ಹೊಸದಿಗಂತ ಡಿಜಿಟಲ್ ಡೆಸ್ಕ್:
ಮಹಾರಾಷ್ಟ್ರದಲ್ಲಿ ಮತ್ತೆ ಭಾಷಾ ವಿಚಾರ ಮುನ್ನೆಲೆಗೆ ಬಂದಿದ್ದು, ಈಗಾಗಲೇ ಆಟೋ ಮತ್ತು ಟ್ಯಾಕ್ಸಿ ಚಾಲಕರಿಗೆ ಮರಾಠಿ ಓದಲು ಮತ್ತು ಬರೆಯಲು ಕಡ್ಡಾಯ ಸೂಚನೆ ನೀಡಲಾಗಿದೆ. ಇದರ ಬೆನ್ನಲ್ಲೇ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಇಂದು ಮಹತ್ವದ ಹೇಳಿಕೆ ನೀಡಿದ್ದಾರೆ.
ನಾವು ಮಹಾರಾಷ್ಟ್ರಕ್ಕೆ ಬರುವವರನ್ನು ಬೇಡ ಎಂದು ಹೇಳುವುದಿಲ್ಲ. ಆದರೆ ಮರಾಠಿ ಭಾಷೆ ನಮ್ಮ ನಿಲುವು. ಹೀಗಾಗಿ ಇಲ್ಲಿ ವಾಸಿಸುವ ಪ್ರತಿಯೊಬ್ಬರು ಮರಾಠಿ ಕಲಿಯಲು ಪ್ರಯತ್ನಿಸಬೇಕು. ಅವರಿಗೆ ಕಲಿಯಲು ಕಷ್ಟ ಅನಿಸಿದರೆ, ನಾವು ಕಲಿಸುತ್ತೇವೆ ಎಂದು ಹೇಳಿದ್ದಾರೆ. ಈ ಮೂಲಕ ಮರಾಠಿ ಭಾಷೆಯ ಪ್ರಾಮುಖ್ಯತೆಯನ್ನು ಒತ್ತಿ ಹೇಳಿದ್ದಾರೆ.
ಈಗಾಗಲೇ ರಾಜ್ಯ ಸಾರಿಗೆ ಸಚಿವ ಪ್ರತಾಪ್ ಸರ್ನಾಯಕ್ ಮಹಾರಾಷ್ಟ್ರದ ಎಲ್ಲಾ ಆಟೋ ಮತ್ತು ಟ್ಯಾಕ್ಸಿ ಚಾಲಕರಿಗೆ ಮರಾಠಿ ಓದಲು ಮತ್ತು ಬರೆಯಲು ಎಷ್ಟರ ಮಟ್ಟಿಗೆ ತಿಳಿದಿದೆ ಎಂದು ತಿಳಿಯಲು ಪರೀಕ್ಷೆ ನಡೆಸಲು ಮುಂದಾಗಿದ್ದಾರೆ. ಅದಕ್ಕಾಗಿ 59 ಪ್ರಾದೇಶಿಕ ಸಾರಿಗೆ ಕಚೇರಿಗಳಲ್ಲಿ ಪರೀಕ್ಷೆ ನಡೆಸಲು ಸಿದ್ಧತೆ ಕೂಡ ನಡೆಯುತ್ತಿದೆ.
ಆದರೆ ಮಹಾ ಸರ್ಕಾರದ ಈ ನಿರ್ಧಾರದ ವಿರುದ್ಧ ಆಕ್ರೋಶ ವ್ಯಕ್ತವಾಗುತ್ತಿದೆ. ಇದು ವಲಸೆ ಕಾರ್ಮಿಕರಿಗೆ ಕಿರುಕುಳ ನೀಡುವ ಉದ್ದೇಶ ಎಂದು ಟೀಕಿಸಿದ್ದಾರೆ. ಹೀಗಾಗಿ ಮುಂದಿನ ದಿನಗಳಲ್ಲಿ ಸರ್ಕಾರದ ಈ ನಿರ್ಧಾರ ಮುಂದಿನ ದಿನಗಳಲ್ಲಿ ಯಾವ ರೀತಿ ಪರಿಣಾಮ ಬೀರುತ್ತದೆ ಎಂದು ಕಾದು ನೋಡಬೇಕಾಗಿದೆ.



