಿಎಂ, ಈವರೆಗೆ ಒಟ್ಟು 2.20 ಲಕ್ಷ ಕುಟುಂಬಗಳಿಗೆ ಹಕ್ಕು ಪತ್ರ ನೀಡುವ ಮೂಲಕ ಇಲಾಖೆ ಕ್ರಾಂತಿಕಾರಿ ಪ್ರಗತಿ ಸಾಧಿಸಿದೆ ಎಂದರು. ಇದು ಎರಡನೇ ಬಾರಿಗೆ ಏಕಕಾಲಕ್ಕೆ ಲಕ್ಷ ಫಲಾನುಭವಿಗಳಿಗೆ ಹಕ್ಕು ಪತ್ರ ವಿತರಿಸುತ್ತಿರುವ ದಾಖಲೆಯ ಕಾರ್ಯಕ್ರಮವಾಗಿದೆ.

ಕೇಂದ್ರ ಸರ್ಕಾರದಿಂದ ರಾಜ್ಯಕ್ಕೆ ಆಗುತ್ತಿರುವ ಆರ್ಥಿಕ ಅನ್ಯಾಯಗಳ ನಡುವೆಯೂ, ರಾಜ್ಯವು ಜಿಎಸ್‌ಟಿ ಸಂಗ್ರಹ ಮತ್ತು ಜಿಡಿಪಿ ಬೆಳವಣಿಗೆಯಲ್ಲಿ ದೇಶದ ಇತರೆ ರಾಜ್ಯಗಳಿಗಿಂತ ಮುಂಚೂಣಿಯಲ್ಲಿದೆ ಎಂದು ಸಿಎಂ ಅಂಕಿಅಂಶಗಳ ಸಮೇತ ವಿವರಿಸಿದರು.

ರಾಜ್ಯಕ್ಕೆ ಸಿಗಬೇಕಾದ ಹಕ್ಕುಗಳ ವಿಷಯದಲ್ಲಿ ಕೇಂದ್ರದ ಮುಂದೆ ಮೌನವಾಗಿರುವ ಮಾಜಿ ಸಿಎಂ ಬಸವರಾಜ ಬೊಮ್ಮಾಯಿ, ಸಂಸದರಾದ ಪ್ರಹ್ಲಾದ್ ಜೋಶಿ ಮತ್ತು ಜಗದೀಶ್ ಶೆಟ್ಟರ್ ವಿರುದ್ಧ ಸಿದ್ದರಾಮಯ್ಯ ತೀವ್ರ ಆಕ್ರೋಶ ವ್ಯಕ್ತಪಡಿಸಿದರು. “ರಾಜ್ಯದ ಹಿತರಕ್ಷಣೆ ಮಾಡುವಲ್ಲಿ ಬಿಜೆಪಿ ನಾಯಕರು ವಿಫಲವಾಗಿದ್ದಾರೆ” ಎಂದು ಅವರು ಟೀಕಿಸಿದರು.

Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !