ಹೊಸದಿಗಂತ ಡಿಜಿಟಲ್ ಡೆಸ್ಕ್
ಬೆಂಗಳೂರಿನ ಶಾಂಗ್ರಿಲಾ ಹೋಟೆಲ್ನಲ್ಲಿ ನಡೆದ ಕಾಂಗ್ರೆಸ್ನ (Congress) ಶಾಸಕಾಂಗದ ಪಕ್ಷದ ಸಭೆ ಮುಕ್ತಾಯಗೊಂಡಿದೆ.
ಮುಖ್ಯಮಂತ್ರಿ ಹುದ್ದೆಗೆ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಮಧ್ಯೆ ಪೈಪೋಟಿ ಇರುವ ಹಿನ್ನೆಲೆಯಲ್ಲಿ, ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕರ ಆಯ್ಕೆಯನ್ನು ಎಐಸಿಸಿ (AICC) ಅಧ್ಯಕ್ಷರ ನಿರ್ಧಾರಕ್ಕೆ ಬಿಡಲು ಶಾಸಕಾಂಗ ಪಕ್ಷವು ಸರ್ವಾನುಮತದಿಂದ ನಿರ್ಧರಿಸಿದೆ.
ಇಷ್ಟು ದಿನ ಒಗ್ಗಟ್ಟಿನಿಂದ ಕೆಲಸ ಮಾಡಿಕೊಂಡು ಬಂದಿದ್ದೇವೆ. ಈಗ ಅಧಿಕಾರಕ್ಕಾಗಿ ಗೊಂದಲ ಮಾಡಿಕೊಳ್ಳುವುದು ಬೇಡ. ಶಾಸಕಾಂಗ ಪಕ್ಷದ ಸಭೆಯಲ್ಲಿ ಎಲ್ಲರ ಅಭಿಪ್ರಾಯ ಸಂಗ್ರಹಿಸೋಣ. ಉಳಿದಿದ್ದನ್ನು ಹೈಕಮಾಂಡ್ಗೆ ಬಿಡೋಣ ಎಂದು ವೀಕ್ಷಕರು ಹೇಳಿದ್ದಾರೆ.
ಕರ್ನಾಟಕ ಕಾಂಗ್ರೆಸ್ ಶಾಸಕಾಂಗ ನಾಯಕ ಆಯ್ಕೆಗಾಗಿ ಎಐಸಿಸಿ ಸುಶೀಲ್ ಕುಮಾರ್ ಶಿಂಧೆ, ಜಿತೇಂದ್ರ ಸಿಂಗ್ ಹಾಗೂ ದೀಪಕ್ ಬಬಾರಿಯಾ ವೀಕ್ಷಕರಾಗಿ ಆಗಮಿಸಿ ಸಭೆಯಲ್ಲಿ ಭಾಗವಹಿಸಿದರು. ಸಭೆಯಲ್ಲಿ ಮುಖ್ಯಮಂತ್ರಿ ಆಯ್ಕೆಗೆ ಸಂಬಂಧಿಸಿದ ಚರ್ಚೆ ನಡೆದಿದ್ದು, ಶಾಸಕರ ಅಭಿಪ್ರಾಯ ಸಂಗ್ರಹಿಸಲಾಯಿತು.
ಸಭೆಗೂ ಮುನ್ನ ಶಾಂಗ್ರಿಲಾ ಹೋಟೆಲ್ ಹೊರಭಾಗದಲ್ಲಿ ಡಿಕೆ ಶಿವಕುಮಾರ್ ಬೆಂಬಲಿಗರು ‘ಡಿಕೆ ಶಿವಕುಮಾರ್ ಮುಂದಿನ ಸಿಎಂ’ ಎಂದು ಘೋಷಣೆ ಕೂಗಿದರು. ಮತ್ತೊಂದೆಡೆ, ಸಿದ್ದರಾಮಯ್ಯ ಮುಂದಿನ ಸಿಎಂ ಎಂದು ಅವರ ಬೆಂಬಲಿಗರು ಘೋಷಣೆ ಕೂಗಿದ್ದು ಕಾಣಿಸಿತು.