ಹೊಸದಿಗಂತ ವರದಿ ಧಾರವಾಡ:
ಧಾರವಾಡ ನಗರದ ಜಿಲ್ಲಾ ಕ್ರೀಡಾಂಗಣದಲ್ಲಿ ಜಿಲ್ಲಾಡಳಿತ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಯೋಗದಲ್ಲಿ 80ನೇ ಸ್ವಾತಂತ್ರ್ಯ ದಿನಾಚರಣೆ ಕಾರ್ಯಕ್ರಮ ಅತ್ಯಂತ ವಿಜೃಂಭಣೆ ಹಾಗೂ ಸಡಗರದಿಂದ ಆಚರಿಸಲಾಯಿತು.
ಸಾರ್ವಜನಿಕ ಧ್ವಜಾರೋಹಣ ನೆರವೇರಿಸಿದ ಉಸ್ತುವಾರಿ ಸಚಿವ ಸಂತೋಷ್ ಲಾಡ್, ನಾಡಿನ ಜನತೆಗೆ ಸ್ವಾತಂತ್ರ್ಯ ದಿನಾಚರಣೆಯ ಶುಭಾಶಯ ಕೋರಿದರು. ಬಳಿಕ ಮಾತನಾಡಿದ ಅವರು, ನಾವು ಇಂದು ಅನುಭವಿಸವ ಸ್ವಾತಂತ್ರ್ಯವು ಲಕ್ಷಾಂತರ ಮಹಾನ್ ನಾಯಕರ ತ್ಯಾಗ ಮತ್ತು ಬಲಿದಾನದ ಫಲವಾಗಿದೆ. ಈ ಅಮೂಲ್ಯವಾದ ಸ್ವಾತಂತ್ರ್ಯವನ್ನು ಕಾಪಾಡಿಕೊಂಡು, ದೇಶದ ಸಮಗ್ರತೆ ಮತ್ತು ಭಾವೈಕ್ಯತೆಯನ್ನು ಎತ್ತಿಹಿಡಿಯುವುದು ನಮ್ಮೆಲ್ಲರ ಕರ್ತವ್ಯ ಎಂದು ಹೇಳಿದರು.
ಇದೇ ವೇಳೆ ಜಿಲ್ಲೆಯ ಅಭಿವೃದ್ಧಿ ಯೋಜನೆಗಳನ್ನು ಪ್ರಸ್ತಾಪಿಸಿದ ಅವರು, ಸರ್ಕಾರವು ಜನಪರ ಯೋಜನೆಗಳನ್ನು ಪ್ರತಿಯೊಬ್ಬರಿಗೂ ತಲುಪಿಸಲು ಬದ್ಧವಾಗಿದೆ ಎಂದು ಭರವಸೆ ನೀಡಿದರು.
ಆಕರ್ಷಕ ಪಥಸಂಚಲನ:
ಪೊಲೀಸ್ ಪಡೆ, ಗೃಹರಕ್ಷಕ ದಳ, ಎನ್ಸಿಸಿ. ಸ್ಕೌಟ್ಸ್ ಅಂಡ್ ಗೈಡ್ಸ್ ಹಾಗೂ ವಿವಿಧ ಶಾಲಾ-ಕಾಲೇಜು ವಿದ್ಯಾರ್ಥಿಗಳಿಂದ ಶಿಸ್ತುಬದ್ಧ ಪಥಸಂಚಲನ ನಡೆಯಿತು. ಸಚಿವರು ಪಥಸಂಚಲನದ ಗೌರವ ರಕ್ಷೆ ಸ್ವೀಕರಿಸಿದರು.
ಇದನ್ನೂ ಓದಿ:
ಸಾಂಸ್ಕೃತಿಕ ವೈಭವ:
ವಿವಿಧ ಶಾಲಾ ಮಕ್ಕಳಿಂದ ದೇಶಭಕ್ತಿ ಬಿಂಬಿಸುವ ಆಕರ್ಷಕ ಸಾಂಸ್ಕೃತಿಕ ಕಾರ್ಯಕ್ರಮಗಳು ಮತ್ತು ಸಮೂಹ ನೃತ್ಯಗಳು ನೆರೆದಿದ್ದ ಸಾರ್ವಜನಿಕರ ಮನಸೂರೆಗೊಂಡವು
ಸಮಾರಂಭದಲ್ಲಿ ಜಿಲ್ಲಾಧಿಕಾರಿಗಳು, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳು, ಜನಪ್ರತಿನಿಧಿಗಳು, ಹಿರಿಯ ಅಧಿಕಾರಿಗಳು, ಸ್ವಾತಂತ್ರ್ಯ ಹೋರಾಟಗಾರರು, ಶಾಲಾ-ಕಾಲೇಜು ವಿದ್ಯಾರ್ಥಿಗಳು, ಅಪಾರ ಸಂಖ್ಯೆಯ ಸಾರ್ವಜನಿಕರು ಭಾಗವಹಿಸಿದ್ದರು.



