ಹೊಸದಿಗಂತ ವರದಿ ಸೋಮವಾರಪೇಟೆ:
ಕೊಡಗಿನ ಬಿಜೆಪಿ ಭದ್ರಕೋಟೆಯಲ್ಲಿ ಕಮಲ ಮತ್ತೆ ಅರಳಲಿದೆ ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ವಿಶ್ವಾಸ ವ್ಯಕ್ತಪಡಿಸಿದರು. ಚುನಾವಣಾ ಪ್ರಚಾರಕ್ಕಾಗಿ ಕೊಡಗು ಜಿಲ್ಲೆಗೆ ಹೊಂದಿಕೊಂಡಂತಿರುವ ಅರಕಲಗೂಡಿಗೆ ಆಗಮಿಸಿ ದೊಡ್ಡಮಠಕ್ಕೆ ಭೇಟಿ ನೀಡಿದ ಸಂದರ್ಭ ಮಾಧ್ಯಮದೊಂದಿಗೆ ಅವರು ಮಾತನಾಡಿದರು.
ಕೊಡಗು ಜಿಲ್ಲೆ ಬಿಜೆಪಿಯ ಭದ್ರಕೋಟೆ. ಇಲ್ಲಿನ ಜನತೆ ಪ್ರಜ್ಞಾವಂತರು. ಈ ಹಿಂದಿನಿಂದಲೂ ನಮ್ಮನ್ನು ಆಶೀರ್ವದಿಸುತ್ತಾ ಬಂದಿದ್ದಾರೆ. ಈ ಬಾರಿಯೂ ನಮ್ಮ ಪಕ್ಷದಿಂದ ಅಪ್ಪಚ್ಚು ರಂಜನ್ ಹಾಗೂ ಬೋಪಯ್ಯ ಸ್ಪರ್ಧಿಸಿದ್ದು ನಿಮ್ಮೆಲ್ಲರ ಆಶೀರ್ವಾದ ಅವರ ಮೇಲಿರಲಿ ಎಂದರು.
ರಾಜ್ಯದ ಜನತೆ ಬಿಜೆಪಿ ಪರವಾಗಿದ್ದಾರೆ. ಈ ಚುನಾವಣೆಯಲ್ಲಿ ಅತಿ ಹೆಚ್ಚಿನ ಸ್ಥಾನ ಗಳಿಸುವ ಮೂಲಕ ಮತ್ತೊಮ್ಮೆ ಈ ರಾಜ್ಯದ ಆಡಳಿತ ಚುಕ್ಕಾಣಿ ಹಿಡಿಯಲಿದ್ದೇವೆ ಎಂದು ಯಡಿಯೂರಪ್ಪ ವಿಶ್ವಾಸ ವ್ಯಕ್ತಪಡಿಸಿದರು. ಈ ಸಂದರ್ಭ ಮಾಜಿ ಶಾಸಕ ಎ. ಟಿ. ರಾಮಸ್ವಾಮಿ, ದೋಡ್ಡಮಠದ ಮಠಾಧೀಶರಾದ ಮಲ್ಲಿಕಾರ್ಜುನ ದೇವರು, ಬಸವಾಪಟ್ಟಣ ಮಠದ ಸ್ವತಂತ್ರ ಬಸವಲಿಂಗ ಸ್ವಾಮೀಜಿ, ಕಲ್ಲು ಮಠದ .ಮಹಾಂತ ಸ್ವಾಮೀಜಿ ಸೇರಿದಂತೆ ವಿವಿಧ ಮಠಾದೀಶರು, ಪಕ್ಷದ ಪ್ರಮುಖರು ಉಪಸ್ಥಿತರಿದ್ದರು.