ಹೊಸದಿಗಂತ ಡಿಜಿಟಲ್ ಡೆಸ್ಕ್:
ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷ ಸರಳ ಬಹುಮತ ಪಡೆದಿದೆಯಾದರೂ ಸಿಎಂ ಆಯ್ಕೆ ತ್ರೀವ ಪೈಪೋಟಿ ನಡೆಯುತ್ತಿದ್ದು, ದೇಶದಲ್ಲೇ ಸದ್ದು ಮಾಡುತ್ತಿದೆ.
ರಾಜ್ಯದಲ್ಲಿ ಆಯ್ಕೆ ವಿಚಾರದಲ್ಲಿ ಒಮ್ಮತ ನಿರ್ಧಾರ ಬರದ ಕಾರಣ ದೆಹಲಿ ಅಂಗಳದಲ್ಲಿ ಆಯ್ಕೆ ಕಸರತ್ತು ನಡೆಯುತ್ತಿದ್ದು, ಡಿಕೆ ಶಿವಕುಮಾರ್ ಹಾಗೂ ಸಿದ್ದರಾಮಯ್ಯ ಖರ್ಗೆ ಜೊತೆಗೆ ಸಭೆ ನಡೆಸುತ್ತಿದ್ದಾರೆ.
ಈಗಾಗಲೇ ಡಿಕೆ ಶಿವಕುಮಾರ್ ಜೊತೆ ಸುಮಾರು 50 ನಿಮಿಷಗಳ ಕಾಲ ಮಲ್ಲಿಕಾರ್ಜುನ ಖರ್ಗೆ ಸಭೆ ನಡೆಸಿದ್ದಾರೆ. ಈ ವೇಳೆ ಡಿಕೆ ಶಿವಕುಮಾರ್ ಮುಖ್ಯಮಂತ್ರಿ ಸ್ಥಾನಕ್ಕೆ ಪಟ್ಟು ಹಿಡಿದ್ದಾರೆ.
ಕೊಡುವುದಾದರೆ ಮುಖ್ಯಮಂತ್ರಿ ಸ್ಥಾನ ಕೊಡಿ. ಇಲ್ಲದಿದ್ದರೆ ನಾನು ಶಾಸಕನಾಗಿಯೇ ಇರುತ್ತೇನೆ. ಯಾವುದೇ ಸ್ಥಾನ ಬೇಡ. ಪಕ್ಷಕ್ಕಾಗಿ ನೀವೂ ಕೂಡ ಕೆಲಸ ಮಾಡಿದ್ದೀರಿ. ನೀವೇ ಮುಖ್ಯಮಂತ್ರಿ ಜವಾಬ್ದಾರಿ ವಹಿಸಿಕೊಳ್ಳಿ ಎಂದು ಡಿಕೆ ಶಿವಕುಮಾರ್ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆಗೆ ಹೇಳಿದ್ದಾರೆ.
ಕಾಂಗ್ರೆಸ್ ಪಕ್ಷವನ್ನು ತಳಮಟ್ಟದಿಂದ ಕಟ್ಟಿದ್ದೇನೆ. ಪ್ರತಿ ಜಿಲ್ಲೆಯಲ್ಲಿ ಕಾರ್ಯಕರ್ತರನ್ನು ಸಂಘಟಿಸಿದ್ದೇನೆ. ಹಗಲು ರಾತ್ರಿ ಕೆಲಸ ಮಾಡಿದ್ದೇನೆ. ಇದರ ಫಲವಾಗಿ ಕಾಂಗ್ರೆಸ್ ಇಂದು ಅಭೂತಪೂರ್ವ ಗೆಲುವಿನೊಂದಿಗೆ ಅಧಿಕಾರಕ್ಕೆ ಬಂದಿದೆ. ಸಿದ್ದಾರಾಮಯ್ಯ ಪಕ್ಷಕ್ಕೆ ಬಂದ ಬಳಿಕ ಪಕ್ಷ ಸಂಘಟನೆ ಮಾಡಿಲ್ಲ. ಕಾಂಗ್ರೆಸ್ ಪಕ್ಷ ಸೇರಿಕೊಂಡ ಬಳಿಕ ಸಿದ್ದರಾಮಯ್ಯ ಅಧಿಕಾರ ಅನುಭವಿಸುತ್ತಿದ್ದಾರೆ. ಆದರೆ ಇದುವರೆಗೂ ನಾನು ಯಾವುದೇ ಆಕ್ಷೇಪ ಎತ್ತಿಲ್ಲ. ಮುಖ್ಯಮಂತ್ರಿಯಾಗಿ ಕೆಲಸ ಮಾಡಿದ್ದಾರೆ. ವಿಪಕ್ಷ ನಾಯಕನಾಗಿಯೂ ಕೆಲಸ ಮಾಡಿದ್ದಾರೆ. ಈ ಬಾರಿ ಸಿದ್ದರಾಮಯ್ಯಗೆ ಪಕ್ಷ ಸಂಘಟನೆಯ ಜವಾಬ್ದಾರಿ ನೀಡಿ ಎಂದು ಡಿಕೆ ಶಿವಕುಮಾರ್ ಹೇಳಿದ್ದಾರೆ.
ಕಾಂಗ್ರೆಸ್ ಸರ್ಕಾರದಲ್ಲಿ ಸ್ಥಾನ ಕೊಡುವುದಾದರೆ ನಂಗೆ ಸಿಎಂ ಸ್ಥಾನ ಕೊಡಿ, ಇಲ್ಲದಿದ್ದರೆ ಯಾವುದೇ ಸಚಿವ ಸ್ಥಾನ ಬೇಡ. ನಾನು ಶಾಸಕನಾಗಿ ಇರುತ್ತೇನೆ. ಪಕ್ಷಕ್ಕಾಗಿ ನೀವು ಕೆಲಸ ಮಾಡಿದ್ದೀರಿ. ಹೀಗಾಗಿ ನೀವೇ ಮುಖ್ಯಮಂತ್ರಿ ಸ್ಥಾನ ಅಲಂಕರಿಸಿ ಎಂದು ಖರ್ಗೆಗೆ ಹೇಳಿದ್ದಾರೆ.