ಹೊಸದಿಗಂತ ವರದಿ,ಚಿತ್ರದುರ್ಗ
ಸಂವಿಧಾನದಲ್ಲಿ ಧಾರ್ಮಿಕ ಹಕ್ಕು ನೀಡಲಾಗಿದೆ. ಮತಾಂತರ ಆಗಲೇ ಬಾರದು ಎಂದು ಎಲ್ಲೂ ಇಲ್ಲ. ಮತಾಂತರವು ಅಧಿಕೃತವಾಗಿರಬೇಕು. ಆಮಿಷ ಹಾಗೂ ಬಲವಂತದ ಮತಾಂತರಕ್ಕೆ ಕಡಿವಾಣ ಹಾಕಲಾಗುವುದು ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ಹೇಳಿದರು.
ನಗರದ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳ ಕಚೇರಿಯಲ್ಲಿ ಬುಧವಾರ ಜಿಲ್ಲೆಯ ಕಾನೂನು ಸುವ್ಯವಸ್ಥೆ ಬಗ್ಗೆ ಹಿರಿಯ ಪೊಲೀಸ್ ಅಧಿಕಾರಿಗಳೊಂದಿಗೆ ಸಭೆ ನಡೆಸಿ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮತಾಂತರವಾಗುವ ಬಗ್ಗೆ ಜಿಲ್ಲಾಧಿಕಾರಿಗಳಿಗೆ ೩೦ ದಿನಗಳ ಮೊದಲು ಅರ್ಜಿ ನೀಡಬೇಕು. ಮತಾಂತರ ಮಾಡಿಸುವವರು ಕೂಡ ಮಾಹಿತಿ ನೀಡಬೇಕು. ಜಿಲ್ಲಾಧಿಕಾರಿಗಳು ಕೂಲಂಕುಷವಾಗಿ ವಿಚಾರಣೆ ನಡೆಸುವರು. ಯಾವುದೇ ಆಮಿಷ, ಬಲವಂತಕ್ಕೆ ಒಳಗಾಗಿಲ್ಲ ಎಂದು ಕಂಡು ಬಂದರೆ ಮತಾಂತರಕ್ಕೆ ಜಿಲ್ಲಾಧಿಕಾರಿ ಒಪ್ಪಿಗೆ ನೀಡುವರು ಎಂದರು.
ಈ ಮಾಹಿತಿಯನ್ನು ತಹಶೀಲ್ದಾರ್, ಸಮಾಜ ಕಲ್ಯಾಣ, ಹಿಂದುಳಿದ ವರ್ಗಗಳು ಸೇರಿದಂತೆ ಇತರೆ ಇಲಾಖೆ ಅಧಿಕಾರಿಗಳಿಗೆ ನೀಡಲಾಗುವುದು. ಮತಾಂತರವಾದ ವ್ಯಕ್ತಿ ಪರಿಶಿಷ್ಟ ಜಾತಿ ಅಥವಾ ಪರಿಶಿಷ್ಟ ಪಂಗಡಕ್ಕೆ ಸೇರಿದ್ದರೆ ಮೂಲ ಜಾತಿಯಲ್ಲಿ ಪಡೆಯುತ್ತಿದ್ದ ಸೌಲಭ್ಯಗಳನ್ನು ಕಳೆದುಕೊಳ್ಳುತ್ತಾರೆ. ಇದು ಸರ್ಕಾರಿ ನೌಕರರ ಮುಂಬಡ್ತಿಗೂ ಅನ್ವಯವಾಗಲಿದೆ. ಕಾನೂನಿನಲ್ಲಿ ಈ ಎಲ್ಲಾ ಅಂಶಗಳನ್ನೂ ಸೇರಿಸಲಾಗಿದೆ. ಮತಾಂತರವಾದ ಧರ್ಮಕ್ಕೆ ಸಿಗುವ ಸರ್ಕಾರಿ ಸೌಲಭ್ಯಗಳು ಮತಾಂತರವಾದವರಿಗೆ ದೊರೆಯಲಿವೆ ಎಂದು ಹೇಳಿದರು.
ಚಿತ್ರದುರ್ಗ ಜಿಲ್ಲೆಯಲ್ಲಿ ಬಲವಂತದ ಮತಾಂತರಕ್ಕೆ ಸಂಬಂಧಿಸಿದಂತೆ ಮೂರು ಪ್ರಕರಣಗಳು ದಾಖಲಾಗಿವೆ. ಹೊಸ ಕಾಯಿದೆ ಪ್ರಕಾರ ಮುಂದಿನ ದಿನಗಳಲ್ಲಿ ಹೆಚ್ಚಿನ ಪ್ರಕರಣಗಳು ದಾಖಲಾಗಲಿವೆ. ಮತಾಂತರಕ್ಕೆ ಕಡಿವಾಣ ಹಾಕುವ ನಿಟ್ಟಿನಲ್ಲಿ ಪೊಲೀಸ್ ಇಲಾಖೆಗೆ ನಿರ್ದೇಶನ ನೀಡಲಾಗಿದ್ದು, ಹೊಸ ಕಾಯಿದೆ ಪ್ರಕಾರ ವಿಶೇಷವಾಗಿ ಕಾರ್ಯಾಚರಣೆ ಮಾಡುವಂತೆ ಸೂಚಿಸಲಾಗಿದೆ ಎಂದರು.
ರಾಜ್ಯದ ಉಳಿದೆಡೆಗೆ ಹೋಲಿಸಿದರೆ ಚಿತ್ರದುರ್ಗ ಜಿಲ್ಲೆಯಲ್ಲಿ ಮತಾಂತರದ ಪ್ರಮಾಣ ಹೆಚ್ಚು. ಈ ಕುರಿತು ಸಂಬಂಧಪಟ್ಟವರು ದೂರು ನೀಡಿದರೆ ಕ್ರಮ ಕೈಗೊಳ್ಳಲಾಗುತ್ತದೆ. ಜಿಲ್ಲೆಯಲ್ಲಿ ಮತಾಂತರ ಪ್ರಮಾಣ ಹೆಚ್ಚಾಗಿರುವುದರ ಕುರಿತು ಸಮಾಜ ಕಲ್ಯಾಣ ಇಲಾಖೆ ಆರ್ಥಿಕ ಹಾಗೂ ಸಾಮಾಜಿಕ ಸಮೀಕ್ಷೆ ನಡೆಸಬೇಕು ಎಂದು ಗೃಹ ಸಚಿವ ಅರಗ ಜ್ಞಾನೇಂದ್ರ ಅಭಿಪ್ರಾಯಪಟ್ಟರು.
ಜಿಲ್ಲೆಯಲ್ಲಿ ಮಸೀದಿ, ಮಂದಿರಗಳ ಮೈಕ್ಗೆ ಸಂಬಂಧಿಸಿದಂತೆ ಈಗಾಗಲೇ ೧೬೩ ಪರವಾನಗಿಗಳನ್ನು ಪೊಲೀಸ್ ಅಧಿಕಾರಿಗಳು ನೀಡಿದ್ದಾರೆ. ೧೨೨ ಮಸೀದಿ, ೨೪ ದೇವಸ್ಥಾನ, ೧೬ ಚರ್ಚ್ಗಳಿಗೆ ಪರವಾನಗಿ ನೀಡಲಾಗಿದೆ. ಹಿಜಾಬ್ ಸಂಬಂಧ ಯಾವುದೇ ಘರ್ಷಣೆಯಿಲ್ಲದೇ ವಿದ್ಯಾರ್ಥಿಗಳು ವ್ಯಾಸಂಗ ಮಾಡುತ್ತಿದ್ದಾರೆ. ಅಕ್ರಮ ಕಸಾಯಿಖಾನೆಗಳು ಶೂನ್ಯವಾಗಬೇಕು. ಯಾವುದೇ ಕಾರಣಕ್ಕೂ ನಡೆಯಬಾರದು. ಇದು ಕಟ್ಟುನಿಟ್ಟಾಗಿ ಜಾರಿಗೆ ಬರಲಿದೆ ಎಂದು ಹೇಳಿದರು.
ಜಿಲ್ಲೆಯಲ್ಲಿ ಮಟ್ಕಾ, ಇಸ್ಪೀಟು ದಂಧೆ ಇದ್ದು, ಆಯಾ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪೊಲೀಸರು ಕಡಿವಾಣ ಹಾಕಲಿದ್ದಾರೆ. ಅಧಿಕೃತವಾಗಿ ಚರ್ಚ್ ಎಂದು ಘೋಷಿಸಿದ ಸ್ಥಳಗಳಲ್ಲಿ ಮಾತ್ರ ಸಾಮೂಹಿಕ ಪ್ರಾರ್ಥನೆಗೆ ಅವಕಾಶವಿದೆ. ಖಾಸಗಿ ಮನೆಗಳಲ್ಲಿ ಸಾಮೂಹಿಕ ಪ್ರಾರ್ಥನೆ ನಡೆಸುವ ಹಾಗಿಲ್ಲ. ಚರ್ಚ್ಗಳಲ್ಲಿ ನಡೆಯುವ ಪ್ರಾರ್ಥನೆಗೆ ಸಾರ್ವಜನಿಕರು ಸೇರಲು ಅವಕಾಶವಿದೆ. ಬಲವಂತದ ಮತಾಂತರದ ಬಗ್ಗೆ ದೂರು ಕಂಡುಬಂದರೆ ಪೊಲೀಸ್ ಅಧಿಕಾರಿಗಳು ಪರಿಶೀಲನೆ ನಡೆಸುವರು ಎಂದರು.
ಜಿಲ್ಲೆಯ ರಾಷ್ಟ್ರೀಯ ಹೆದ್ದಾರಿಗಳಲ್ಲಿ ಸಂಭವಿಸುವ ಅಪಘಾತಗಳಲ್ಲಿ ವಾರ್ಷಿಕವಾಗಿ ಸರಾಸರಿ ೪೦೦ ಜನರು ಮರಣ ಹೊಂದುತ್ತಿದ್ದಾರೆ. ಜಿಲ್ಲೆಯ ಬಹುತೇಕ ಠಾಣಾ ವ್ಯಾಪ್ತಿಗಳಲ್ಲಿ ಅಪಘಾತ ಹಾಗೂ ಹಿಟ್ ಅಂಡ್ ರನ್ ಕೇಸುಗಳ ಸಂಖ್ಯೆ ಹೆಚ್ಚಾಗಿದೆ. ಪದೇ ಪದೇ ಅಪಘಾತ ಸಂಭವಿಸುವ ಪ್ರದೇಶಗಳನ್ನು ಪೊಲೀಸ್ ಇಲಾಖೆಯಿಂದ ಗುರುತಿಸುವ ಕೆಲಸವಾಗುತ್ತಿದೆ. ಅಪಘಾತ ನಿಯಂತ್ರಣಕ್ಕೆ ತಜ್ಞರೊಂದಿಗೆ ಸಮಾಲೋಚನೆ ನಡೆಸಲಾಗುವುದು. ಇದರ ಬಗ್ಗೆ ಸರ್ಕಾರ ಗಂಭೀರವಾಗಿ ಪರಿಗಣಿಸಿದೆ. ಕೇಂದ್ರ ಸರ್ಕಾರದ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಅಧಿಕಾರಿಗಳೊಂದಿಗೆ ಮಾತುಕತೆ ನಡೆಸಲಾಗುವುದು ಎಂದು ಹೇಳಿದರು.
ಚಿತ್ರದುರ್ಗ ಜಿಲ್ಲಾ ವ್ಯಾಪ್ತಿಯಲ್ಲಿ ಶಾಂತಿ ಸುವ್ಯವಸ್ಥೆ ತೃಪ್ತಿಕರವಾಗಿದೆ. ಪೊಲೀಸ್ ಅಧಿಕಾರಿಗಳು ಹೊಣೆಗಾರಿಕೆಯಿಂದ ಉತ್ತಮವಾಗಿ ಕಾರ್ಯನಿರ್ವಹಿಸುತ್ತಿದ್ದಾರೆ ಎಂದು ಸಚಿವರು ಮೆಚ್ಚುಗೆ ವ್ಯಕ್ತಪಡಿಸಿದರು. ಈ ಸಂದರ್ಭದಲ್ಲಿ ದಾವಣಗೆರೆ ಪೂರ್ವವಲಯ ಐಜಿಪಿ ತ್ಯಾಗರಾಜ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ಪರಶುರಾಮ್, ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಎಸ್.ಜೆ.ಕುಮಾರಸ್ವಾಮಿ ಸೇರಿದಂತೆ ಮತ್ತಿತರರು ಹಾಜರಿದ್ದರು.