ಹೊಸದಿಗಂತ ಡಿಜಿಟಲ್ ಡೆಸ್ಕ್:
ರಾಜ್ಯದಲ್ಲಿ ನಡೆಯುತ್ತಿರುವ ಮಹಿಷ ದಸರಾ ಆಚರಣೆ ಕುರಿತಾದ ಬೆಳವಣಿಗೆಗಳ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕಾ ಕ್ರಮವಾಗಿ ಉಡುಪಿ ಜಿಲ್ಲೆಯಲ್ಲಿ ಅ.14ರ ಬೆಳಗ್ಗೆ 6ರಿಂದ ಅ.15ರ ಸಂಜೆ 6ರ ತನಕ ಎರಡು ದಿನಗಳ ಕಾಲ ನಿಷೇಧಾಜ್ಞೆ ಜಾರಿ ಮಾಡಲಾಗಿದೆ.
ಈ ಬಗ್ಗೆ ಜಿಲ್ಲಾಧಿಕಾರಿ ಡಾ. ವಿದ್ಯಾಕುಮಾರಿ ಆದೇಶ ಹೊರಡಿಸಿದ್ದು, ಯಾವುದೇ ವ್ಯಕ್ತಿಯು ಈ ಆದೇಶವನ್ನು ಉಲ್ಲಂಘಿಸಿದಲ್ಲಿ ಅಂತಹವರ ವಿರುದ್ಧ ನಿಯಮಾನುಸಾರ ಕ್ರಿಮಿನಲ್ ಮೊಕದ್ದಮೆ ದಾಖಲಿಸಲು ಕ್ರಮಕೈಗೊಳ್ಳಲಾಗುವುದೆಂದು ಎಚ್ಚರಿಕೆ ನೀಡಿದ್ದಾರೆ.
ಈ ಸಂದರ್ಭದಲ್ಲಿ ಮಹಿಷಾ ದಸರಾ ಆಚರಣೆ ಪರ, ವಿರೋಧದದ ಬಗೆ, ಯಾವುದೇ ಪೋಸ್ಟ್, ಬ್ಯಾನರ್, ಬಂಟಿಂಗ್ ಅಳವಡಿಸುವುದು, ಪ್ರತಿಭಟನೆ, ಮೆರವಣಿಗೆ, ಅವಹೇಳನಕಾರಿಯಂತಹ ಯಾವುದೇ ಘೋಷಣೆಗಳು, ಭಾಷಣಗಳು ಪ್ರಕಟಣೆಗಳು, ಅವಾಚ್ಯ, ಶಬ್ದಗಳ ಬಳಕೆ, ಪ್ರಚೋದನಾಕಾರಿ ಭಾಷಣ, ಗಾಯನ ಇತ್ಯಾದಿ ಚಟುವಟಿಕೆಗಳನ್ನು ನಿಷೇಧಿಸಿದೆ.
ಶಸ್ತ್ರ, ಕತ್ತಿ, ಈಟಿ, ಬಂದೂಕುಗಳು, ಚಾಕು, ಕೋಲುಗಳು ಅಥವಾ ಲಾಠಿಗಳನ್ನು ಅಥವಾ ದೈಹಿಕ ಹಿಂಸೆಯನ್ನುಂಟು ಮಾಡುವ ಇತರ ಯಾವುದೇ ವಸ್ತುಗಳನ್ನು ಒಯ್ಯುವುದನ್ನು ನಿಷೇಧಿಸಿದೆ.
ಪಟಾಕಿ ಸಿಡಿಸುವುದು, ಸ್ಫೋಟಕಗಳನ್ನು ಒಯ್ಯುವುದನ್ನು ನಿಷೇಧಿಸಲಾಗಿದ್ದು, ಕಲ್ಲು, ಇತರ ಕ್ಷಿಪಣಿಗಳನ್ನು ಎಸೆಯುವ, ವೇಗದಿಂದ ಒಗೆಯುವ ಸಾಧನಗಳ ಅಥವಾ ಉಪಕರಣಗಳನ್ನು ಒಯ್ಯುವುದು, ಶೇಖರಿಸುವುದನ್ನು ಮತ್ತು ತಯಾರಿಸುವುದು ನಿಷೇಧಿಸಿದೆ.
ಪ್ರಚೋದಿಸಬಹುದಾದ ಬಹಿರಂಗ ಘೋಷಣೆ ಮಾಡುವುದು ಹಾಡು ಹಾಡುವುದು, ಸಂಗೀತ ನುಡಿಸುವುದು, ಆವೇಶಭರಿತ ಭಾಷಣ ಮಾಡುವುದು, ಚಿತ್ರಗಳನ್ನು, ಸಂಕೇತಗಳನ್ನು ಭಿತ್ತಿ ಪತ್ರಗಳನ್ನು ಅಥವಾ ಇತರೆ ಯಾವುದೇ ವಸ್ತು ಅಥವಾ ಪದಾರ್ಥಗಳನ್ನು ತಯಾರಿಸುವುದು, ಪದರ್ಶಿಸುವುದು ಅಥವಾ ಪ್ರಸಾರ ಮಾಡುವುದನ್ನು ಈ ಅವಧಿಯಲ್ಲಿ ನಿಷೇಧಿಸಲಾಗಿದೆ.