ಹೊಸದಿಗಂತ ವರದಿ ವಿಜಯಪುರ:
ಈ ವರ್ಷ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ ಅತಿ ಹೆಚ್ಚು ಸ್ಥಾನ ಪಡೆದು,
ಪ್ರಧಾನಿ ನರೇಂದ್ರ ಮೋದಿ ಅವರ ಮಾರ್ಗದರ್ಶನದಲ್ಲಿ ಬಸವರಾಜ ಬೊಮ್ಮಾಯಿ ನೇತೃತ್ವದ ಸರ್ಕಾರ ಮತ್ತೆ ಅಧಿಕಾರಕ್ಕೆ ಬರಲಿದೆ ಎಂದು ಮಹಾರಾಷ್ಟ್ರ ಉಪ ಮುಖ್ಯಮಂತ್ರಿ ದೇವೇಂದ್ರ ಫಡ್ನವಿಸ್ ಹೇಳಿದರು.
ನಗರದಲ್ಲಿ ಬುಧವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಡಬಲ್ ಇಂಜೀನ್ ಸರ್ಕಾರ ಅಭಿವೃದ್ಧಿ ಮಾಡಿದ್ದು, ಎಲ್ಲೆಡೆ ಮೂಲ ಸೌಕರ್ಯ ಕಲ್ಪಿಸಲಾಗಿದೆ. ಬಡವರ ಕಲ್ಯಾಣವನ್ನು ಪ್ರಧಾನಿ ಮೋದಿ ಮಾಡಿದ್ದಾರೆ ಎಂದರು.
ಕರ್ನಾಟಕ ಸರ್ಕಾರ ವಿದ್ಯಾರ್ಥಿಗಳಿಗಾಗಿ ವಿದ್ಯಾರ್ಥಿ ವೇತನ, ಬಿಪಿಎಲ್ ಕಾರ್ಡ್ ಮಹಿಳೆಯರಿಗೆ ಎರಡು ಸಾವಿರ ರೂ. ನೀಡಿದೆ. ಅಲ್ಲದೆ ಕೇಂದ್ರ ಸರ್ಕಾರ ನೀರಾವರಿಗೆ ಹಣ ನೀಡಿದ್ದು, ಎಸ್ಸಿ, ಎಸ್ಟಿ ಲಿಂಗಾಯತ ಒಕ್ಕಲಿಗ ಹಾಗೂ ಇತರ ಸಮಾಜಗಳಿಗೆ ಸಾಮಾಜಿಕ ನ್ಯಾಯ ಕೊಡಲು ಬದ್ದವಾಗಿದೆ. ಆದರೆ ಕಾಂಗ್ರೆಸ್ ಮುಸ್ಲಿಂಮರ ಓಲೈಕೆ ಮಾಡುತ್ತಿದೆ ಎಂದು ದೂರಿದರು.
ನಾವು ವೋಟ್ ಬ್ಯಾಂಕ್ ರಾಜಕಾರಣ ಮಾಡಲ್ಲ. ನಗರ ಕ್ಷೇತ್ರದ ಅಭ್ಯರ್ಥಿ ಬಸನಗೌಡ ಪಾಟೀಲ ಯತ್ನಾಳರ ಮೇಲೆ ಜನರಿಗೆ ಪ್ರೀತಿಯಿದೆ. ಅಲ್ಲದೆ ಕರ್ನಾಟಕದ ಜನ ಬಿಜೆಪಿ ಜೊತೆಗಿದ್ದಾರೆ ಎಂಬ ವಿಶ್ವಾಸವಿದೆ ಎಂದರು.
40 ಪರ್ಸೆಂಟ್ ಕಮೀಷನ್ ಭ್ರಷ್ಟಾಚಾರ ಆರೋಪ ವಿಚಾರವಾಗಿ, ಈ ಕುರಿತು ಯಾವುದೇ ಸಾಕ್ಷಿ ಕಾಂಗ್ರೆಸ್ ನವರು ನೀಡಿಲ್ಲ. ಮಹಾರಾಷ್ಟ್ರದಲ್ಲಿ ಯಾವುದೇ ಕಾರಣಕ್ಕೂ ಬದಲಾವಣೆ ಇಲ್ಲ. ಗಡಿ ಭಾಗದ ಕನ್ನಡಿಗರಿಗೆ ಆರೋಗ್ಯ ವಿಮಾ ಯೋಜನೆ ಮಾಡಿದ್ದು, ಹಿಂದಿನ ಸರ್ಕಾರ ಎಂದು ಹೇಳಿದರು.
ಚುನಾವಣೆ ಸಮಯದಲ್ಲಿ ಗಡಿ ವಿವಾದದ ಮಾತು ಬೇಡ. ಎಂಇಎಸ್ ನಿಲುವು ನಮ್ಮ ಪಕ್ಷದ ನಿಲುವಲ್ಲ ಎಂದು ಸ್ಪಷ್ಟಪಡಿಸಿದರು.
ಬಿಜೆಪಿ ಜಿಲ್ಲಾಧ್ಯಕ್ಷ ಆರ್.ಎಸ್. ಪಾಟೀಲ ಕೂಚಬಾಳ, ಮುಖಂಡ ಚಂದ್ರಶೇಖರ ಕವಟಗಿ, ವಿಜಯ ಜೋಶಿ ಪತ್ರಿಕಾಗೋಷ್ಠಿಯಲ್ಲಿ ಇದ್ದರು.