ಕರಾವಳಿ ಜಿಲ್ಲೆಗಳಿಗೆ ಕುಚಲಕ್ಕಿ ಪೂರೈಕೆ: ನಳಿನ್‍ ಕುಮಾರ್ ಕಟೀಲ್ ನಿಯೋಗದ ಮನವಿಗೆ ಸಿಎಂ ಬೊಮ್ಮಾಯಿ ಸಮ್ಮತಿ

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌ 

ರಾಜ್ಯದ ಕರಾವಳಿ ಜಿಲ್ಲೆಗಳಾದ ಉಡುಪಿ, ದಕ್ಷಿಣ ಕನ್ನಡ ಹಾಗೂ ಉತ್ತರ ಕನ್ನಡ ಜಿಲ್ಲೆಗಳ ಜನರ ಪ್ರಮುಖ ಆಹಾರವಾಗಿರುವ ಕುಚಲಕ್ಕಿಯನ್ನು ಗುಣಮಟ್ಟದಲ್ಲಿ ಪಡಿತರದಾರರಿಗೆ ವಿತರಿಸಲು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸಮ್ಮತಿಸಿದ್ದಾರೆ.

ರಾಜ್ಯ ಬಿಜೆಪಿ ಅಧ್ಯಕ್ಷರಾದ ನಳಿನ್ ಕುಮಾರ್ ಕಟೀಲ್ ನೇತೃತ್ವದಲ್ಲಿ ಸಮಾಜ ಕಲ್ಯಾಣ ಮತ್ತು ಹಿಂದುಳಿದ ವರ್ಗಗಳ ಕಲ್ಯಾಣ ಸಚಿವ ಕೋಟ ಶ್ರೀನಿವಾಸ್ ಪೂಜಾರಿ ಅವರು ಹಾಗೂ ರಾಜ್ಯ ಆಹಾರ ಮತ್ತು ನಾಗರಿಕ ಸರಬರಾಜು ನಿಗಮದ ಉಪಾಧ್ಯಕ್ಷ ಕಿರಣ್ ಕುಮಾರ್ ಕೊಡ್ಗಿ ಅವರು ಇಂದು ಮುಖ್ಯಮಂತ್ರಿಯವರನ್ನು ಭೇಟಿಯಾಗಿ ಚರ್ಚಿಸಿದರು.

ಬಳಿಕ ನಿಯೋಗದ ಪ್ರಸ್ತಾವನೆಗೆ ಸಿಎಂ ಸಮ್ಮತಿಸಿದ್ದು, ಕರಾವಳಿ ಜಿಲ್ಲೆಗಳ ಪಡಿತರದಾರರಿಗೆ ಗುಣಮಟ್ಟದ ಕುಚಲಕ್ಕಿ ವಿತರಣೆಗೆ ಕ್ರಮ ವಹಿಸಲು ಮುಖ್ಯಮಂತ್ರಿ ಬೊಮ್ಮಾಯಿ ಅವರು ಒಪ್ಪಿರುವುದಾಗಿ ನಳಿನ್‍ಕುಮಾರ್ ಕಟೀಲ್ ಅವರು ತಿಳಿಸಿದ್ದಾರೆ.

ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿ ಪಡಿತರ ಚೀಟಿದಾರರಿಗೆ ಸಾರ್ವಜನಿಕ ವಿತರಣಾ ಪದ್ಧತಿ ಅಡಿ ಕುಚಲಕ್ಕಿಯನ್ನು ವಿತರಿಸಲು ಅಗತ್ಯವಿರುವ 299.33 ಕೋಟಿಗಳಷ್ಟು ಹಣ ಬಿಡುಗಡೆ ಮಾಡಲು ಮುಖ್ಯಮಂತ್ರಿ ಯವರು ಒಪ್ಪಿದ್ದು ಕರಾವಳಿಗರ ಪರವಾಗಿ ಮುಖ್ಯಮಂತ್ರಿಯವರಿಗೆ ಅಭಿನಂದನೆ ಸಲ್ಲಿಸುತ್ತೇನೆ ಎಂದ ಅವರು, ಈ ಯೋಜನೆ ಅನುಷ್ಟಾನದಿಂದ 6,21,804 ಪಡಿತರ ಚೀಟಿ ಹೊಂದಿರುವ ಕುಟುಂಬಗಳಿಗೆ ಅನುಕೂಲವಾಗಲಿದೆ.

ಪ್ರಸ್ತುತ ಕರಾವಳಿ ಜಿಲ್ಲೆಗಳಾದ ದಕ್ಷಿಣಕನ್ನಡ, ಉಡುಪಿ ಮತ್ತು ಉತ್ತರಕನ್ನಡ ಜಿಲ್ಲೆಯ ಪಡಿತರ ಚೀಟಿದಾರರಿಗೆ ಸಾರ್ವಜನಿಕ ವಿತರಣಾ ಪದ್ಧತಿಯಡಿ ವಿತರಿಸುವ ಅಕ್ಕಿಯ ಪ್ರಮಾಣದಲ್ಲಿ ಶೇ. 50% ರಷ್ಟು ಕುಚಲಕ್ಕಿಯನ್ನು ವಿತರಣೆ ಮಾಡಲಾಗುತ್ತಿದೆ. ಈ ಅಕ್ಕಿಯ ಪ್ರಮಾಣವನ್ನು ಭಾರತ ಆಹಾರ ನಿಗಮದಿಂದ ಎತ್ತುವಳಿ ಮಾಡಲಾಗುತ್ತಿದೆ. ಅದರೆ ಈ ಕುಚಲಕ್ಕಿಯಲ್ಲಿ ರುಚಿಯ ಪ್ರಮಾಣ ಕಡಿಮೆ ಇದ್ದು ಇದರ ಆಹಾರವನ್ನು ಸೇವಿಸಲಾಗುವುದಿಲ್ಲ ಎಂಬುದಾಗಿ ಆ ಭಾಗದ ಪಡಿತರ ಚೀಟಿದಾರರಿಂದ ದೂರುಗಳು ಬಂದಿದೆ. ಈ ಬಗ್ಗೆ ಆ ಭಾಗದ ಸ್ಥಳಿಯ ಶಾಸಕರ ವತಿಯಿಂದಲೂ ದೂರುಗಳು ಬಂದ ಹಿನ್ನೆಲೆಯಲ್ಲಿ ಕುಚಲಕ್ಕಿಯನ್ನು ಭಾರತ ಆಹಾರ ನಿಗಮದಿಂದ ಎತ್ತುವಳಿ ಮಾಡದೇ ಸ್ಥಳಿಯವಾಗಿ ಸರ್ಕಾರವೇ ಕನಿಷ್ಠ ಬೆಂಬಲ ಬೆಲೆ ಯೋಜನೆಯಡಿ ಭತ್ತವನ್ನು ಖರೀದಿಸಿ ಅದರಿಂದ ಕುಚಲಕ್ಕಿಯನ್ನಾಗಿ ಪರಿವರ್ತಿಸಿ ಸಾರ್ವಜನಿಕ ವಿತರಣಾ ಪದ್ಧತಿಯಡಿ ಪಡಿತರ ಚೀಟಿದಾರರಿಗೆ ವಿತರಿಸಿದರೆ, ಅದನ್ನು ಒಳ್ಳೆಯ ಆಹಾರವನ್ನಾಗಿ ಉಪಯೋಗಿಸುವರು ಹಾಗೂ ಇದರಿಂದ ಸ್ಥಳೀಯ ರೈತರಿಗೂ ಅನುಕೂಲವಾಗಲಿದೆ ಎಂದು ಮುಖ್ಯಮಂತ್ರಿಯವರಿಗೆ ವಿವರಿಸಲಾಯಿತು.

ಈಗಾಗಲೆ ಕೇರಳ ರಾಜ್ಯ ಈ ವ್ಯವಸ್ಥೆಯನ್ನು ಅಳವಡಿಕೊಂಡಿರುವುದಾಗಿ ಮುಖ್ಯಮಂತ್ರಿಗಳ ಗಮನಕ್ಕೆ ತರಲಾಯಿತು. ಪ್ರಸ್ತುತ ಕರ್ನಾಟಕ ರಾಜ್ಯದ ಕರಾವಳಿ ಜಿಲ್ಲೆಗಳಾದ ದಕ್ಷಿಣಕನ್ನಡ, ಉಡುಪಿ ಮತ್ತು ಉತ್ತರಕನ್ನಡ ಜಿಲ್ಲೆಗಳಲ್ಲಿ ಕುಚಲಕ್ಕಿಯನ್ನು ಉಪಯೋಗಿಸುತ್ತಿದ್ದು. ಸದರಿ ಜಿಲ್ಲೆಗಳ ಪಡಿತರ ಚೀಟಿದಾರರಿಗೆ ಕೇರಳ ರಾಜ್ಯದ ಮಾದರಿಯಲ್ಲಿ ಕನಿಷ್ಠ ಬೆಂಬಲ ಬೆಲೆ ಯೋಜನೆಯಡಿ ಭತ್ತ ಖರೀದಿಸಿ ಪರಿವರ್ತಿತ ಕುಚಲಕ್ಕಿಯನ್ನು ಸಾರ್ವಜನಿಕ ವಿತರಣಾ ಪದ್ಧತಿಯಡಿ ವಿತರಿಸಿದರೆ ಆ ಭಾಗದ ಜನರಿಗೆ ಹೆಚ್ಚು ಅನುಕೂಲವಾಗುವ ಬಗ್ಗೆ ವಿವರಿಸಲಾಗಿದೆ ಎಂದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!