ಹೊಸದಿಗಂತ ವರದಿ, ಶಿವಮೊಗ್ಗ:
ನಗರದಲ್ಲಿ ಆಗಸ್ಟ್ 15 ರಂದು ಗಾಂಧಿಬಜಾರ್ ಉಪ್ಪಾರ ಕೇರಿಯಲ್ಲಿ ಪ್ರೇಮ್ ಸಿಂಗ್ಗೆ ಚಾಕು ಇರಿತ ಪ್ರಕರಣದಲ್ಲಿ ಬಂಧಿತರಾಗಿರುವ ಮೂವರು ಆರೋಪಿಗಳನ್ನು ಮತ್ತೆ ಎರಡು ದಿನಗಳ ಕಾಲ ಪೊಲೀಸ್ ವಶಕ್ಕೆ ಒಪ್ಪಿಸಲಾಗಿದೆ.
ಆರೋಪಿಗಳಾದ ತನ್ವೀರ್, ನದೀಂ ಹಾಗೂ ಅಬ್ದುಲ್ ರೆಹಮಾನ್ ಅವರನ್ನು ನ್ಯಾಯಾಲಯ ಪೊಲೀಸ್ ವಶಕ್ಕೆ ಒಪ್ಪಿಸಿದೆ.
ಆಗಸ್ಟ್ 16 ರಂದು ನ್ಯಾಯಾಲಯದ ಎದುರು ಹಾಜರುಪಡಿಸಿದಾಗ ಮೂರು ದಿನಗಳ ಕಾಲ ಪೊಲೀಸ್ ವಶಕ್ಕೆ ಒಪ್ಪಿಸಲಾಗಿತ್ತು. ಅದರ ಅವಧಿಮುಕ್ತಾಯವಾಗುವ ಹಿನ್ನೆಲೆಯಲ್ಲಿ ಗುರುವಾರ ಪುನಃ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದರು. ಈ ವೇಳೆ ಹೆಚ್ಚಿನ ತನಿಖೆ ಅಗತ್ಯ ಇರುವ ಹಿನ್ನೆಲೆಯಲ್ಲಿ ಇನ್ನೂ 05 ದಿನ ಪೊಲೀಸ್ ವಶಕ್ಕೆ ನೀಡಬೇಕೆಂದು ಸರ್ಕಾರಿ ಅಭಿಯೋಜಕರು ಮನವಿ ಸಲ್ಲಿಸಿದ್ದರು. ಆದರೆ ಆರೋಪಿಗಳ ಪರ ವಕೀಲರು ಇದಕ್ಕೆ ತೀವ್ರ ಆಕ್ಷೇಪ ವ್ಯಕ್ತಪಡಿಸಿದರು.
ವಾದ-ಪ್ರತಿವಾದ ಆಲಿಸಿದ 2ನೇ ಜೆಎಂಎಫ್ಸಿ ನ್ಯಾಯಾಲಯದ ನ್ಯಾಯಾಧೀಶ ಶಿವಕುಮಾರ್ ಅವರು 02 ದಿನಗಳ ಕಾಲ ಆರೋಪಿಗಳನ್ನು ಪೊಲೀಸ್ ವಶಕ್ಕೆ ನೀಡಿದರು. ಮೊದಲ ಆರೋಪಿ ಜಬೀ ಅಲಿಯಾಸ್ ಚರ್ಬಿ ಪೊಲೀಸರ ಗುಂಡೇಟು ತಿಂದು ಈಗಾಗಲೇ ಆಸ್ಪತ್ರೆಯಲ್ಲಿದ್ದಾನೆ.