ಮಡಿಕೇರಿ: ಗಾಂಧೀಜಿ ಚಿತಾಭಸ್ಮ ಮೆರವಣಿಗೆಯೊಂದಿಗೆ ಹುತಾತ್ಮರ ದಿನ ಆಚರಣೆ

ದಿಗಂತ ವರದಿ ಮಡಿಕೇರಿ:

ಜಿಲ್ಲಾಡಳಿತ ಹಾಗೂ ಸರ್ವೋದಯ ಸಮಿತಿ ವತಿಯಿಂದ ಹುತಾತ್ಮರ ದಿನವನ್ನು ಭಾನುವಾರ ನಗರದಲ್ಲಿ ಶ್ರದ್ಧಾಭಕ್ತಿಯಿಂದ ಆಚರಿಸಲಾಯಿತು.
ನಗರದ ಜಿಲ್ಲಾಡಳಿತ ಭವನದ ಜಿಲ್ಲಾ ಖಜಾನೆಯಲ್ಲಿರಿಸಲಾದ ಮಹಾತ್ಮ ಗಾಂಧೀಜಿಯವರ ಚಿತಾಭಸ್ಮವನ್ನು ಹೊರತೆಗೆದು ಪುಷ್ಪಮಾಲೆಗಳಿಂದ ಶೃಂಗರಿಸಿ ಗೌರವ ಸಮರ್ಪಣೆ ಮಾಡಲಾಯಿತು.
ಜಿಲ್ಲಾಡಳಿತ ಹಾಗೂ ಸರ್ವೋದಯ ಸಮಿತಿ ಸದಸ್ಯರ ನೇತೃತ್ವದಲ್ಲಿ ಪೊಲೀಸ್ ಬ್ಯಾಂಡ್ ನೊಂದಿಗೆ ನಗರದ ಮಂಗೇರಿರ ಮುತ್ತಣ್ಣ ಹಾಗೂ ಜನರಲ್ ತಿಮ್ಮಯ್ಯ ವೃತ್ತದ ಮುಖ್ಯ ರಸ್ತೆ ಮೂಲಕ ಗಾಂಧೀಜಿಯವರ ಚಿತಾಭಸ್ಮವನ್ನು ಕೊಂಡೊಯ್ದು ಗಾಂಧಿ ಮಂಟಪದಲ್ಲಿರಿಸಿ ಗಾಂಧೀ ಪ್ರತಿಮೆಗೆ ಮಾಲಾರ್ಪಣೆ ಮಾಡಿ ಗೌರವ ನಮನ ಸಮರ್ಪಿಸಲಾಯಿತು.
ಇದೇ ವೇಳೆ ಪೊಲೀಸ್ ಇಲಾಖೆಯಿಂದ ಮೂರು ಸುತ್ತು ಕುಶಲತೋಪು ಹಾರಿಸುವ ಮೂಲಕ ರಾಷ್ಟ್ರಪಿತನಿಗೆ ಪೊಲೀಸ್ ಗೌರವಾರ್ಪಣೆ ಸಲ್ಲಿಸಲಾಯಿತು.
ಗಾಂಧಿ ಮಂಟಪದಲ್ಲಿ ಸರ್ವಧರ್ಮ ಪ್ರಾರ್ಥನೆ, ಗಾಂಧೀಜಿಯವರ ಮೆಚ್ಚಿನ ಭಜನಾ ಗಾಯನ ಕಾರ್ಯಕ್ರಮವನ್ನು ಸ್ಕೌಟ್ಸ್ ಮತ್ತು ಗೈಡ್ಸ್ ತಂಡದ ವಿದ್ಯಾರ್ಥಿಗಳು ನಡೆಸಿಕೊಟ್ಟರು, ಸರ್ವಧರ್ಮ ಗುರುಗಳಿಂದ ಭಗವದ್ಗೀತೆ, ಬೈಬಲ್, ಕುರಾನ್ ಸಂದೇಶಗಳ ನಡೆಯಿತು.
ಸರ್ಕಾರಿ ಗೌರವಾರ್ಪಣೆ ಹಾಗೂ ಮೌನಾಚರಣೆಯ ನಂತರ ಮೆರವಣಿಗೆಯಲ್ಲಿ ಗಾಂಧೀಜಿ ಚಿತಾಭಸ್ಮವನ್ನು ಒಯ್ದು ಮತ್ತೆ ಜಿಲ್ಲಾ ಖಜಾನೆಯಲ್ಲಿಟ್ಟು ಭದ್ರಗೊಳಿಸಲಾಯಿತು.
ಮಾಜಿ ಸಚಿವ ಎಂ.ಸಿ.ನಾಣಯ್ಯ, ಜಿಲ್ಲಾಧಿಕಾರಿ ಡಾ.ಬಿ.ಸಿ.ಸತೀಶ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕ್ಷಮಾ ಮಿಶ್ರಾ, ಸರ್ವೋದಯ ಸಮಿತಿ ಅಧ್ಯಕ್ಷ ಅಂಬೆಕಲ್ಲು ಕುಶಾಲಪ್ಪ, ನಿಕಟಪೂರ್ವ ಅಧ್ಯಕ್ಷ ಟಿ.ಪಿ.ರಮೇಶ್, ಕನ್ನಡ ಸಾಹಿತ್ಯ ಪರಿಷತ್ ಜಿಲ್ಲಾ ಅಧ್ಯಕ್ಷ ಕೇಶವ ಕಾಮತ್, ಸರ್ವೋದಯ ಸಮಿತಿ ಪ್ರಧಾನ ಕಾರ್ಯದರ್ಶಿ ಮುನೀರ್ ಅಹ್ಮದ್, ಸದಸ್ಯರಾದ ತೋರೇರ ಮುದ್ದಯ್ಯ, ಕೆ.ಟಿ.ಬೇಬಿ ಮ್ಯಾಥ್ಯು, ಅಂಬೆಕಲ್ಲು ನವೀನ್, ಲಿಯಾಕತ್ ಅಲಿ, ವಾಸುದೇವ, ಸುಬ್ರಮಣಿ, ಸ್ವರ್ಣಲತಾ, ಪ್ರೇಮಾ, ಡಿವೈಎಸ್‍ಪಿ ಗಜೇಂದ್ರ ಪ್ರಸಾದ್, ಜಿಲ್ಲಾ ಖಜಾನಾಧಿಕಾರಿ ಪದ್ಮಜಾ, ಸಹಾಯಕ ಖಜಾನಾಧಿಕಾರಿ ಕಲ್ಪನಾ, ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪ ನಿರ್ದೇಶಕ ವೇದಮೂರ್ತಿ, ತಹಶೀಲ್ದಾರ್ ಮಹೇಶ್, ನಗರಸಭೆ ಪೌರಾಯುಕ್ತ ಎಸ್.ವಿ.ರಾಮದಾಸ್, ಜಿಲ್ಲಾ ಕಾರ್ಮಿಕ ಅಧಿಕಾರಿ ಅನಿಲ್ ಬಗಟಿ, ಪೊಲೀಸ್ ಇನ್ಸ್ಪೆಕ್ಟರ್’ಗಳಾದ ವೆಂಕಟೇಶ್, ಮೇದಪ್ಪ, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕಿ ಕೆ.ಟಿ.ದರ್ಶನಾ, ವಾರ್ತಾಧಿಕಾರಿ ಚಿನ್ನಸ್ವಾಮಿ, ಮಣಜೂರು ಮಂಜುನಾಥ್, ಸ್ಕೌಟ್ಸ್ ಮತ್ತು ಗೈಡ್ಸ್’ನ ಜಿಮ್ಮಿ ಸಿಕ್ವೇರಾ, ದಮಯಂತಿ, ತೆನ್ನೀರಾ ಮೈನಾ, ಜಿ.ಸಿ.ರಮೇಶ್, ಸಿದ್ದರಾಜು ಬೆಳ್ಳಯ್ಯ ಮತ್ತಿತರರು ಇದ್ದರು.
ಸ್ಮಾರಕ ನಿರ್ಮಾಣ: ಬಳಿಕ ಮಾತನಾಡಿದ ಮಾಜಿ ಸಚಿವ ಎಂ.ಸಿ.ನಾಣಯ್ಯ ಅವರು ರಾಷ್ಟ್ರಪಿತ ಮಹಾತ್ಮ ಗಾಂಧೀಜಿ ಅವರ ಚಿತಾಭಸ್ಮವು ಕೊಡಗು ಜಿಲ್ಲಾ ಕೇಂದ್ರ ಮಡಿಕೇರಿಯಲ್ಲಿ ಇರುವುದು ಇಡೀ ರಾಷ್ಟ್ರದಲ್ಲೇ ವಿಶೇಷವಾಗಿದೆ. ಆ ದಿಸೆಯಲ್ಲಿ ನಗರದ ಗಾಂಧೀ ಮಂಟಪದಲ್ಲಿ ಚಿತಾಭಸ್ಮವಿಟ್ಟು ‘ರಾಜ್‍ಘಾಟ್’ ಮಾದರಿಯಲ್ಲಿ ‘ಗಾಂಧಿ ಸ್ಮಾರಕ ನಿರ್ಮಾಣ’ ಮಾಡುವಂತಾಗಬೇಕು ಎಂದು ಸಲಹೆ ಮಾಡಿದರು.
ಈಗಾಗಲೇ ನಗರದ ಫೀಲ್ಡ್ ಮಾರ್ಷಲ್ ಕಾರ್ಯಪ್ಪ ವೃತ್ತದ ಬಳಿ ‘ಗಾಂಧಿ ಭವನ’ ನಿರ್ಮಾಣ ಪೂರ್ಣಗೊಳ್ಳುವ ಹಂತದಲ್ಲಿದೆ. ಆ ದಿಸೆಯಲ್ಲಿ ಗಾಂಧಿ ಭವನದಲ್ಲಿ ಗಾಂಧೀಜಿ ವಿಚಾರಧಾರೆಗಳ ಕುರಿತು ಕಾರ್ಯಕ್ರಮಗಳು, ಗ್ರಂಥಾಲಯ ಮತ್ತಿತರ ಚಟುವಟಿಕೆಗಳು ಒಳಗೊಂಡಿರುತ್ತದೆ ಎಂದು ಅವರು ತಿಳಿಸಿದರು.
ಸರ್ವೋದಯ ಸಮಿತಿ ನಿಕಟ ಪೂರ್ವ ಅಧ್ಯಕ್ಷ ಟಿ.ಪಿ.ರಮೇಶ್ ಮಾತನಾಡಿ, ಜಿಲ್ಲಾಡಳಿತ ಹಾಗೂ ಸರ್ವೋದಯ ಸಮಿತಿ ವತಿಯಿಂದ ಹಲವು ವರ್ಷಗಳಿಂದ ಹುತಾತ್ಮರ ದಿನಾಚರಣೆ ಆಯೋಜಿಸಿಕೊಂಡು ಬರಲಾಗುತ್ತಿದೆ. ಆ ನಿಟ್ಟಿನಲ್ಲಿ ಗಾಂಧಿ ಮಂಟಪದಲ್ಲಿ ಮಹಾತ್ಮ ಗಾಂಧೀಜಿಯವರ ಸ್ಮಾರಕ ನಿರ್ಮಾಣ ಮಾಡುವ ನಿಟ್ಟಿನಲ್ಲಿ ಈಗಾಗಲೇ ನೀಲನಕ್ಷೆ ತಯಾರಿಸಲಾಗಿದೆ. ಜಾಗ ಸಂಬಂಧ ಸರ್ವೆ ಕಾರ್ಯ ಆಗಿದೆ ಎಂದರು.
ಶಾಸಕ ಕೆ.ಜಿ.ಬೋಪಯ್ಯ ಅವರ ನೇತೃತ್ವದಲ್ಲಿ ಈ ಹಿಂದೆ ಮುಖ್ಯಮಂತ್ರಿ ಆಗಿದ್ದ ಬಿ.ಎಸ್.ಯಡಿಯೂರಪ್ಪ ಅವರನ್ನು ಭೇಟಿ ಮಾಡಿ ಒಂದು ಕೋಟಿ ರೂ. ಅನುದಾನ ಬಿಡುಗಡೆಗೆ ಮನವಿ ಮಾಡಲಾಗಿದ್ದು, ಆ ಸಂದರ್ಭದಲ್ಲಿ 50 ಲಕ್ಷ ರೂ ಬಿಡುಗಡೆಗೆ ಆದೇಶ ಮಾಡಿದ್ದರು. ಸದ್ಯ ಗಾಂಧಿ ಮಂಟಪದಲ್ಲಿನ 35 ಸೆಂಟ್ಸ್ ಜಾಗ ಕನ್ನಡ ಮತ್ತು ಸಂಸ್ಕೃತಿ ಇಲಾಖೆಗೆ ಹಸ್ತಾಂತರವಾದ ನಂತರ ಜಿಲ್ಲಾ ಉಸ್ತುವಾರಿ ಸಚಿವರು ಹಾಗೂ ಜಿಲ್ಲೆಯ ಶಾಸಕರ ನೇತೃತ್ವದಲ್ಲಿ ಕನ್ನಡ ಮತ್ತು ಸಂಸ್ಕೃತಿ ಸಚಿವರನ್ನು ಭೇಟಿ ಮಾಡಿ ಅನುದಾನ ಬಿಡುಗಡೆಗೆ ಕೋರಲಾಗುವುದು ಎಂದು ಟಿ.ಪಿ.ರಮೇಶ್ ಅವರು ತಿಳಿಸಿದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!