ಹೊಸ ದಿಗಂತ ವರದಿ ಮಡಿಕೇರಿ
ದಕ್ಷಿಣ ಕೊಡಗಿನ ಒಂದನೇ ರುದ್ರಗುಪ್ಪೆ ಗ್ರಾಮದಲ್ಲಿ ಹುಲಿ ದಾಳಿಗೆ ಕಾರ್ಮಿಕ ಬಲಿಯಾದ ಘಟನೆಗೆ ಸಂಬಂಧಿಸಿದಂತೆ ಗ್ರಾಮಸ್ಥರು ಹಾಗೂ ರೈತ ಸಂಘದ ಪ್ರಮುಖರು ಅಹೋರಾತ್ರಿ ಪ್ರತಿಭಟನೆ ನಡೆಸಿದ್ದಾರೆ.
ಒಂದನೇ ರುದ್ರಗುಪ್ಪೆ ಗ್ರಾಮದ ಕೊಂಗಂಡ ಅಯ್ಯಪ್ಪ ಅವರ ತೋಟದಲ್ಲಿ ಕರಿಮೆಣಸು ಕೊಯ್ಯುವ ಕೆಲಸಕ್ಕೆ ಬಂದಿದ್ದ ಗದ್ಧಮನೆ ನಿವಾಸಿ ಗಣೇಶ್ (ಪುಟ್ಟು-29) ಎಂಬವರು ಸೋಮವಾರ ಹುಲಿ ದಾಳಿಗೆ ಬಲಿಯಾಗಿದ್ದರು.
ವಿಷಯ ತಿಳಿದು ಸ್ಥಳಕ್ಕಾಗಮಿಸಿದ ಅರಣ್ಯ ಮತ್ತು ಪೊಲೀಸ್ ಇಲಾಖೆ ಸಿಬ್ಬಂದಿಗಳು ಮಹಜರು ನಡೆಸದೆಯೇ ಮೃತದೇಹವನ್ನು ತರಾತುರಿಯಲ್ಲಿ ಸಾಗಿಸಲು ಮುಂದಾದರೆನ್ನಲಾಗಿದ್ದು, ಇದರಿಂದ ಅಸಮಾಧಾನಗೊಂಡ ಗ್ರಾಮಸ್ಥರು ಪ್ರತಿಭಟನೆ ಆರಂಭಿಸಿದ್ದರು.
ಹಿರಿಯ ಅಧಿಕಾರಿಗಳು ಸ್ಥಳಕ್ಕೆ ಆಗಮಿಸುವವರೆಗೆ ಮೃತದೇಹ ತೆಗೆಯಲು ಬಿಡುವುದಿಲ್ಲ ಎಂದು ಪಟ್ಟು ಹಿಡಿದ ಗ್ರಾಮಸ್ಥರು, ಹುಲಿಯನ್ನು ಸೆರೆಹಿಡಿಯಬೇಕು ಇಲ್ಲವೇ ಕಂಡಲ್ಲಿ ಗುಂಡಿಕ್ಕಲು ತಮಗೆ ಅವಕಾಶ ನೀಡಬೇಕು ಎಂದು ಒತ್ತಾಯಿಸಿದರು. ಸ್ಥಳಕ್ಕೆ ಆಗಮಿಸಿದ ರೈತಸಂಘದ ಪ್ರಮುಖರೂ ಗ್ರಾಮಸ್ಥರ ಹೋರಾಟಕ್ಕೆ ಬೆಂಬಲ ವ್ಯಕ್ತಪಡಿಸಿದ್ದು, ಅರಣ್ಯ ಇಲಾಖೆಯ ಅರಣ್ಯ ಇಲಾಖೆ ವಿರುದ್ದ ಆಕ್ರೋಶ ವ್ಯಕ್ತಪಡಿಸಿದರು.
ವೀರಾಜಪೇಟೆ ಡಿಎಫ್ಒ ಚಕ್ರಪಾಣಿ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದ ಪ್ರತಿಭಟನಾಕಾರರು ಸ್ಥಳದಲ್ಲಿಯೇ ಮೃತದೇಹವಿಟ್ಟು ರಾತ್ರಿಯಿಡೀ ಪ್ರತಿಭಟನೆ ಮುಂದುವರೆಸಿದರು.
ಸ್ಥಳಕ್ಕೆ ಕೊಡಗು ಪೊಲೀಸ್ ವರಿಷ್ಠಾಧಿಕಾರಿ ಎಂ.ಎ.ಅಯ್ಯಪ್ಪ ಭೇಟಿ ನೀಡಿ ಪ್ರತಿಭಟನಾಕಾರರ ಮನವೊಲಿಸಲು ಪ್ರಯತ್ನಿಸಿದರಾದರೂ ಇದಕ್ಕೆ ಪ್ರತಿಭಟನಾಕಾರರು ಮಣಿಯಲಿಲ್ಲ. ಅರಣ್ಯ ಇಲಾಖೆಯ ಹಿರಿಯ ಅಧಿಕಾರಿಗಳು ಸ್ಥಳಕ್ಕೆ ಆಗಮಿಸಬೇಕು. ಹುಲಿದಾಳಿಗೆ ಶಾಶ್ವತ ಪರಿಹಾರ ಕಲ್ಪಿಸುವುದರೊಂದಿಗೆ ಅಮಾಯಕರ ಜೀವ ಬಲಿಯಾಗುವುದನ್ನು ತಪ್ಪಿಸಬೇಕು ಎಂದು ಆಗ್ರಹಿಸಿದರು.
ಕಳೆದ 10 ದಿನಗಳ ಹಿಂದೆ ಇದೇ ಪ್ರದೇಶದಲ್ಲಿ ಅಟ್ರಂಗಡ ಸುಬ್ಬಯ್ಯ ಅವರ ಕರುವನ್ನು ಹುಲಿ ಬಲಿ ಪಡೆದುಕೊಂಡಿತ್ತೆನ್ನಲಾಗಿದೆ.