ಹೊಸದಿಗಂತ ವರದಿ, ಕುಶಾಲನಗರ:
ಕಾವೇರಿ ನೀರಾವರಿ ನಿಗಮದ ವತಿಯಿಂದ ತೊರೆನೂರು ಮತ್ತು ಕಂಬಿಬಾಣೆಯಲ್ಲಿ ನಿರ್ಮಿಸಲಾಗಿರುವ ನಾಲ್ಕು ಕೋಟಿ ರೂ.ವೆಚ್ಚದ ಕಾಂಕ್ರಿಟ್ ರಸ್ತೆಯನ್ನು ಮಡಿಕೇರಿ ಕ್ಷೇತ್ರದ ಶಾಸಕ ಎಂ.ಪಿ. ಅಪ್ಪಚ್ಚು ರಂಜನ್ ಉದ್ಘಾಟಿಸಿದರು.
ಈ ಸಂದರ್ಭ ಮಾತನಾಡಿದ ಅವರು, ಕಾವೇರಿ ನೀರಾವರಿ ನಿಗಮದ ವತಿಯಿಂದ ಈಗಾಗಲೇ 17 ಕೋಟಿ ರೂ ವೆಚ್ಚದ ಕಾಮಗಾರಿಗಳಿಗೆ ಭೂಮಿ ಪೂಜೆ ನೆರವೇರಿಸಲಾಗಿದೆ. ಇದರಲ್ಲಿ ತೊರೆನೂರು ಮತ್ತು ಕಂಬಿಬಾಣೆ ಗ್ರಾಮದಲ್ಲಿ ನಾಲ್ಕು ಕೋಟಿ ವೆಚ್ಚದ ನೂತನ ಕಾಂಕ್ರಿಟ್ ರಸ್ತೆಯ ಕಾಮಗಾರಿಗಳು ಪೂರ್ಣಗೊಂಡಿವೆ ಎಂದರು.
ಗ್ರಾಮೀಣ ಪ್ರದೇಶಗಳಲ್ಲಿ ರಸ್ತೆಗಳ ಕಾಮಗಾರಿಗಳು ನಡೆಯುವುದರಿಂದ ಗ್ರಾಮದ ಪ್ರಗತಿ ಪೂರಕವಾಗುವುದು. ಅಲ್ಲದೆ ಗ್ರಾಮಾಂತರ ಪ್ರದೇಶದ ಜನರು ನಗರ ಪ್ರದೇಶಗಳಿಗೆ ಹೋಗಿ ಮನೆ ನಿವೇಶನ ಖರೀದಿ ಮಾಡುವ ಬದಲು ತಮ್ಮ ತಮ್ಮ ಗ್ರಾಮಗಳಲ್ಲಿ ಮನೆಗಳನ್ನು ನಿರ್ಮಿಸಲು ಅನುಕೂಲವಾಗಲಿದೆ. ಈಗಾಗಲೇ ರಾಜ್ಯ ಹೆದ್ದಾರಿ ಶಿರಂಗಾಲದಿಂದ ಕುಶಾಲನಗರದವರೆಗೆ ಉತ್ತಮವಾಗಿರುವುದರಿಂದ ಉಳಿದ ಉಪ ರಸ್ತೆಯ ಕಾಮಗಾರಿಗಳನ್ನು ಕೈಗೊಳ್ಳುವ ಮೂಲಕ ಗ್ರಾಮಗಳ ಅಭಿವೃದ್ಧಿಗೆ ಹೆಚ್ಚು ಅನುದಾನವನ್ನು ನೀಡಲಾಗುವುದು ಎಂದರು.
ಈ ಸಂದರ್ಭ ತೊರೆನೂರು ಗ್ರಾಮ ಪಂಚಾಯತಿ ಅಧ್ಯಕ್ಷೆ ರೂಪಾ ಮಹೇಶ್, ಉಪಾಧ್ಯಕ್ಷ ಎಂ.ಟಿ. ಬೇಬಿಯಣ್ಣ, ಗ್ರಾಮ ಪಂಚಾಯತಿ ಸದಸ್ಯರಾದ ದೇವರಾಜ್, ಶಿವಕುಮಾರ್, ಸಾವಿತ್ರಿ, ತೊರೆನೂರು ಬಸವೇಶ್ವರ ದೇವಾಲಯ ಟ್ರಸ್ಟ್ ಅಧ್ಯಕ್ಷ ಹೆಚ್.ಬಿ. ಚಂದ್ರಪ್ಪ, ಕಾರ್ಯದರ್ಶಿ ಸೋಮಾಚಾರಿ ವ್ಯವಸಾಯೋತ್ಪನ್ನ ಸಹಕಾರ ಸಂಘದ ಉಪಾಧ್ಯಕ್ಷ ಜಗದೀಶ್, ಹಾರಂಗಿ ನೀರಾವರಿ ಇಲಾಖೆಯ ಸಹಾಯಕ ಕಾರ್ಯಪಾಲಕ ಅಭಿಯಂತರ ಮಹೇಂದ್ರ ಕುಮಾರ್, ಇಂಜಿನಿಯರ್ ಸತ್ಯ, ಅಭಿವೃದ್ಧಿ ಅಧಿಕಾರಿ ಡಿ. ವೀಣಾ ಸೇರಿದಂತೆ ಅನೇಕ ಮಂದಿ ಗ್ರಾಮಸ್ಥರು ಹಾಜರಿದ್ದರು.
ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ