ಹೊಸದಿಗಂತ ವರದಿ, ಅಂಕೋಲಾ:
ಬಿಜೆಪಿ ಸರ್ಕಾರದ ಅಭಿವೃದ್ಧಿ ಕೆಲಸಗಳು, ಜನಪರ ಯೋಜನೆಗಳ ಕುರಿತು ಮತದಾರರಿಗೆ ಸರಿಯಾಗಿ ಮನವರಿಕೆ ಮಾಡುವ ಕೆಲಸ ಮಾಡಿದರೆ ರಾಜ್ಯದಲ್ಲಿ ಬಿಜೆಪಿ 150 ಸ್ಥಾನಗಳನ್ನು ಗೆಲ್ಲಲಿದ್ದು ಕಾರ್ಯಕರ್ತರು ಈ ದಿಶೆಯಲ್ಲಿ ತಮ್ಮ ಜವಾಬ್ದಾರಿಯನ್ನು ಸಮರ್ಥವಾಗಿ ನಿಭಾಯಿಸಬೇಕು ಎಂದು ಕೈಗಾರಿಕಾ ಸಚಿವ ಮುರುಗೇಶ ನಿರಾಣಿ ಹೇಳಿದರು.
ತಾಲೂಕಿನಲ್ಲಿ ನಡೆದ ವಿಜಯ ಸಂಕಲ್ಪ ಯಾತ್ರೆ ಸಂದರ್ಭದಲ್ಲಿ ಕಾರ್ಯಕರ್ತರೊಂದಿಗೆ ಮಾತನಾಡಿದ ಅವರು ಕಾರವಾರ ಅಂಕೋಲಾ ಕ್ಷೇತ್ರದಲ್ಲಿ ಶಾಸಕಿ ರೂಪಾಲಿ ನಾಯ್ಕ ಅವರು ಅಭಿವೃದ್ಧಿಯ ಕನಸು ಹೊತ್ತು ಅತಿ ಹೆಚ್ಚು ಅಭಿವೃದ್ಧಿ ಕೆಲಸ ಮಾಡಿರುವ ಶಾಸಕಿ ಎಂದು ಗುರುತಿಸಿಕೊಂಡಿದ್ದಾರೆ, ಕಾರವಾರ ಅಂಕೋಲಾ ಕ್ಷೇತ್ರದ ಕ್ಷೇತ್ರದಲ್ಲಿ ದೇವಾಲಯಗಳ ಅಭಿವೃದ್ಧಿಗೆ ಸುಮಾರು 20 ಕೋಟಿ ಅನುದಾನ ನೀಡುವ ಮೂಲಕ ದೇವಾಲಯಗಳ ಅಭಿವೃದ್ಧಿಗೆ ಅತಿ ಹೆಚ್ಚು ಅನುದಾನ ನೀಡಿರುವ ಶಾಸಕಿ ಎನಿಸಿದ್ದಾರೆ.
ರೂಪಾಲಿ ನಾಯ್ಕ ಅವರ ಗೆಲುವಿಗೆ ಶ್ರಮಿಸುವಂತೆ ಸಚಿವ ನಿರಾಣಿ ಸೂಚಿಸಿದರು.
ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಅವರು ಮಾತನಾಡಿ ಶಾಸಕಿ ರೂಪಾಲಿ ನಾಯ್ಕ ಅವರು ಮುಡಗೇರಿಯಲ್ಲಿ ಕೈಗಾರಿಕಾ ವಲಯದ ಭೂಮಿಗೆ ಹಲವಾರು ವರ್ಷಗಳಿಂದ ಭೂಮಿಗೆ ಪರಿಹಾರ ಸಿಗದೇ ಸಂಕಷ್ಟದಲ್ಲಿರುವ ನಿರಾಶ್ರಿತರಿಗೆ 5 ಪಟ್ಟು ಪರಿಹಾರ ಒದಗಿಸುವ ಕೆಲಸ ಮಾಡಿದ್ದಾರೆ.
ಸಂಸದ ಅನಂತಕುಮಾರ ಹೆಗಡೆ ಅವರ ಜೊತೆಗೂಡಿ ಕೇಂದ್ರ ಸಚಿವರ ಬಳಿ ಕುಳಿತು ನೌಕಾನೆಲೆ ನಿರಾಶ್ರಿತರಿಗೆ ಪರಿಹಾರ ಒದಗಿಸುವ ಕೆಲಸ ಮಾಡಿದ್ದಾರೆ ಎಂದರು.