ಹೊಸದಿಗಂತ ಡಿಜಿಟಲ್ ಡೆಸ್ಕ್:
ಹಾಸನ ಜಿಲ್ಲೆಯ ವಿದ್ಯಾನಗರದಲ್ಲಿ ಜಾಗದ ವಿಚಾರವಾಗಿ ಉದ್ಭವಿಸಿರುವ ವಿವಾದ ಇದೀಗ ಸ್ಯಾಂಡಲ್ವುಡ್ ವಲಯದಲ್ಲೂ ಚರ್ಚೆಗೆ ಕಾರಣವಾಗಿದೆ. ನಟ ಯಶ್ ಅವರ ತಾಯಿ ಪುಷ್ಪ ಅರುಣ್ ವಿರುದ್ಧ ಅಕ್ರಮ ಜಾಗ ಒತ್ತುವರಿ ಆರೋಪ ಕೇಳಿಬಂದಿದ್ದು, ಈ ಕುರಿತು ಅವರು ಸ್ವತಃ ಸ್ಪಷ್ಟನೆ ನೀಡಿದ್ದಾರೆ.
ಅಕ್ರಮ ಭೂಮಿ ಒತ್ತುವರಿ ಆರೋಪಕ್ಕೆ ಪ್ರತಿಕ್ರಿಯಿಸಿದ ಪುಷ್ಪ ಅರುಣ್, ಇದು ತಮಗೆ ಧಕ್ಕೆ ತರುವ ಪ್ರಯತ್ನ ಎಂದು ಹೇಳಿದ್ದು, ಸಂಬಂಧಪಟ್ಟವರ ವಿರುದ್ಧ ಮಾನನಷ್ಟ ಮೊಕದ್ದಮೆ ದಾಖಲಿಸುವುದಾಗಿ ತಿಳಿಸಿದ್ದಾರೆ. ತಮ್ಮ ಬಳಿ ದಾಖಲೆಗಳಿಲ್ಲ ಎಂದು ಬೆದರಿಸಿ ಹಣ ಕೇಳಲಾಗಿದೆ ಎಂದು ಆರೋಪಿಸಿದ ಅವರು, ಸೆಲೆಬ್ರಿಟಿ ಕುಟುಂಬ ಎಂಬ ಕಾರಣಕ್ಕೆ ಉದ್ದೇಶಪೂರ್ವಕವಾಗಿ ತೊಂದರೆ ನೀಡಲಾಗುತ್ತಿದೆ ಎಂದರು. ಕಾಂಪೌಂಡ್ ನಿರ್ಮಾಣಕ್ಕೆ ಸುಮಾರು 12 ಲಕ್ಷ ರೂಪಾಯಿ ವೆಚ್ಚ ಮಾಡಿರುವುದಾಗಿ ಹೇಳಿದ ಪುಷ್ಪ, ತಾವು ತಪ್ಪು ಮಾಡಿದ್ದರೆ ಜಾಗವನ್ನು ಬಿಟ್ಟುಕೊಡಲು ಸಿದ್ಧ ಎಂದು ಹೇಳಿದ್ದಾರೆ.
ಇದನ್ನೂ ಓದಿ: Snacks Series 2 | ಬಿಸಿಬಿಸಿಯಾಗಿ ತಿನ್ನೋಕೆ ಚೀಸ್ ಲಾಲಿಪಾಪ್ ಇದ್ರೆ ಸಾಕು! ಅಲ್ವಾ?
ಈ ವಿವಾದದ ಹಿನ್ನೆಲೆ ನೋಡಿದರೆ, ವಿದ್ಯಾನಗರದಲ್ಲಿರುವ ಪುಷ್ಪ ಅವರ ಮನೆಯ ಪಕ್ಕದ ಸೈಟ್ ಲಕ್ಷ್ಮಮ್ಮ ಎಂಬವರಿಗೆ ಸೇರಿದ್ದು, ಅದನ್ನು ಒತ್ತುವರಿ ಮಾಡಿ ಕಾಂಪೌಂಡ್ ಹಾಕಲಾಗಿದೆ ಎಂಬ ಆರೋಪ ಕೇಳಿಬಂದಿತ್ತು.

