ಹೊಸ ದಿಗಂತ ಡಿಜಿಟಲ್ ಡೆಸ್ಕ್:
2013ರಲ್ಲಿ ಚಂಡೀಗಢದಲ್ಲಿ ಎಂಜಿನಿಯರಿಂಗ್ ಅಧ್ಯಯನ ಮಾಡುತ್ತಿದ್ದ ಹರೀಶ್ ರಾಣಾ ಎಂಬವರು ನಾಲ್ಕನೇ ಮಹಡಿಯಿಂದ ಬಿದ್ದು ತೀವ್ರ ಗಾಯಗೊಂಡಿದ್ದರು. ಬಳಿಕ ಕೋಮಾಕ್ಕೆ ಜಾರಿದ್ದ ಅವರು ಮೊದಲಿನಂತಾಗುವ ಸಾಧ್ಯತೆ ಕಡಿಮೆ ಇರುವುದರಿಂದ ಅವರಿಗೆ ದಯಾ ಮರಣ ನೀಡುವಂತೆ ಕೋರಿ ಅವರ ಕುಟುಂಬವು ಸುಪ್ರೀಂ ಕೋರ್ಟ್ ಗೆ ಅರ್ಜಿ ಸಲ್ಲಿಸಿತ್ತು. ಇದರ ಕುರಿತು ಸುಪ್ರೀಂ ಕೋರ್ಟ್ ಜನವರಿ 13ರಂದು ಅಂತಿಮ ನಿರ್ಧಾರ ಕೈಗೊಳ್ಳಲಿದೆ.
ಹರೀಶ್ ರಾಣಾ ಅವರಿಗೆ ದಯಾಮರಣಕ್ಕೆ ಅವಕಾಶ ನೀಡಬೇಕೆ ಎಂದು ಸುಪ್ರೀಂ ಕೋರ್ಟ್ ಜನವರಿ 13ರಂದು ನಿರ್ಧರಿಸಲಿದ್ದು, ಇದು ನೈತಿಕ ಮತ್ತು ಕಾನೂನು ಪ್ರಶ್ನೆಗಳನ್ನು ಹುಟ್ಟುಹಾಕಿದೆ. ಇದಕ್ಕೂ ಮೊದಲು ಅವರ ಪೋಷಕರ ವಿಚಾರಣೆ ನ್ಯಾಯಾಲಯದಲ್ಲಿ ನಡೆಯಲಿದೆ.
ಈ ಕುರಿತು ನ್ಯಾಯಮೂರ್ತಿಗಳಾದ ಜೆ.ಬಿ. ಪಾರ್ದಿವಾಲಾ ಮತ್ತು ಕೆ.ವಿ. ವಿಶ್ವನಾಥನ್ ಅವರ ಪೀಠವು ತೀರ್ಪು ನೀಡಲಿದೆ. ಇದಕ್ಕಾಗಿ ರಾಣಾ ಅವರ ದೇಹ ಸ್ಥಿತಿಯನ್ನು ವಿವರವಾಗಿ ಪರೀಕ್ಷಿಸಿರುವ ದೆಹಲಿಯ ಏಮ್ಸ್ನ ದ್ವಿತೀಯ ವೈದ್ಯಕೀಯ ಮಂಡಳಿಯ ವರದಿಯನ್ನು ವಕೀಲೆ ರಶ್ಮಿ ನಂದಕುಮಾರ್ ಮತ್ತು ಹೆಚ್ಚುವರಿ ಸಾಲಿಸಿಟರ್ ಜನರಲ್ ಐಶ್ವರ್ಯ ಭಾಟಿ ಅವರು ಅಧ್ಯಯನ ನಡೆಸುವಂತೆ ನ್ಯಾಯಾಲಯ ನಿರ್ದೇಶನ ನೀಡಿದೆ. ಅಲ್ಲದೆ ಇದು ತುಂಬಾ ದುಃಖಕರ ವರದಿ ಮತ್ತು ನಮಗೆ ದೊಡ್ಡ ಸವಾಲು. ಆದರೆ ಯುವಕನನ್ನು ಹೀಗೆಯೇ ಇಡಲು ಸಾಧ್ಯವಿಲ್ಲ ಎಂದು ನ್ಯಾಯಾಲಯ ತಿಳಿಸಿದೆ.
ಅರ್ಜಿ ವಿಚಾರಣೆಗೆ ಸಂಬಂಧಿಸಿ ರಾಣಾ ಅವರ ಪೋಷಕರು ಮತ್ತು ಒಡಹುಟ್ಟಿದವರನ್ನು ಜನವರಿ 13 ರಂದು ನ್ಯಾಯಾಲಯಕ್ಕೆ ಹಾಜರಾಗುವಂತೆ ಸಮನ್ಸ್ ನೀಡಲಾಗಿದೆ. ದಯಾಮರಣಕ್ಕೆ ಸಂಬಂಧಿಸಿದ ಸಂಪೂರ್ಣ ಪ್ರಕ್ರಿಯೆಯನ್ನು ಅನುಸರಿಸಿ ರಾಣಾ ಅವರ ಜೀವ ಉಳಿಸುವ ಚಿಕಿತ್ಸೆಯನ್ನು ಹಿಂತೆಗೆದುಕೊಳ್ಳಬೇಕೆ ಅಥವಾ ಬೇಡವೇ ಎಂಬುದರ ಕುರಿತು ಸುಪ್ರೀಂ ಕೋರ್ಟ್ ನಿರ್ಧಾರ ಕೈಗೊಳ್ಳಲಿದೆ.
ರಾಣಾ ಅವರಿಗೆ ಏನಾಗಿತ್ತು?
ಚಂಡೀಗಢದಲ್ಲಿ ಎಂಜಿನಿಯರಿಂಗ್ ಅಧ್ಯಯನ ಮಾಡುತ್ತಿದ್ದ ಹರೀಶ್ ರಾಣಾ 2013 ರಲ್ಲಿ ನಾಲ್ಕನೇ ಮಹಡಿಯಿಂದ ಬಿದ್ದು ತೀವ್ರವಾಗಿ ಗಾಯಗೊಂಡಿದ್ದರು. ಅವರ ತಲೆಗೆ ತೀವ್ರ ಗಾಯಗಳಾಗಿದ್ದು, ಬಳಿಕ ಅವರು ಕೋಮಾಕ್ಕೆ ಜಾರಿದ್ದರು. ಪಿಜಿಐ ಚಂಡೀಗಢ, ದೆಹಲಿಯ ಏಮ್ಸ್, ರಾಮ್ ಮನೋಹರ್ ಲೋಹಿಯಾ ಆಸ್ಪತ್ರೆ, ಲೋಕ ನಾಯಕ್ ಜೈ ಪ್ರಕಾಶ್ ನಾರಾಯಣ್ ಆಸ್ಪತ್ರೆ ಮತ್ತು ಫೋರ್ಟಿಸ್ ಆಸ್ಪತ್ರೆಯಲ್ಲಿ ಸಾಕಷ್ಟು ಚಿಕಿತ್ಸೆ ನೀಡಿದರೂ ಪ್ರಯೋಜನವಾಗಿರಲಿಲ್ಲ.
ಹಲವು ವರ್ಷಗಳಿಂದ ಮನೆಯಲ್ಲೇ ಅವರಿಗೆ ಚಿಕಿತ್ಸೆ ನೀಡಲಾಗುತ್ತಿದೆ. ಆದರೆ ದೀರ್ಘಕಾಲದ ವೈದ್ಯಕೀಯ ಆರೈಕೆಯು ಮನೆಯವರಿಗೆ ಹೊರೆಯಾಗಿ ಪರಿಣಮಿಸಿದೆ. ಇದಕ್ಕಾಗಿ ಕುಟುಂಬವು 2018 ಮತ್ತು 2023ರಲ್ಲಿ ದಯಾಮರಣ ಅರ್ಜಿಯನ್ನು ಸಲ್ಲಿಸಿದ್ದು, ಇದನ್ನು ಸುಪ್ರೀಂ ಕೋರ್ಟ್ ತಿರಸ್ಕರಿಸಿತ್ತು.

