ಹೊಸದಿಗಂತ ಡಿಜಿಟಲ್ ಡೆಸ್ಕ್:
ಪಹಲ್ಗಾಮ್ ದಾಳಿಯ ಕುರಿತು ತನ್ನ ಕೆಲವು ನಾಯಕರ ನೀಡುತ್ತಿರುವ ಹೇಳಿಕೆಗಳಿಂದ ಕಾಂಗ್ರೆಸ್ ಅಂತರ ಕಾಯ್ದುಕೊಂಡಿದೆ.
ಇತ್ತೀಚಿನ ಕಾಂಗ್ರೆಸ್ ಕಾರ್ಯಕಾರಿ ಸಮಿತಿಯ ನಿರ್ಣಯ ಮತ್ತು ಅಖಿಲ ಭಾರತ ಕಾಂಗ್ರೆಸ್ ಸಮಿತಿ ಮುಖ್ಯಸ್ಥ ಮಲ್ಲಿಕಾರ್ಜುನ ಖರ್ಗೆ, ರಾಹುಲ್ ಗಾಂಧಿ ಮತ್ತು ಅಧಿಕೃತ ಎಐಸಿಸಿ ಪದಾಧಿಕಾರಿಗಳು ವ್ಯಕ್ತಪಡಿಸಿದ ಅಭಿಪ್ರಾಯಗಳು ಮಾತ್ರ ತನ್ನ ನಿಲುವನ್ನು ಪ್ರತಿನಿಧಿಸುತ್ತವೆ ಎಂದು ಕಾಂಗ್ರೆಸ್ ಹೇಳಿದೆ.
ಇತ್ತೀಚೆಗೆ ವಿಜಯ್ ವಡೆಟ್ಟಿವಾರ್, ಮಣಿಶಂಕರ್ ಅಯ್ಯರ್, ಶಶಿ ತರೂರ್, ತಾರಿಕ್ ಹಮೀದ್ ಕರ್ರಾ ಮತ್ತು ಸೈಫುದ್ದೀನ್ ಸೋಜ್ ಅವರಂತಹ ನಾಯಕರ ಹೇಳಿಕೆಗಳು ವಿವಾದಕ್ಕೆ ಕಾರಣವಾಗಿತ್ತು.
ಹೀಗಾಗಿ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಜೈರಾಮ್ ರಮೇಶ್, ಕಾಂಗ್ರೆಸ್ ಕಾರ್ಯಕಾರಿ ಸಮಿತಿಯು ಏಪ್ರಿಲ್ 24, 2025 ರಂದು ಸಭೆ ಸೇರಿ ಎರಡು ದಿನಗಳ ಹಿಂದೆ ಪಹಲ್ಗಾಮ್ನಲ್ಲಿ ಪ್ರವಾಸಿಗರ ಮೇಲೆ ನಡೆದ ಕ್ರೂರ ಭಯೋತ್ಪಾದಕ ದಾಳಿಯ ಕುರಿತು ನಿರ್ಣಯವನ್ನು ಅಂಗೀಕರಿಸಿತ್ತು. ನಂತರ, ಏಪ್ರಿಲ್ 24, 2025 ರ ಸಂಜೆ, ಕಾಂಗ್ರೆಸ್ ಅಧ್ಯಕ್ಷರು ಮತ್ತು ಲೋಕಸಭೆಯ ವಿರೋಧ ಪಕ್ಷದ ನಾಯಕರು ಸರ್ವಪಕ್ಷ ಸಭೆಯಲ್ಲಿ ಭಾಗವಹಿಸಿ ಪಕ್ಷದ ಅಭಿಪ್ರಾಯಗಳನ್ನು ಮಂಡಿಸಿದರು ಎಂದು ಹೇಳಿದ್ದಾರೆ.
ಆದ್ರೆ ಕೆಲವು ಕಾಂಗ್ರೆಸ್ ನಾಯಕರು ಮಾಧ್ಯಮಗಳೊಂದಿಗೆ ಮಾತನಾಡುತ್ತಿದ್ದಾರೆ. ಅವರು ತಮಗೆ ತೋಚಿದಂತೆ ಮಾತನಾಡುತ್ತಾರೆ ಮತ್ತು ಆ ಹೇಳಿಕೆಗಳು ಕಾಂಗ್ರೆಸ್ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ ಎಂದು ಜೈರಾಮ್ ರಮೇಶ್ ಸ್ಪಷ್ಟನೆ ನೀಡಿದ್ದಾರೆ.