ತವಾಂಗ್‌ ಗೆ ಕಿರಣ್‌ ರಿಜಿಜು ಭೇಟಿ: ‘ದೇಶದ ಗಡಿ ಸುರಕ್ಷಿತ’ವಾಗಿದೆ ಎಂದ ಕೇಂದ್ರ ಸಚಿವರು!

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌

ಭಾರತ ಹಾಗೂ ಚೀನಾ ಸೈನಿಕರ ಮಧ್ಯೆ ಸಂಘರ್ಷ ನಡೆದ ಅರುಣಾಚಲ ಪ್ರದೇಶದ ತವಾಂಗ್‌ ಸೆಕ್ಟರ್‌ಗೆ ಕೇಂದ್ರ ಕಾನೂನು ಮತ್ತು ನ್ಯಾಯ ಸಚಿವ ಕಿರಣ್‌ ರಿಜಿಜು ಭೇಟಿ ನೀಡಿದ್ದಾರೆ.

ಅಲ್ಲಿನ ಪರಿಸ್ಥಿತಿ ಪರಿಶೀಲಿಸಿದ ಅವರು, ಸೈನಿಕರ ಜತೆ ಮಾತುಕತೆ ನಡೆಸಿ ಮಾಹಿತಿ ಪಡೆದುಕೊಂಡಿದ್ದಾರೆ. ಬಳಿಕ ಮಾತನಾಡಿದ ಅವರು, ‘ದೇಶದ ಗಡಿ ಸುರಕ್ಷಿತವಾಗಿದೆ’ ಎಂದು ಸ್ಪಷ್ಟಪಡಿಸಿದ್ದಾರೆ.

ಇದೇ ವೇಳೆ , ರಾಹುಲ್‌ ಗಾಂಧಿ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ‘ತವಾಂಗ್‌ ಗಡಿಯು ಸುರಕ್ಷಿತವಾಗಿದೆ. ದೇಶದ ಹೆಮ್ಮೆಯ ಯೋಧರನ್ನು ನಿಯೋಜಿಸಲಾಗಿದೆ. ಆದರೆ, ರಾಹುಲ್‌ ಗಾಂಧಿ ಅವರು ಸೇನೆಗೆ ಅವಮಾನಿಸುವ ಜತೆಗೆ ದೇಶದ ಘನತೆಗೆ ಧಕ್ಕೆ ತರುತ್ತಿದ್ದಾರೆ. ಅವರು ಕಾಂಗ್ರೆಸ್‌ಗೆ ಮಾತ್ರ ಸಮಸ್ಯೆಯಾಗಿಲ್ಲ, ದೇಶಕ್ಕೂ ಸಮಸ್ಯೆಯಾಗುತ್ತಿದ್ದಾರೆ. ನಮಗೆ ನಮ್ಮ ಸೇನೆಯ ಬಗ್ಗೆ ಹೆಮ್ಮೆ ಇದೆ’ ಎಂದು ಟ್ವೀಟ್‌ ಮಾಡಿದ್ದಾರೆ. ಹಾಗೆಯೇ, ಗಡಿ ಭೇಟಿ ಕುರಿತು ಫೋಟೊ ಹಂಚಿಕೊಂಡಿದ್ದಾರೆ.

ಭಾರತ್‌ ಜೋಡೋ ಯಾತ್ರೆ ಮಧ್ಯೆಯೇ ಶುಕ್ರವಾರ ಸುದ್ದಿಗೋಷ್ಠಿ ನಡೆಸಿದ್ದ ರಾಹುಲ್‌ ಗಾಂಧಿ, ‘ಅರುಣಾಚಲ ಪ್ರದೇಶದ ಗಡಿಯಲ್ಲಿ ನಮ್ಮ ಯೋಧರು ಪೆಟ್ಟು ತಿನ್ನುತ್ತಿದ್ದಾರೆ. ಚೀನಾ ಯುದ್ಧಕ್ಕೆ ಸನ್ನದ್ಧವಾಗುತ್ತಿದೆ. ಆದರೆ, ಕೇಂದ್ರ ಸರ್ಕಾರ ಮಾತ್ರ ಗಾಢ ನಿದ್ದೆಯಲ್ಲಿದೆ’ ಎಂದಿದ್ದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!