ಹೊಸದಿಗಂತ ವರದಿ ಮಡಿಕೇರಿ:
ಕೆಎಸ್ಆರ್ಟಿಸಿ ಬಸ್ ಹಾಗೂ ದ್ವಿಚಕ್ರ ವಾಹನದ ನಡುವೆ ಸಂಭವಿಸಿದ ಅಪಘಾತದಲ್ಲಿ ಮಹಿಳೆಯೊಬ್ಬರು ಮೃತಪಟ್ಟ ಘಟನೆ ಭಾನುವಾರ ಸಂಜೆ ನಡೆದಿದೆ.
ಮೃತಪಟ್ಟವರನ್ನು ಮಲ್ಲಿಪಟ್ಟಣ ನಿವಾಸಿ ಮಂಜುಳಾ (65) ಎಂದು ಗುರುತಿಸಲಾಗಿದೆ.
ಅರಕಲಗೂಡಿನಿಂದ ಕೊಡ್ಲಿಪೇಟೆಗೆ ಬರುತ್ತಿದ್ದ KA-13-F-2211 ನೋಂದಣಿ ಸಂಖ್ಯೆಯ ಕೆಎಸ್ಆರ್ಟಿಸಿ ಬಸ್ ಹಾಗೂ ಮಲ್ಲಿಪಟ್ಟಣ ಕಡೆಗೆ ತೆರಳುತ್ತಿದ್ದ KA-12-R-9392 ನೋಂದಣಿ ಸಂಖ್ಯೆಯ ಬೈಕ್ ನಡುವೆ ಅಪಘಾತ ಸಂಭವಿಸಿದೆ.
ಬೈಕ್ನ ಹಿಂಬದಿಯಲ್ಲಿ ಕುಳಿತಿದ್ದ ಮಂಜುಳಾ ಅವರು ಬಸ್ನ ಹಿಂಬದಿ ಚಕ್ರದಡಿ ಸಿಲುಕಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಬೈಕ್ ಚಲಾಯಿಸುತ್ತಿದ್ದ ಕಿರಿಕೊಡ್ಲಿ ನಿವಾಸಿ ನಿವೃತ್ತ ಪೋಸ್ಟ್ಮ್ಯಾನ್ ದೇವಪ್ಪ ಗಾಯಗೊಂಡಿದ್ದು, ಹೆಚ್ಚಿನ ಚಿಕಿತ್ಸೆಗಾಗಿ ಅರಕಲಗೂಡು ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ.
ಸ್ಥಳಕ್ಕೆ ಪೊಲೀಸರ ಭೇಟಿ
ಘಟನೆಯ ಮಾಹಿತಿ ತಿಳಿಯುತ್ತಿದ್ದಂತೆ ಕೊಡ್ಲಿಪೇಟೆ ಉಪ ಪೊಲೀಸ್ ಠಾಣೆ ಹಾಗೂ ಶನಿವಾರಸಂತೆ ಠಾಣೆಯ ಪೊಲೀಸರು ಸ್ಥಳಕ್ಕೆ ಧಾವಿಸಿ ಪರಿಶೀಲನೆ ನಡೆಸಿ ಮುಂದಿನ ಕಾನೂನು ಕ್ರಮ ಕೈಗೊಂಡಿದ್ದಾರೆ.
ರಸ್ತೆ ದುರಸ್ತಿಗೆ ಸ್ಥಳೀಯರ ಆಗ್ರಹ
ರಸ್ತೆಯಲ್ಲಿ ಗುಂಡಿಗಳು ಬಿದ್ದಿರುವುದೇ ಅಪಘಾತಕ್ಕೆ ಪ್ರಮುಖ ಕಾರಣ ಎಂದು ಸ್ಥಳೀಯರು ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಸಂಬಂಧಪಟ್ಟ ಅಧಿಕಾರಿಗಳು ಕೂಡಲೇ ರಸ್ತೆ ದುರಸ್ತಿ ಕಾಮಗಾರಿ ಕೈಗೊಂಡು ಅಪಘಾತಗಳನ್ನು ತಡೆಯಬೇಕು ಎಂದು ಆಗ್ರಹಿಸಿದ್ದಾರೆ.



