ಹೊಸದಿಗಂತ ಡಿಜಿಟಲ್ ಡೆಸ್ಕ್:
ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದಲ್ಲಿ ವಿಐಪಿ ಸೌಲಭ್ಯಕ್ಕೆ ಸಂಬಂಧಿಸಿದಂತೆ ನ್ಯಾಯಾಲಯಕ್ಕೆ ಹಾಜರಾಗದ ಅಖಿಲ ಭಾರತ ಅಣ್ಣಾ ದ್ರಾವಿಡ ಮುನ್ನೇತ್ರ ಕಳಗಂ (ಎಐಎಡಿಎಂಕೆ) ನಾಯಕಿ ವಿ.ಕೆ.ಶಶಿಕಲಾ ನಟರಾಜನ್ ಮತ್ತು ಇಳವರಸಿ ವಿರುದ್ಧ ಬೆಂಗಳೂರಿನ ವಿಶೇಷ ಲೋಕಾಯುಕ್ತ ನ್ಯಾಯಾಲಯ ಜಾಮೀನು ರಹಿತ ವಾರೆಂಟ್ ಜಾರಿ ಮಾಡಿದೆ. ಶಶಿಕಲಾ ಶ್ಯೂರಿಟಿಗಳಿಗೂ ಕೂಡ ಕೋರ್ಟ್ ನೋಟಿಸ್ ಜಾರಿ ಮಾಡಿದೆ.
ಅಕ್ರಮ ಆಸ್ತಿ ಗಳಿಕೆ ಪ್ರಕರಣದಲ್ಲಿ ಶಶಿಕಲಾ ಮತ್ತು ಇಳವರಸಿ ಜೈಲಿನಲ್ಲಿದ್ದಾಗ ಬೆಂಗಳೂರಿನ ಪರಪ್ಪನ ಅಗ್ರಹಾರದಲ್ಲಿ ಐಷಾರಾಮಿ ಸೌಲಭ್ಯಗಳನ್ನು ಪಡೆಯಲು ಜೈಲು ಅಧಿಕಾರಿಗಳಿಗೆ ಲಂಚ ನೀಡಿದ್ದರು ಎಂದು ಆರೋಪಿಸಲಾಗಿತ್ತು. ಈ ಕುರಿತು ಲೋಕಾಯುಕ್ತ ಅಧಿಕಾರಿಗಳು ಆರೋಪಪಟ್ಟಿ ದಾಖಲಿಸಲಾಗಿತ್ತು. ಜೈಲಾಧಿಕಾರಿಗಳ ವಿರುದ್ಧದ ಪ್ರಕರಣವನ್ನು ಹೈಕೋರ್ಟ್ ರದ್ದುಪಡಿಸಿದ ಬೆನ್ನಲ್ಲೇ ತಮ್ಮ ವಿರುದ್ಧದ ಪ್ರಕರಣವನ್ನೂ ರದ್ದುಗೊಳಿಸುವಂತೆ ಕೋರಿ ಶಶಿಕಲಾ ಹೈಕೋರ್ಟ್ನಲ್ಲಿ ಅರ್ಜಿ ಸಲ್ಲಿಸಿದ್ದರು.
ಐಷಾರಾಮಿ ಸೌಲಭ್ಯ ಪಡೆದುದರ ಅರ್ಜಿ ವಿಚಾರಣೆ ನಿನ್ನೆ ನಡೆದಿದ್ದು, ಶಶಿಕಲಾ ಗೈರಾಗಿದ್ದರು. ಈ ಹಿನ್ನೆಲೆಯಲ್ಲಿ ಜಾಮೀನು ರಹಿತ ವಾರೆಂಟ್ ಜಾರಿ ಮಾಡಲಾಗಿದೆ. ಇದೀಗ ಪ್ರಕರಣದ ವಿಚಾರಣೆಯನ್ನು ಮುಂದಿನ ತಿಂಗಳು ಅಕ್ಟೋಬರ್ 5ಕ್ಕೆ ಮುಂದೂಡಲಾಗಿದೆ.
ಅಕ್ರಮ ಆಸ್ತಿ ಗಳಿಕೆ ಪ್ರಕರಣದಲ್ಲಿ ಶಸಿಕಲಾ ಶಿಕ್ಷೆಗೊಳಗಾಗಿ ನಾಲ್ಕು ವರ್ಷಗಳ ಕಾಲ ಬೆಂಗಳೂರು ಜೈಲಿನಲ್ಲಿದ್ದರು. ಇದೇ ಪ್ರಕರಣದಲ್ಲಿ ಇಳವರಸಿ ಕೂಡ ನಾಲ್ಕನೇ ಆರೋಪಿಯಾಗಿ ಜೈಲು ಶಿಕ್ಷೆಗೆ ಒಳಗಾಗಿದ್ದರು. ಈ ಸಂದರ್ಭದಲ್ಲಿ ಐಶಾರಾಮಿ ಸೌಲಭ್ಯ ಪಡೆದಿರುವುದರ ಬಗ್ಗೆ ಆರೋಪವಿದೆ.