ಹೊಸದಿಗಂತ ಡಿಜಿಟಲ್ ಡೆಸ್ಕ್;
ಬಿಜೆಪಿ ಸರ್ಕಾರದ ಅವಧಿಯಲ್ಲಿ ಸ್ಥಾಪಿಸಲಾದ 10 ಹೊಸ ವಿಶ್ವವಿದ್ಯಾಲಯಗಳ ಪೈಕಿ ಒಂಬತ್ತು ವಿಶ್ವವಿದ್ಯಾಲಯಗಳನ್ನು ಮುಚ್ಚಲು ಸಚಿವ ಸಂಪುಟ ಉಪಸಮಿತಿ ತೀರ್ಮಾನಿಸಿದೆ.
ವಿಶ್ವವಿದ್ಯಾಲಯಗಳ ಆರ್ಥಿಕ ಸ್ಥಿತಿಗತಿಯ ಪರಿಶೀಲನೆ ಕುರಿತು ಗುರುವಾರ ನಡೆಸಿದ ಮೊದಲ ಸಭೆಯಲ್ಲಿ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅಧ್ಯಕ್ಷತೆಯ ಈ ಉಪಸಮಿತಿಯು, ಬೀದರ್ ವಿಶ್ವವಿದ್ಯಾಲಯ ಹೊರತುಪಡಿಸಿ ಬೆಂಗಳೂರಿನ ಮಹಾರಾಣಿ ಕ್ಲಸ್ಟರ್ ಮತ್ತು ನೃಪತುಂಗ ವಿಶ್ವವಿದ್ಯಾಲಯ ಸೇರಿ 9 ವಿಶ್ವವಿದ್ಯಾಲಯಗಳನ್ನು ಮುಚ್ಚಲು ತೀರ್ಮಾನ ಕೈಗೊಂಡಿದೆ ಎನ್ನಲಾಗಿದೆ.
ಇತರ ವಿಶ್ವವಿದ್ಯಾಲಯಗಳಿಗೆ ಹೋಲಿಸಿದರೆ, ಬೀದರ್ ವಿಶ್ವವಿದ್ಯಾಲಯ 150 ಸಂಯೋಜಿತ ಕಾಲೇಜುಗಳನ್ನು ಹೊಂದಿದ್ದು, ಉತ್ತಮವಾಗಿ ಕಾರ್ಯನಿರ್ವಹಿಸುತ್ತಿದೆ. ಯಾವುದೇ ವಿಶ್ವವಿದ್ಯಾಲಯ ಸುಗಮವಾಗಿ ನಡೆಯಲು ಸಂಯೋಜಿತ ಕಾಲೇಜುಗಳ ಶುಲ್ಕ ಮುಖ್ಯವಾಗಿರುತ್ತದೆ. ಹೀಗಾಗಿ, ಈ ವಿಶ್ವವಿದ್ಯಾಲಯವನ್ನು ಉಳಿಸಿಕೊಳ್ಳಲು ತೀರ್ಮಾನಿಸಲಾಗಿದೆ ಎಂದು ಮೂಲಗಳು ತಿಳಿಸಿವೆ.
ಯಾವ್ಯಾವ ವಿಶ್ವವಿದ್ಯಾಲಯಗಳು ಮುಚ್ಚಲಿವೆ?
ಹಾಸನ, ಚಾಮರಾಜನಗರ, ಹಾವೇರಿ, ಕೊಡಗು, ಕೊಪ್ಪಳ, ಬಾಗಲಕೋಟೆ, ಮಹಾರಾಣಿ ಕ್ಲಸ್ಟರ್, ಮಂಡ್ಯ ಮತ್ತು ನೃಪತುಂಗ ವಿಶ್ವವಿದ್ಯಾಲಯಗಳನ್ನು ಮುಚ್ಚುವ ಸಾಧ್ಯತೆ ಇದೆ.
ಈ ಕುರಿತು ಮಾತನಾಡಿದ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್, ರಾಜ್ಯದ ವಿಶ್ವವಿದ್ಯಾನಿಲಯಗಳ ಕಾರ್ಯಕ್ಷಮತೆ ಮತ್ತು ಆರ್ಥಿಕ ಸ್ಥಿತಿಗತಿಗಳ ಅಧ್ಯಯನಕ್ಕಾಗಿ ರಚಿಸಲಾದ ಸಚಿವ ಸಂಪುಟ ಉಪಸಮಿತಿಯು ವಿಶ್ವವಿದ್ಯಾಲಯಗಳು ಮತ್ತು ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ನಿರ್ಧಾರಗಳನ್ನು ತೆಗೆದುಕೊಳ್ಳುತ್ತದೆ ಎಂದು ತಿಳಿಸಿದ್ದಾರೆ.
ವಿಶ್ವವಿದ್ಯಾಲಯಗಳನ್ನು ಮುಚ್ಚಲು ಸರ್ಕಾರ ಮುಂದಾಗಿದೆಯೇ ಎಂಬ ಪ್ರಶ್ನೆಗೆ ಶಿವಕುಮಾರ್ ಪ್ರತಿಕ್ರಿಯಿಸಿ, ‘ನಿಮ್ಮ ಮಾತಿಗೆ ನಾನು ತಲೆ ಕೆಡಿಸಿಕೊಳ್ಳುವುದಿಲ್ಲ, ನಿರ್ದಿಷ್ಟವಾಗಿ ಹೇಳುವ ನಿಮ್ಮ ಪ್ರಯತ್ನ ಫಲಿಸುವುದಿಲ್ಲ. ಬೇರೆಯವರನ್ನು ನಿಭಾಯಿಸಿದಂತೆ ನೀವು ನನ್ನನ್ನು ನಿಭಾಯಿಸಲು ಹೋಗಬೇಡಿ. ರಾಜ್ಯ, ವಿಶ್ವವಿದ್ಯಾಲಯಗಳು, ವಿದ್ಯಾರ್ಥಿಗಳ ಹಿತವನ್ನು ಗಮನದಲ್ಲಿಟ್ಟುಕೊಂಡು ನಿರ್ಧಾರ ಕೈಗೊಳ್ಳುತ್ತೇವೆ’ ಎಂದರು.
ಈ ವಿಷಯದಲ್ಲಿ ಯಾವುದೇ ವೈಯಕ್ತಿಕ ಅಜೆಂಡಾ ಇಲ್ಲ. ವಿದ್ಯಾರ್ಥಿಗಳ ಭವಿಷ್ಯ ನಮ್ಮ ಆದ್ಯತೆಯಾಗಿದೆ. ಹಿರಿತನ ಹಾಗೂ ನಿವೃತ್ತಿ ಸೌಲಭ್ಯದ ಚಿಂತೆಯಿಂದಾಗಿ ಮಂಡ್ಯ ಮತ್ತು ಚಾಮರಾಜನಗರಕ್ಕೆ ಸ್ಥಳಾಂತರಗೊಳ್ಳಲು ಪ್ರಾಧ್ಯಾಪಕರು ಸಿದ್ಧರಿಲ್ಲ. ಈ ಪ್ರದೇಶಗಳ ಪೋಷಕರು ತಮ್ಮ ಮಕ್ಕಳನ್ನು ಮೈಸೂರಿಗೆ ಓದಲು ಕಳುಹಿಸಲು ಹೆಮ್ಮೆಪಡುತ್ತಾರೆ. ನಮಗೆ ಬಂದಿರುವ ಶಿಫಾರಸ್ಸುಗಳ ಬಗ್ಗೆ ಚರ್ಚಿಸುತ್ತೇವೆ ಮತ್ತು ಸಂಪುಟ ಸಭೆಯಲ್ಲಿ ಮಂಡಿಸುತ್ತೇವೆ. ನಂತರ ನಿಮಗೆ ಮಾಹಿತಿ ನೀಡುತ್ತೇವೆ ಎಂದು ತಿಳಿಸಿದರು.
ಈ ಹಿಂದೆ ಹೊಸ ವಿವಿಗಳಿಗೆ ಸಂಬಂಧಿಸಿದ ಕಾನೂನಿನಡಿ ಪ್ರತಿ ವಿಶ್ವವಿದ್ಯಾಲಯಕ್ಕೆ ಕೇವಲ 2 ಕೋಟಿ ರೂ. ಮಂಜೂರು ಮಾಡಲಾಗಿತ್ತು ಮತ್ತು ನಿವೇಶನ ನೀಡಿರಲಿಲ್ಲ. ಮೈಸೂರು ವಿವಿಗೆ ಆದ್ಯತೆ ನೀಡಿದ್ದರಿಂದ ಮಂಡ್ಯ, ಚಾಮರಾಜನಗರ ವಿವಿಗಳಲ್ಲಿ ಪ್ರವೇಶ ಕುಸಿತಕ್ಕೆ ಕಾರಣವಾಯಿತು. ಈ ವಿಷಯದ ಬಗ್ಗೆ ಆಂತರಿಕ ವರದಿಯನ್ನು ಸಿದ್ಧಪಡಿಸಿ ಮುಖ್ಯಮಂತ್ರಿಗೆ ನೀಡಲಾಗಿದೆ. ಬಳಿಕ ನನ್ನ ಅಧ್ಯಕ್ಷತೆಯಲ್ಲಿ ಸಚಿವ ಸಂಪುಟ ಸಮಿತಿಯನ್ನು ರಚಿಸಲಾಯಿತು. ನಾವು ಶಿಫಾರಸುಗಳನ್ನು ಪರಿಶೀಲಿಸಿ ಚರ್ಚಿಸಿದ್ದೇವೆ. ಆದರೆ, ನಾವು ಇನ್ನೂ ಮುಖ್ಯಮಂತ್ರಿಗೆ ವಿವರಣೆ ನೀಡಿಲ್ಲ ಎಂದರು.
ನಾವು ಅವರಿಗೆ ಅಗತ್ಯ ಮಾಹಿತಿಯನ್ನು ಒದಗಿಸಿದ ನಂತರ, ಈ ವಿಷಯವನ್ನು ಸಚಿವ ಸಂಪುಟ ಸಭೆಯಲ್ಲಿ ಮಂಡಿಸುತ್ತೇವೆ ಮತ್ತು ನಂತರ ಸಾರ್ವಜನಿಕರೊಂದಿಗೆ ವಿವರಗಳನ್ನು ಹಂಚಿಕೊಳ್ಳುತ್ತೇವೆ’ ಎಂದು ಶಿವಕುಮಾರ್ ಹೇಳಿದರು.