ಹೊಸದಿಗಂತ ವರದಿ, ಶಿರಸಿ:
ಬಿಜೆಪಿ ಟಿಕೆಟ್ ಕೈ ತಪ್ಪಿದ ಹಿನ್ನೆಲೆಯಲ್ಲಿ ಅಸಮಾಧಾನಗೊಂದ ಹೊಸದುರ್ಗ ಶಾಸಕ ಗೂಳಿಹಟ್ಟಿ ಶೇಖರ್ ಗುರುವಾರ ವಿಧಾನಸಭಾಧ್ಯಕ್ಷ ವಿಶ್ವೇಶ್ವರ ಹೆಗಡೆ ಕಾಗೇರಿ ಅವರಿಗೆ ತಮ್ಮ ಶಾಸಕತ್ವಕ್ಕೆ ರಾಜೀನಾಮೆ ಸಲ್ಲಿಸಿದರು.
ಗುರುವಾರ ರಾತ್ರಿ 8.30ಕ್ಕೆ ಶಿರಸಿಯ ಸ್ಪೀಕರ್ ಕಚೇರಿಗೆ ಆಗಮಿಸಿದ ಗೂಳಿಹಟ್ಟಿ ಶೇಖರ್, ತಮ್ಮ ಶಾಸಕ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದು, ಬಿಜೆಪಿ ಪಕ್ಷ ತೊರೆಯುವುದಾಗಿ ತಿಳಿಸಿದರು. ಈ ಹಿಂದೆ ಹೊಸದುರ್ಗದಿಂದ ಎರಡು ಬಾರಿ ಶಾಸಕರಾಗಿ ಆಯ್ಕೆಯಾಗಿದ್ದರು.
ಮಂಗಳವಾರ ಬಿಡುಗಡೆಯಾದ ಬಿಜೆಪಿ ಅಭ್ಯರ್ಥಿಗಳ ಮೊದಲ ಪಟ್ಟಿಯಲ್ಲಿ ತಮಗೆ ಹೊಸದುರ್ಗ ವಿಧಾನಸಭಾ ಕ್ಷೇತ್ರದ ಟಿಕೆಟ್ ಕೈ ತಪ್ಪಿದರಿಂದ ಅಸಮಾಧಾನಗೊಂಡಿರುವ ಶಾಸಕ ಗೂಳಿಹಟ್ಟಿ ಶೇಖರ್ ಪಕ್ಷ ತೊರೆಯುವುದಾಗಿ ಘೋಷಿಸಿದ್ದರು.
ಬುಧವಾರ ತಮ್ಮ ಆಪ್ತರು ಹಾಗೂ ಬೆಂಬಲಿಗರ ಜೊತೆ ಸಭೆ ನಡೆಸಿದ್ದ ಗೂಳಿಹಟ್ಟಿ, ಬಂಡಾಯ ಅಥವಾ ಜನಾರ್ದನ ರೆಡ್ಡಿ ನೇತೃತ್ವದ ಕಲ್ಯಾಣ ರಾಜ್ಯ ಪ್ರಗತಿ ಪಕ್ಷದಿಂದ ಸ್ಪರ್ಧೆ ಮಾಡುವುದಾಗಿ ತಿಳಿಸಿದ್ದರು.
ಈ ಮೂಲಕ ಬಿಜೆಪಿ ಅತೃಪ್ತರ ಬಂಡಾಯ ಇನ್ನಷ್ಟು ಉಲ್ಬಣಿಸಿದಂತಾಗಿದೆ.