ಹೊಸದಿಗಂತ ವರದಿ, ಮಡಿಕೇರಿ:
ಭಾನುವಾರ ರಾತ್ರಿರ ಸುರಿದ ಭಾರೀ ಮಳೆಗೆ ಭಾಗಮಂಡಲ-ಕರಿಕೆ-ಕಾಂಞಂಗಾಡ್ ಅಂತಾರಾಜ್ಯ ಹೆದ್ದಾರಿಯ ಬಹುತೇಕ ಕಡೆಗಳಲ್ಲಿ ಭೂಕುಸಿತ ಉಂಟಾಗಿದ್ದು, ಈ ಮಾರ್ಗದಲ್ಲಿ ವಾಹನ ಸಂಚಾರ ಸ್ಥಗಿತಗೊಂಡಿದೆ.
ಭಾಗಮಂಡಲದಿಂದ ಕರಿಕೆವರೆಗಿನ ಮಾರ್ಗದಲ್ಲಿ ಸುಮಾರು 12ಕಡೆಗಳಲ್ಲಿ ಬರೆ ಕುಸಿದು ರಸ್ತೆಗೆ ಬಿದ್ದಿದ್ದು, ಲೋಕೋಪಯೋಗಿ ಇಲಾಖೆಯಿಂದ ಮಣ್ಣು ತೆರವು ಕಾರ್ಯಾಚರಣೆ ಬಿರುಸಿನಿಂದ ಸಾಗಿದೆ.
ಸಂಜೆ ವೇಳೆಗೆ ತೆರವು ಕಾರ್ಯಾರಣೆ ಪೂರ್ಣಗೊಂಡು ವಾಹನ ಸಂಚಾರಕ್ಕೆ ಅನುವು ಮಾಡಲಾಗುವುದು ಎಂದು ಇಲಾಖೆಯ ಅಧಿಕಾರಿಗಳು ತಿಳಿಸಿದ್ದಾರೆ.
ಕಳೆದ ತಿಂಗಳು ಕೊಡಗಿನ ಗಡಿ ಭಾಗದಲ್ಲಿ ಆಗಿಂದಾಗ್ಗೆ ಸಂಭವಿಸಿದ ಭೂಕಂಪನದ ಸಂದರ್ಭ ಈ ಭಾಗದಲ್ಲೂ ಭೂಮಿ ನಡುಗಿದ ಅನುಭವವಾಗಿದ್ದು, ಇದೀಗ ಸುರಿಯುತ್ತಿರುವ ಮಳೆಗೆ ನೀರು ಭೂಮಿಯೊಳಗೆ ಇಂಗಿ ಭೂಕುಸಿತ ಉಂಟಾಗುತ್ತಿದೆ. ಇದರಿಂದಾಗಿ ಈ ಮಾರ್ಗದಲ್ಲಿ ವಾಹನ ಸಂಚಾರ ದುಸ್ತರವಾಗಿದೆ ಎಂದು ಕರಿಕೆ ಭಾಗದ ಸಾರ್ವಜನಿಕರು ದೂರಿದ್ದಾರೆ.
ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ