ಹೊಸದಿಗಂತ ವರದಿ ಕಲಬುರಗಿ:
ಕಲಬುರಗಿ ಜಿಲ್ಲೆಯ ಕಮಲಾಪುರ ತಾಲೂಕಿನ ಮಹಾಗಾಂವ್ ಪಟ್ಟಣ ಸಮೀಪ ಶುಕ್ರವಾರ ಕೆಕೆಆರ್ಟಿಸಿ ಬಸ್ವೊಂದು ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಯ ತಗ್ಗು ಗುಂಡಿಗೆ ಪಲ್ಟಿಯಾದ ಪರಿಣಾಮ ಚಾಲಕ, ನಿರ್ವಾಹಕ ಸೇರಿದಂತೆ ಐವರು ಸಣ್ಣಪುಟ್ಟ ಗಾಯಗೊಂಡ ಘಟನೆ ನಡೆದಿದೆ.
ಬೀದರ್ನಿಂದ ಕಲಬುರಗಿಯತ್ತ ಬರುತ್ತಿದ್ದ ಕೆಎ-38 ಎಫ್-1229 ಸಂಖ್ಯೆಯ ಕೆಕೆಆರ್ಟಿಸಿ ಬಸ್ ಮಹಾಗಾಂವ್ ಸಮೀಪ ಸಾಗುತ್ತಿದ್ದ ವೇಳೆ ಏಕಾಏಕಿ ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಯ ತಗ್ಗು ಪ್ರದೇಶಕ್ಕೆ ಉರುಳಿದೆ. ಅಪಘಾತ ಸಂಭವಿಸಿದ ವೇಳೆ ಬಸ್ನಲ್ಲಿ ಕೇವಲ ಐವರು ಪ್ರಯಾಣಿಕರಿದ್ದು, ಅದೃಷ್ಟವಶಾತ್ ಯಾರಿಗೂ ಗಂಭೀರ ಗಾಯಗಳಾಗಿಲ್ಲ.
ಅಪಘಾತದಲ್ಲಿ ಚಾಲಕ, ನಿರ್ವಾಹಕ ಹಾಗೂ ಕೆಲ ಪ್ರಯಾಣಿಕರಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಸ್ಥಳೀಯರ ಸಹಾಯದಿಂದ ಅವರನ್ನು ಸುರಕ್ಷಿತವಾಗಿ ಹೊರತೆಗೆದು ಚಿಕಿತ್ಸೆಗಾಗಿ ಕಳುಹಿಸಲಾಗಿದೆ.
ಘಟನಾ ಸ್ಥಳಕ್ಕೆ ಮಹಾಗಾಂವ್ ಪೊಲೀಸ್ ಠಾಣೆಯ ಸಿಬ್ಬಂದಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಅಪಘಾತದ ಕುರಿತು ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದಾರೆ. ಬಸ್ ಪಲ್ಟಿಯಾದ ಪರಿಣಾಮ ಕೆಲಕಾಲ ಸಂಚಾರದಲ್ಲಿ ಅಡಚಣೆ ಉಂಟಾಗಿತ್ತು.



