ಹೊಸದಿಗಂತ ಡಿಜಿಟಲ್ ಡೆಸ್ಕ್:
ಚಿಕ್ಕಮಗಳೂರಿನ ಕಾಫಿ ತೋಟದಲ್ಲಿ ಕೆಲಸ ಮಾಡುತ್ತಿದ್ದ ಇಬ್ಬರು ಮಹಿಳಾ ಕಾರ್ಮಿಕರ ಮೇಲೆ ಚಿರತೆ ದಾಳಿ ಮಾಡಿ, ಗಂಭೀರವಾಗಿ ಗಾಯಗೊಳಿಸಿದೆ.
ಮೂಡಿಗೆರೆಯ ಗೌತಹಳ್ಳಿ ಗ್ರಾಮದಲ್ಲಿ ಘಟನೆ ನಡೆದಿದ್ದು,ಜನ ಭಯಭೀತರಾಗಿದ್ದಾರೆ. ದಾಳಿಗೊಳಗಾದ ಇಬ್ಬರು ಮಹಿಳೆಯರು ಅಸ್ಸಾಂ ಮೂಲದವರಾಗಿದ್ದಾರೆ. ಅವರನ್ನು ಮೂಡಿಗೆರೆಯ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ.
ಘಟನೆಯ ಮಾಹಿತಿ ತಿಳಿದ ಕೂಡಲೇ ಸ್ಥಳಕ್ಕೆ ಅರಣ್ಯ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಚಿರತೆ ದಾಳಿಯಿಂದ ಗ್ರಾಮಸ್ಥರಲ್ಲಿ ಆತಂಕ ಸೃಷ್ಟಿಯಾಗಿದ್ದು, ಕೂಡಲೇ ಚಿರತೆ ಸೆರೆ ಹಿಡಿಯುವಂತೆ ಅರಣ್ಯ ಇಲಾಖೆಯನ್ನು ಒತ್ತಾಯಿಸಿದ್ದಾರೆ.
ಮೂಡಿಗೆರೆ ತಾಲೂಕಿನ ಗೌತಹಳ್ಳಿ ಸುತ್ತಮುತ್ತ ಚಿರತೆ ಕಂಡು ಬಂದಿದೆ. ಕಸ್ಕೆ ಬೈಲ್, ಹುಲಿ ಹಂಡ್ಲು ಎಸ್ಟೇಟ್, ಕಲ್ಲುಗುಡ್ಡ, ಚಟ್ಟನ ಹಳ್ಳಿ, ಕಮ್ಮರಗೋಡು, ಗಾಡಿ ಚೌಕ, ಕಾರ್ ಬೈಲು ಮೂಡಸಸಿ, ಕನ್ನಾಪುರ, ಮಾಕೋನಹಳ್ಳಿ ಈ ಗ್ರಾಮದ ಸುತ್ತಮುತ್ತಲಿನ ಗ್ರಾಮಸ್ಥರು, ತೋಟದಲ್ಲಿ ಕೆಲಸ ಮಾಡುವ ಕಾರ್ಮಿಕರು, ವಾಹನ ಸವಾರರು ಬಹಳ ಎಚ್ಚರಿಕೆಯಿಂದ ಇರಬೇಕು ಎಂದು ಅರಣ್ಯ ಇಲಾಖೆ ಅಧಿಕಾರಿಗಳು ಮನವಿ ಮಾಡಿದ್ದಾರೆ.



