ಮಡಿಕೇರಿ: ತಾಯಿ-ಶಿಶು ಮರಣ ತಡೆಗಟ್ಟಲು ಜನಜಾಗೃತಿ ಮೂಡಿಸುವಂತೆ ಡಿಸಿ ಸೂಚನೆ

ಹೊಸದಿಗಂತ ವರದಿ, ಮಡಿಕೇರಿ:
ಜಿಲ್ಲೆಯಲ್ಲಿ ಕ್ಷಯರೋಗ ನಿಯಂತ್ರಣ ಹಾಗೂ ತಾಯಿ ಮತ್ತು ಶಿಶು ಮರಣ ತಡೆಯುವಲ್ಲಿ ಹೆಚ್ಚಿನ ಜಾಗೃತಿ ಕಾರ್ಯಕ್ರಮ ಹಮ್ಮಿಕೊಳ್ಳುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಡಾ.ಬಿ.ಸಿ.ಸತೀಶ್ ನಿರ್ದೇಶನ ನೀಡಿದ್ದಾರೆ.
ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಕ್ಷಯರೋಗ ನಿಯಂತ್ರಣ, ತಾಯಿ ಮತ್ತು ಶಿಶು ಮರಣ ತಡೆಯುವಲ್ಲಿ ಕೈಗೊಂಡಿರುವ ಕ್ರಮಗಳ ಬಗ್ಗೆ ಮಾಹಿತಿ ಪಡೆದು ಅವರು ಮಾತನಾಡಿದರು.
ಜಿಲ್ಲೆಯಲ್ಲಿ 92 ಕ್ಷಯ ರೋಗ ಪ್ರಕರಣಗಳು ಕಂಡುಬಂದಿದ್ದು, ಕ್ಷಯರೋಗಕ್ಕೆ ಕಾರಣಗಳು ಮತ್ತಿತರ ಬಗ್ಗೆ ಮಾಹಿತಿ ಸಂಗ್ರಹಿಸಿ ಕ್ಷಯರೋಗಿಗಳಿಗೆ ಅಗತ್ಯ ಪೌಷ್ಠಿಕ ಆಹಾರ ವಿತರಣೆ ಹಾಗೂ ಔಷಧೋಪಚಾರ ಕಲ್ಪಿಸುವಂತೆ ಐಟಿಡಿಪಿ ಮತ್ತು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ನಿರ್ದೇಶನ ನೀಡಿದರು. ಕ್ಷಯರೋಗ ಬರದಂತೆ ಗಮನಹರಿಸುವುದು ಅತಿಮುಖ್ಯ. ಆ ನಿಟ್ಟಿನಲ್ಲಿ ಮಾಹಿತಿ ಶಿಕ್ಷಣ, ಮಾರ್ಗದರ್ಶನದ ಮೂಲಕ ಹೆಚ್ಚಿನ ಅರಿವು ಮೂಡಿಸುವಂತೆ ಅವರು ಸಲಹೆ ಮಾಡಿದರು. ಕ್ಷಯರೋಗ ಜಿಲ್ಲಾ ನಿಯಂತ್ರಣಾಧಿಕಾರಿ ಡಾ.ಆನಂದ್ ಅವರು ಮಾಹಿತಿ ನೀಡಿ, ಜಿಲ್ಲೆಯ ಹಾಡಿಗಳಲ್ಲಿ ಹಾಗೂ ಲೈನ್‍ಮನೆಗಳಲ್ಲಿ ವಾಸ ಮಾಡುತ್ತಿರುವವರಲ್ಲಿ ಹೆಚ್ಚಾಗಿ ಕ್ಷಯರೋಗ ಕಂಡು ಬರುತ್ತಿದೆ. 15 ದಿನಕ್ಕೂ ಹೆಚ್ಚು ಅವಧಿಯಲ್ಲಿ ಕೆಮ್ಮು ಇದ್ದಲ್ಲಿ ಕಡ್ಡಾಯವಾಗಿ ಕಫ ಪರೀಕ್ಷೆ ಮಾಡಿಸಿಕೊಳ್ಳಬೇಕು. 2025ರೊಳಗೆ ಕ್ಷಯರೋಗ ಪ್ರಕರಣಗಳು ಇಲ್ಲದಂತೆ ಮಾಡಬೇಕು ಎಂಬುದು ಸರ್ಕಾರದ ಆಶಯವಾಗಿದೆ ಎಂದು ತಿಳಿಸಿದರು.
ತಾಯಿ ಮತ್ತು ಶಿಶು ಮರಣ ಸಂಬಂಧಿಸಿದಂತೆ ಮಾಹಿತಿ ನೀಡಿದ ಡಾ.ಗೋಪಿನಾಥ್ ಅವರು ಜಿಲ್ಲೆಯಲ್ಲಿ ಏಪ್ರಿಲ್, ಮೇ ತಿಂಗಳಲ್ಲಿ ಮೂವರು ತಾಯಂದಿರು ನಾನಾ ಕಾರಣಗಳಿಂದ ಮೃತಪಟ್ಟಿದ್ದಾರೆ. ಹಾಗೆಯೇ ಏಪ್ರಿಲ್ ಮತ್ತು ಮೇ ತಿಂಗಳಲ್ಲಿ 9 ಶಿಶು ಮರಣವಾಗಿದೆ ಎಂದರು.
ತಾಯಿ ಮತ್ತು ಶಿಶು ಮರಣಕ್ಕೆ ಕಾರಣಗಳು ಮತ್ತಿತರ ಆಡಿಟ್ ವರದಿ ಬಗ್ಗೆ ಮಾಹಿತಿ ಪಡೆದ ಜಿಲ್ಲಾಧಿಕಾರಿ ಅವರು, ತಾಯಿ ಮತ್ತು ಶಿಶು ಮರಣ ಆಗದಂತೆ ಮುನ್ನೆಚ್ಚರಿಕೆ ವಹಿಸುವ ನಿಟ್ಟಿನಲ್ಲಿ ‘ಎಸ್‍ಒಪಿ’ ಮಾದರಿ ಸಿದ್ದಪಡಿಸಿ ಎಲ್ಲಾ ಆಸ್ಪತ್ರೆಗಳಿಗೆ ಒದಗಿಸುವಂತೆ ಜಿಲ್ಲಾಧಿಕಾರಿ ನಿರ್ದೇಶನ ನೀಡಿದರು.
ಜಿ.ಪಂ.ಸಿಇಒ ಭಂವರ್ ಸಿಂಗ್ ಮೀನಾ ಅವರು, ಶಿಶು ಮತ್ತು ತಾಯಿ ಮರಣ ತಡೆಯುವುದು, ಹಾಗೆಯೇ ಕ್ಷಯರೋಗ ನಿಯಂತ್ರಣ ಮತ್ತಿತರ ಬಗ್ಗೆ ಹೆಚ್ಚಿನ ಜಾಗೃತಿ ಮೂಡಿಸುವಂತೆ ಸೂಚಿಸಿದರು.
ಜಿಲ್ಲಾಸ್ಪತ್ರೆಯ ಸರ್ಜನ್ ಡಾ.ವಿಶಾಲ್ ಕುಮಾರ್, ಪ್ರಸೂತಿ ತಜ್ಞ ಡಾ.ಹರ್ಷ, ಮಕ್ಕಳ ತಜ್ಞ ಡಾ.ಕುಶ್ವಂತ್ ಕೋಳಿಬೈಲು, ಅರವಳಿಕೆ ವಿಭಾಗದ ಮುಖ್ಯಸ್ಥ ಡಾ.ಪ್ರದೀಪ್, ತಾಲೂಕು ಆರೋಗ್ಯ ಅಧಿಕಾರಿಗಳಾದ ಡಾ.ಯತಿರಾಜು, ಡಾ.ಚೇತನ್, ಡಾ.ಶ್ರೀನಿವಾಸ್, ಜಿಲ್ಲಾ ಆಯೂಷ್ ಅಧಿಕಾರಿ ಡಾ.ರೇಣುಕಾದೇವಿ, ಪೌರಾಯುಕ್ತ ಎಸ್.ವಿ.ರಾಮದಾಸ್, ಖಾಸಗಿ ಆಸ್ಪತ್ರೆಗಳ ವೈದ್ಯಾಧಿಕಾರಿಗಳು ಇತರರು ಇದ್ದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!