ಹೊಸದಿಗಂತ ವರದಿ ಮಡಿಕೇರಿ:
ಚಾಲಕನ ನಿಯಂತ್ರಣ ತಪ್ಪಿ ಕೆಎಸ್ಆರ್ಟಿಸಿ ಬಸ್ ರಸ್ತೆ ಪಕ್ಕದ ಮರಕ್ಕೆ ಡಿಕ್ಕಿಯಾದ ಘಟನೆ ಸೋಮವಾರಪೇಟೆ ತಾಲೂಕಿನ ಸೂರ್ಲಬ್ಬಿ ಸಮೀಪದ ಕುಂಬಾರಗಡಿಗೆ ಎಂಬಲ್ಲಿ ಗುರುವಾರ ಬೆಳಗ್ಗೆ ನಡೆದಿದೆ.
ಮಡಿಕೇರಿಯಿಂದ ಸೂರ್ಲಬ್ಬಿ ಮಾರ್ಗವಾಗಿ ಸೋಮವಾರಪೇಟೆಗೆ ತೆರಳುತ್ತಿದ್ದ ಕೆಎಸ್ಆರ್ಟಿಸಿ ಬಸ್ ಕುಂಬಾರಗಡಿಗೆ ಗ್ರಾಮದ ತಿರುವಿನಲ್ಲಿ ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಪಕ್ಕದ ಮರಕ್ಕೆ ಡಿಕ್ಕಿಯಾಗಿದೆ. ಬಸ್ನಲ್ಲಿ ಹೆಚ್ಚಾಗಿ ಶಾಲಾ ಮಕ್ಕಳೇ ಪ್ರಯಾಣಿಸುತ್ತಿದ್ದು, ಅದೃಷ್ಟವಶಾತ್ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ.
ಬಸ್ ಮರಕ್ಕೆ ಡಿಕ್ಕಿಯಾಗದೆ ಮುಂದೆ ಚಲಿಸಿದ್ದಲ್ಲಿ ಸುಮಾರು 50 ಅಡಿ ಪ್ರಪಾತಕ್ಕೆ ಉರುಳಿ ಬೀಳುವ ಸಂಭವವಿತ್ತು ಎನ್ನಲಾಗಿದೆ.
ಸೂರ್ಲಬ್ಬಿ ರಸ್ತೆ ಕಿರಿದಾಗಿದ್ದು, ಹೆಚ್ಚು ತಿರುವುಗಳೇ ಇವೆ. ಇಲ್ಲಿ ಯಾವುದೇ ನಾಮಫಲಕ ಇಲ್ಲದಿರುವುದೇ ಅಪಘಾತಕ್ಕೆ ಕಾರಣ ಎಂದು ಗ್ರಾಮಸ್ಥರು ಆರೋಪಿಸಿದ್ದಾರೆ. ಸಂಬಂಧಪಟ್ಟ ಅಧಿಕಾರಿಗಳು ತಕ್ಷಣವೇ ನಾಮಫಲಕ ಅಳವಡಿಸಲು ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿದ್ದಾರೆ.