ಹೊಸದಿಗಂತ ವರದಿ ಚಿತ್ರದುರ್ಗ:
ಸರ್ಕಾರಿ ಬಸ್ ಹಾಗೂ ಆಪೆ ಆಟೋ ನಡುವೆ ಡಿಕ್ಕಿ ಸಂಭವಿಸಿದ ಪರಿಣಾಮ ಆಟೋ ಚಾಲಕ ಹಾಗೂ ಆರು ಜನ ಮಕ್ಕಳು ಗಾಯಗೊಂಡಿರುವ ಘಟನೆ ನಗರದ ಹೊಸ ಬಡ್ ಡಿಪೋ ಬಳಿಯ ರಸ್ತೆಯಲ್ಲಿ ಶನಿವಾರ ಬೆಳಿಗ್ಗೆ ನಡೆದಿದೆ.
ಗಾಯಗೊಂಡವರನ್ನು ಶರಣ ಬಸವೇಶ್ವರ ವಿದ್ಯಾಸಂಸ್ಥೆ ಶಾಲೆಯ ಮಕ್ಕಳು ಎಂದು ಗುರುತಿಸಲಾಗಿದೆ. ಗಣರಾಜ್ಯೋತ್ಸವದ ಹಿನ್ನೆಲೆಯಲ್ಲಿ ತಾಲೀಮು ನಡೆಸಲು ಇಲ್ಲಿನ ಸರ್ಕಾರಿ ವಿಜ್ಞಾನ ಕಾಲೇಜು ಮೈದಾನಕ್ಕೆ ಮಕ್ಕಳನ್ನು ಆಪೆ ಆಟೋದಲ್ಲಿ ಕರೆದೊಯ್ಯಲಾಗುತಿತ್ತು. ಡಿಪೋ ಬಳಿಯ ರಸ್ತೆಯಲ್ಲಿ ತೆರಳುತ್ತಿದ್ದ ಸಂದರ್ಭದಲ್ಲಿ ಸರ್ಕಾರಿ ಬಸ್ ಮುಖ್ಯರಸ್ತೆಗೆ ಆಗಮಿಸುತ್ತಿತ್ತು ಎನ್ನಲಾಗಿದೆ.

ಹೀಗೆ ಬಂದ ಬಸ್ ಹಾಗೂ ಆಟೋ ನಡುವೆ ಡಿಕ್ಕಿಯಾಗಿ ಆಟೋ ಪಲ್ಟಿಯಾಗಿದೆ ಎಂದು ತಿಳಿದುಬಂದಿದೆ. ಆಟೋ ರಸ್ತೆಗೆ ಬಿದ್ದ ಪರಿಣಾಮ ಆಟೋ ಚಾಲಕ ಹಾಗೂ ಇತರೆ ಅರು ಮಕ್ಕಳು ಗಾಯಗೊಂಡಿದ್ದಾರೆ. ಇಬ್ಬರು ಮಕ್ಕಳು ತೀವ್ರ ಗಾಯಗೊಂಡಿದ್ದಾರೆ. ಗಾಯಾಳುಗಳಿಗೆ ಜಿಲ್ಲಾ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ.
ಘಟನಾ ಸ್ಥಳಕ್ಕೆ ಎಸ್.ಪಿ. ರಂಜಿತ್ ಕುಮಾರ್ ಬಂಡಾರು ಭೇಟಿ ನೀಡಿ ಪರಿಶೀಲಿಸಿದ್ದಾರೆ. ಆಟೋದಲ್ಲಿ 18 ಮಕ್ಕಳನ್ನು ಕುರಿಗಳಂತೆ ತುಂಬಿಕೊಂಡು ಹೋಗಲಾಗುತ್ತಿತ್ತು. ಶಾಲಾ ಆಡಳಿತ ಮಂಡಳಿಯ ನಿರ್ಲಕ್ಷವೇ ಅವಘಡಕ್ಕೆ ಕಾರಣ ಎಂದು ಪೋಷಕರು ಶಾಲಾ ಆಡಳಿತ ಮಂಡಳಿ ವಿರುದ್ದ ಆಕ್ರೋಶ ವ್ಯಕ್ತಪಡಿಸಿದ್ದಾರೆ.



